ಕರ್ನಾಟಕದಲ್ಲಿ ಜೈವಿಕ ಇಂಧನ ಹೂಡಿಕೆಗೆ ಹೊಸ ನೀತಿ; 1 ಲಕ್ಷ ಕೋಟಿ ರೂಪಾಯಿ ಬಂಡವಾಳ ನಿರೀಕ್ಷೆ

ಜೈವಿಕ ಇಂಧನ ಕ್ಷೇತ್ರದಲ್ಲಿ ತೊಡಗಿರುವ ಉದ್ದಿಮೆದಾರರು ಹಾಗೂ ಕೈಗಾರಿಕೆಗಳಿಗೆ ಭೇಟಿ ನೀಡಿ ಚರ್ಚಿಸಲಾಗಿದೆ. ಪ್ರಸ್ತುತ ಸಾಲಿನಲ್ಲಿ ಮಂಡಳಿಗೆ ಹೆಚ್ಚಿನ ಅನುದಾನ ಅಗತ್ಯವಿದ್ದು ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಅಧ್ಯಕ್ಷ ಎಸ್.ಈ. ಸುಧೀಂದ್ರ ಸಿಎಂಗೆ ಮನವಿ ಸಲ್ಲಿಸಿದರು.;

Update: 2025-06-28 08:59 GMT

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್‌.ಈ. ಸುಧೀಂದ್ರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. 

ಕರ್ನಾಟಕ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣ ನಿರ್ಮಿಸಲು ರಾಜ್ಯ ಸರ್ಕಾರ ನೂತನ 'ಕರ್ನಾಟಕ ರಾಜ್ಯ ಜೈವಿಕ ಇಂಧನ ನೀತಿ' ರಚಿಸುತ್ತಿದೆ. ಈ ನೀತಿಗೆ ಸರ್ಕಾರದ ಅನುಮೋದನೆ ದೊರೆತು ಘೋಷಣೆಯಾದರೆ, ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂ.ಗೂ ಅಧಿಕ ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಈ. ಸುಧೀಂದ್ರ ಮಾಹಿತಿ ನೀಡಿದ್ದಾರೆ.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಶನಿವಾರ (ಜೂನ್ 28) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಅವರು, 2024 ಮತ್ತು 2025ನೇ ಸಾಲಿನಲ್ಲಿ ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಯೋಜನೆಗಳ ವರದಿಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ, ಮಂಡಳಿ ಕೈಗೊಂಡಿರುವ ಯೋಜನೆಗಳು, ಆಯೋಜಿಸಲಾಗಿರುವ ಕಾರ್ಯಕ್ರಮಗಳು, ವಿವಿಧ ವಿಶ್ವವಿದ್ಯಾಲಯಗಳು, ಜೈವಿಕ ಇಂಧನ ಕ್ಷೇತ್ರದಲ್ಲಿ ತೊಡಗಿರುವ ಉದ್ದಿಮೆದಾರರು ಹಾಗೂ ಕೈಗಾರಿಕೆಗಳಿಗೆ ಭೇಟಿ ನೀಡಿ ಚರ್ಚಿಸಲಾಗಿರುವ ಹಲವು ವಾಸ್ತವಿಕ ಸ್ಥಿತಿಗತಿಗಳನ್ನು ಮುಖ್ಯಮಂತ್ರಿಗಳಿಗೆ ವಿವರಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಮಂಡಳಿಗೆ ಹೆಚ್ಚಿನ ಅನುದಾನದ ಅಗತ್ಯತೆ ಇದ್ದು, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಯಿತು.

'ಗ್ರೀನ್ ಹೈಡ್ರೋಜನ್' ಮತ್ತು ಇಂಧನ ಉತ್ಪಾದನೆ

ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ 'ನೂತನ ಜೈವಿಕ ಇಂಧನ ನೀತಿ'ಯಿಂದ ಈ ಕ್ಷೇತ್ರದಲ್ಲಿ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಕಂಪ್ರೆಸ್ಟ್ ಬಯೋಗ್ಯಾಸ್, ಬಯೋಮಾಸ್ ಆಧಾರಿತ ಗ್ರೀನ್ ಹೈಡ್ರೋಜನ್‌ಗಳು ಆಟೋಮೊಬೈಲ್ ಕಂಪನಿಗಳಲ್ಲಿನ ವಿದ್ಯುತ್ ಬೇಡಿಕೆಗಳನ್ನು ಸುಧಾರಿಸುವಲ್ಲಿ ನೆರವಾಗಲಿವೆ. ರಾಜ್ಯದಲ್ಲಿ ಜೈವಿಕ ಇಂಧನ ಉತ್ಪಾದನೆಗೆ ಅವಶ್ಯಕವಾದ ಹೊಂಗೆ, ಬೇವು, ಹಿಪ್ಪೆ, ಸೀಮರೂಬ ಮರಗಳಿಂದ ಬೀಜಗಳನ್ನು ಸಂಗ್ರಹಿಸುವ ಕುರಿತು ಉಪ ಸಮಿತಿ ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಇತ್ತೀಚೆಗೆ ತಿಳಿಸಲಾಗಿದೆ. ಈ ಮೂಲಕ, ರಾಜ್ಯವು ಹಸಿರು ಇಂಧನ ಉತ್ಪಾದನೆಯಲ್ಲಿ ಪ್ರಮುಖ ಹೆಜ್ಜೆ ಇಡಲು ಸಿದ್ಧತೆ ನಡೆಸಿದೆ. 

Tags:    

Similar News