ವಸತಿ ಯೋಜನೆಯಲ್ಲಿ ಅವ್ಯವಹಾರ : ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ದೂರು
ಶಾಸಕ ಬಿ.ಆರ್.ಪಾಟೀಲ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಾರ್ಯದರ್ಶಿ ಸರ್ಪರಾಜ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ನಡೆಸಿದ ಸಂಭಾಷಣೆಯ ಆಡಿಯೋ ಮೂಲಕ ಭ್ರಷ್ಟಾಚಾರ ಬಯಲಾಗಿದೆ.;
ರಾಜ್ಯ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದಕ್ಕೆ ಪಕ್ಷದ ಶಾಸಕರು ಬಹಿರಂಗವಾಗಿ ನೀಡುತ್ತಿರುವ ಹೇಳಿಕೆಗಳೇ ಸಾಕ್ಷಿಯಾಗಿವೆ. ಭ್ರಷ್ಟಾಚಾರದ ಕುರಿತು ನೀಡುತ್ತಿರುವ ಹೇಳಿಕೆಗಳು ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿವೆ. ರಾಜ್ಯ ನೀತಿ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್ ವಸತಿ ಇಲಾಖೆಯಲ್ಲಿನ ಭ್ರಷ್ಟಾಚಾರ ಕುರಿತು ನೀಡಿರುವ ಹೇಳಿಕೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿ ಸಂಚಲನ ಸೃಷ್ಟಿಸಿವೆ. ಈ ನಡುವೆ, ಇದೀಗ ಇದು ಲೋಕಾಯುಕ್ತ ಸಂಸ್ಥೆಯ ಮೆಟ್ಟಿಲೇರಿದೆ.
ನೈಜ ಹೋರಾಟಗಾರರ ವೇದಿಕೆ ಅಧ್ಯಕ್ಷ ಎಚ್.ಎಂ.ವೆಂಕಟೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿ, ಬಿ.ಆರ್.ಪಾಟೀಲ್ ಹೇಳಿಕೆ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ವಸತಿ ಇಲಾಖೆಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಬಿ.ಆರ್.ಪಾಟೀಲ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕಾರ್ಯದರ್ಶಿ ಸರ್ಪರಾಜ್ ಖಾನ್ ಅವರೊಂದಿಗೆ ದೂರವಾಣಿ ಮೂಲಕ ನಡೆಸಿದ ಸಂಭಾಷಣೆಯ ಆಡಿಯೋ ರಾಜ್ಯದಲ್ಲಿ ಸಂಚಲನವನ್ನುಂಟು ಮಾಡಿದೆ. ರಾಜೀವ್ಗಾಂಧಿ ವಸತಿ ನಿಗಮದಿಂದ ದುರ್ಬಲ ವರ್ಗದವರಿಗೆ, ವಸತಿ ಹೀನರಿಗೆ ಸರ್ಕಾರ ಹಂಚಿಕೆ ಮಾಡುವ ಮನೆಗಳನ್ನು ಪಡೆದುಕೊಳ್ಳಲು ಹಣ ಕೊಟ್ಟರೆ ಮಾತ್ರ ಹಂಚಿಕೆಯಾಗುತ್ತದೆ ಎಂಬ ವಿಚಾರವು ಆಘಾತಕಾರಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಿ.ಆರ್.ಪಾಟೀಲ್ ಹೇಳಿಕೆಯು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭ್ರಷ್ಟ ಆಡಳಿತ ವ್ಯವಸ್ಥೆಗೆ ಕೈಗನ್ನಡಿಯಾಗಿದೆ. ಸರ್ಕಾರದಲ್ಲಿ ಹಣ ನೀಡಿದವರಿಗೆ ಮಾತ್ರ ಮನೆ ಹಂಚಿಕೆಯಾಗುತ್ತದೆ ಎಂಬ ಹೇಳಿಕೆಯು ವಸತಿ ಇಲಾಕೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಜನಪ್ರತಿನಿಯಾಗಿರುವ ಮತ್ತು ನೀತಿ ಆಯೋಗದ ಉಪಾಧ್ಯಕ್ಷರ ಹುದ್ದೆಯಲ್ಲಿರುವ ಅವರ ಹೇಳಿಕೆಯು ಗಂಭೀರ ಸ್ವರೂಪದ್ದಾಗಿದೆ. ರಾಜ್ಯದಲ್ಲಿ ಅವರ ಹೇಳಿಕೆ ತೀವ್ರ ಸಂಚಲನ ಸೃಷ್ಟಿಯಾಗಿದ್ದರೂ ಸರ್ಕಾರ ಈ ಬಗ್ಗೆ ತನಿಖೆಗೆ ಮುಂದಾಗಿಲ್ಲ ಎಂದು ತಿಳಿಸಿದ್ದಾರೆ.
ಭ್ರಷ್ಟಾಚಾರವನ್ನು ತಡೆಗಟ್ಟಬೇಕಾದ ಲೋಕಾಯುಕ್ತ ಸಂಸ್ಥೆಯು ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲಿಸಿ ತನಿಖೆಗೆ ಮುಂದಾಗದಿರುವುದು ದುರುದೃಷ್ಟಕರ ಸಂಗತಿಯಾಗಿದೆ. ಜನಪ್ರತಿನಿಧಿಗಳು ಮತ್ತು ಸರ್ಕಾರದ ಅಧಿಕಾರಿಗಳು ಕರ್ತವ್ಯ ಲೋಪ ಮತ್ತು ಲಂಚ ಪ್ರಕರಣದಲ್ಲಿ ಭಾಗಿಯಾಗಿದ್ದಾಗ ಅವರನ್ನು ತನಿಖೆಗೊಳಪಡಿಸಿ ಸತ್ಯಾಸತ್ಯತೆಯನ್ನು ಹೊರಗೆ ತಂದು ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಲೋಕಾಯುಕ್ತ ಸಂಸ್ಥೆಯನ್ನು ಆರಂಭಿಸಲಾಗಿದೆ. ಆದ್ದರಿಂದ ಸರ್ಕಾರದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆ ಲೋಕಾಯುಕ್ತ ಸಂಸ್ಥೆಯು ಮಧ್ಯ ಪ್ರವೇಶಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.