ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಲು ನಿರ್ಬಂಧ: ಸರ್ಕಾರಿ ಆದೇಶಕ್ಕೆ ನೀಡಿದ್ದ ತಡೆ ತೆರವಿಗೆ ಹೈಕೋರ್ಟ್ ನಕಾರ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಅಂಗವಾಗಿ ರಾಜ್ಯಾದ್ಯಂತ ಪಥಸಂಚಲನ ನಡೆಸಲು ಉದ್ದೇಶಿಸಿದ್ದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಅಕ್ಟೋಬರ್ 18, 2025ರಂದು ಒಂದು ಆದೇಶ ಹೊರಡಿಸಿತ್ತು. ಇದರ ಅನ್ವಯ, ಯಾವುದೇ ಸಾರ್ವಜನಿಕ ಸ್ಥಳದಲ್ಲಿ 10ಕ್ಕೂ ಹೆಚ್ಚು ಮಂದಿ ಸೇರಿ ಕಾರ್ಯಕ್ರಮ ನಡೆಸುವುದಾದರೆ, ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿತ್ತು.

Update: 2025-11-06 06:20 GMT
Click the Play button to listen to article

ರಸ್ತೆ, ಉದ್ಯಾನ, ಆಟದ ಮೈದಾನ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಹೆಚ್ಚು ಮಂದಿ ಗುಂಪು ಸೇರುವುದನ್ನು "ಅಕ್ರಮ ಕೂಟ" ಎಂದು ಪರಿಗಣಿಸಿ, ಅನುಮತಿ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಲು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ನಿರಾಕರಿಸಿದೆ. ಈ ಮೂಲಕ, ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ್ ಮತ್ತು ಕೆ.ಬಿ. ಗೀತಾ ಅವರಿದ್ದ ವಿಭಾಗೀಯ ಪೀಠವು, ಮಧ್ಯಂತರ ಆದೇಶ ತೆರವು ಕೋರಿ ಏಕಸದಸ್ಯ ಪೀಠದ ಮುಂದೆಯೇ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದೆ ಎಂದು ತಿಳಿಸಿ, ಸರ್ಕಾರದ ಮೇಲ್ಮನವಿಯನ್ನು ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವದ ಅಂಗವಾಗಿ ರಾಜ್ಯಾದ್ಯಂತ ಪಥಸಂಚಲನ ನಡೆಸಲು ಉದ್ದೇಶಿಸಿದ್ದ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಅಕ್ಟೋಬರ್ 18, 2025ರಂದು ಒಂದು ಆದೇಶ ಹೊರಡಿಸಿತ್ತು. ಇದರ ಅನ್ವಯ, ಯಾವುದೇ ಸಾರ್ವಜನಿಕ ಸ್ಥಳದಲ್ಲಿ 10ಕ್ಕೂ ಹೆಚ್ಚು ಮಂದಿ ಸೇರಿ ಕಾರ್ಯಕ್ರಮ ನಡೆಸುವುದಾದರೆ, ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿತ್ತು.

ಈ ಆದೇಶವನ್ನು ಪ್ರಶ್ನಿಸಿ, ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ಮತ್ತು ವಿ ಕೇರ್ ಫೌಂಡೇಶನ್ ಹಾಗೂ ಇಬ್ಬರು ವ್ಯಕ್ತಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಆದೇಶವು ಸಂವಿಧಾನದ 19(1)(a) ಮತ್ತು 19(1)(b) ವಿಧಿಗಳ ಅಡಿಯಲ್ಲಿ ನೀಡಲಾದ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು. ಈ ವಾದವನ್ನು ಪುರಸ್ಕರಿಸಿದ್ದ ಏಕಸದಸ್ಯ ಪೀಠವು, ಅಕ್ಟೋಬರ್ 28ರಂದು ಸರ್ಕಾರಿ ಆದೇಶಕ್ಕೆ ಮಧ್ಯಂತರ ತಡೆ ನೀಡಿತ್ತು.

ಸರ್ಕಾರದ ವಾದ

ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ, ಸರ್ಕಾರವು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು ಸರ್ಕಾರದ ಪರ ವಾದ ಮಂಡಿಸಿ, "ಸಾರ್ವಜನಿಕ ಆಸ್ತಿಯನ್ನು ರಕ್ಷಿಸುವ ಸದುದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. ಇದು ನಾಗರಿಕರ ಹಕ್ಕುಗಳನ್ನು ಬಾಧಿಸುವುದಿಲ್ಲ. ರಸ್ತೆ, ಉದ್ಯಾನಗಳಲ್ಲಿ 10ಕ್ಕೂ ಹೆಚ್ಚು ಮಂದಿ ಅನುಮತಿ ಇಲ್ಲದೆ ಸೇರಿದರೆ, ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗುತ್ತದೆ" ಎಂದು ವಾದಿಸಿದ್ದರು.

ವಿಭಾಗೀಯ ಪೀಠವು ಸರ್ಕಾರದ ವಾದವನ್ನು ಮಾನ್ಯ ಮಾಡದೆ, ಏಕಸದಸ್ಯ ಪೀಠದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ. ಈ ಬೆಳವಣಿಗೆಯಿಂದ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ನಿರ್ಬಂಧಿಸಲು ಹೊರಟಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.

Tags:    

Similar News