International Yoga Day 2025: ರಾಜ್ಯಾದ್ಯಂತ ಯೋಗ ಸಂಭ್ರಮ, ವಿಧಾನಸೌಧದಲ್ಲಿ ಸಾವಿರಾರು ಜನರ ಯೋಗ ಪ್ರದರ್ಶನ!

ವಿಧಾನಸೌಧದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಪರಿಷತ್ ಸದಸ್ಯ ಶರವಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.;

Update: 2025-06-21 04:42 GMT

ಶನಿವಾರ ರಾಜ್ಯಾದ್ಯಂತ ಅಂತರರಾಷ್ಟ್ರೀಯ ಯೋಗ ದಿನಾಚರಣೆ (International Yoga Day 2025) ಅದ್ದೂರಿಯಾಗಿ ನೆರವೇರಿತು. "ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ದಿನಾಚರಣೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಪಾಲ್ಗೊಂಡು ಯೋಗದ ಮಹತ್ವವನ್ನು ಸಾರಿದರು.

ಬೆಂಗಳೂರಿನ ಹೃದಯಭಾಗದಲ್ಲಿರುವ ವಿಧಾನಸೌಧದ ಆವರಣದಲ್ಲಿ ಆಯುಷ್ ಇಲಾಖೆ ವತಿಯಿಂದ ಬೃಹತ್ ಯೋಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಂಜಾನೆ 6 ಗಂಟೆಯಿಂದಲೇ ಆರಂಭವಾದ ಈ ಕಾರ್ಯಕ್ರಮದಲ್ಲಿ ವಿವಿಧ ಯೋಗ ಸಂಘಟನೆಗಳ ಸದಸ್ಯರು ಮತ್ತು ಸಾವಿರಾರು ಯೋಗಪಟುಗಳು ಏಕಕಾಲಕ್ಕೆ ಯೋಗ ಪ್ರದರ್ಶನ ಮಾಡಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಪರಿಷತ್ ಸದಸ್ಯ ಶರವಣ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಸ್ಯಾಂಡಲ್‌ವುಡ್ ತಾರೆಯರಾದ ನಟಿ ಸಾನ್ಯಾ ಅಯ್ಯರ್, ನಟರಾದ ಶೈನ್ ಶೆಟ್ಟಿ ಮತ್ತು ಅನಿರುದ್ಧ್ ಕೂಡ ಯೋಗಾಸನಗಳನ್ನು ಅಭ್ಯಾಸ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಬೆಂಗಳೂರಿನಾದ್ಯಂತ ಯೋಗದ ಅಲೆ

ವಿಧಾನಸೌಧ ಮಾತ್ರವಲ್ಲದೆ, ಬೆಂಗಳೂರಿನ ಹಲವೆಡೆ ಯೋಗ ಪ್ರದರ್ಶನಗಳು ಗಮನ ಸೆಳೆದವು. ಅರಮನೆ ಮೈದಾನದ ತ್ರಿಪುರವಾಸಿನಿ ಆವರಣದಲ್ಲಿ ಬೃಹತ್ ಯೋಗ ಪ್ರದರ್ಶನ ನಡೆಯಿತು. ಇಲ್ಲಿ ಸುಮಾರು 6 ಸಾವಿರ ಜನರು ಏಕಕಾಲದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಯೋಗದ ಶಕ್ತಿಯನ್ನು ಪ್ರದರ್ಶಿಸಿದರು. ಸಚಿವರು ಮತ್ತು ಖ್ಯಾತ ಸೆಲೆಬ್ರಿಟಿಗಳು ಈ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಜನರಿಗೆ ಯೋಗದ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿದರು.

ಮೈಸೂರು ಮತ್ತು ಬೆಳಗಾವಿಯಲ್ಲಿ ಯೋಗ ದಿನಾಚರಣೆ

ಮೈಸೂರಿನ ಐತಿಹಾಸಿಕ ಅರಮನೆ ಆವರಣದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅದ್ಧೂರಿಯಾಗಿ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ. ಮಹದೇವಪ್ಪ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಎಸ್ಪಿ ವಿಷ್ಣುವರ್ಧನ್, ಕಮಿಷನರ್ ಸೀಮಾ ಲಾಟ್ಕರ್ ಸೇರಿದಂತೆ ಸಾವಿರಾರು ಯೋಗಪಟುಗಳು ಭಾಗವಹಿಸಿ ಯೋಗದ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದರು.

ಬೆಳಗಾವಿಯ ಸುವರ್ಣ ಸೌಧದ ಬ್ಲ್ಯಾಂಕ್ವೆಟ್ ಹಾಲ್‌ನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕಾಲೇಜು ಮತ್ತು ಶಾಲಾ ಮಕ್ಕಳು ಉತ್ಸಾಹದಿಂದ ಯೋಗ ಪ್ರದರ್ಶನ ಮಾಡಿದರು. ಸಂಸದ ಜಗದೀಶ್ ಶೆಟ್ಟರ್, ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿ ಮಕ್ಕಳಿಗೆ ಪ್ರೋತ್ಸಾಹ ನೀಡಿದರು.

Tags:    

Similar News