Kpcc President Post | ಕೆಪಿಸಿಸಿ ಅಧ್ಯಕ್ಷ ಸ್ಥಾನ‌‌ ನಿಭಾಯಿಸಲು ಸಿದ್ಧ; ಪೈಪೋಟಿಗೆ ಸಜ್ಜಾದ ಈಶ್ವರ್ ಖಂಡ್ರೆ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಹೆಸರು ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಖಂಡ್ರೆ ಅವರ ಹೇಳಿಕೆ‌ ಮಹತ್ವ ಪಡೆದಿದೆ.;

Update: 2025-06-29 10:59 GMT

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನದ ಜವಾಬ್ದಾರಿ ನಿಭಾಯಿಸಲು ತಾನು ಸಿದ್ಧ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೇಳುವ ಮೂಲಕ, ತಾವೂ ಕೂಡ ಈ ಸ್ಥಾನದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಸೂಚಿಸಿದ್ದಾರೆ. 'ದ ಫೆಡರಲ್ ಕರ್ನಾಟಕ'ಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವುದಾಗಿ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ, ಖಂಡ್ರೆ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ. ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಬದಲಾಯಿಸಿ ಬೇರೆಯವರಿಗೆ ಪಕ್ಷದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡುವಂತೆ ರಾಜ್ಯದ ಕೆಲವು ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದಾರೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಡಿಕೆಶಿ ಬದಲಾವಣೆಯ ಕೂಗಿಗೆ ದನಿಗೂಡಿಸಿದ್ದು, ಈ ಕುರಿತು ಹೈಕಮಾಂಡ್ ಜೊತೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಆಕಾಂಕ್ಷಿಗಳ ಪಟ್ಟಿ ಮತ್ತು ಪ್ರಾದೇಶಿಕ ಸಮತೋಲನ

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಪ್ರಾದೇಶಿಕ ಮತ್ತು ಜಾತಿ ಸಮತೋಲನದ ಲೆಕ್ಕಾಚಾರವೂ ಇದೆ. ಅಹಿಂದ ವರ್ಗಗಳ ಪರವಾಗಿ ಸತೀಶ್ ಜಾರಕಿಹೊಳಿ ಅವರ ಹೆಸರು ಕೇಳಿಬರುತ್ತಿದ್ದರೆ, ವೀರಶೈವ ಹಾಗೂ ಇತರೆ ಮೇಲ್ವರ್ಗದವರ ಪರವಾಗಿ ಈಶ್ವರ ಖಂಡ್ರೆ ಅವರ ಹೆಸರು ಪ್ರಸ್ತಾಪವಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಮುಂಚೂಣಿಯಲ್ಲಿರುವ ಕುರಿತ ಪ್ರಶ್ನೆಗೆ ಖಂಡ್ರೆ, "ಈಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿಯಿಲ್ಲ. ಆದರೆ, ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸಲು ಸಿದ್ಧ" ಎಂದು ಹೇಳುವ ಮೂಲಕ, ತಾವೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. "ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಪಾಲಿಸುತ್ತೇನೆ" ಎಂದು ಈಶ್ವರ ಖಂಡ್ರೆ ತಮ್ಮ ನಿಲುವನ್ನು ಪುನರುಚ್ಚರಿಸಿದರು.

ಸಿಎಂ ಬದಲಾವಣೆ ಕುರಿತ ಡಿಕೆ ಶಿವಕುಮಾರ್ ಪ್ರಸ್ತಾಪಕ್ಕೆ ಪ್ರತಿಯಾಗಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಗೆ ಪಟ್ಟು ಹಿಡಿದಿದ್ದರು. ಅದರಲ್ಲೂ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಹೈಕಮಾಂಡ್ ಮಟ್ಟದಲ್ಲಿ ಸಕ್ರಿಯವಾಗಿ ಲಾಬಿ ನಡೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ನಾಯಕರು ಎಲ್ಲಾ ಆಯಾಮಗಳನ್ನು ಅಳೆದು ತೂಗಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 

Tags:    

Similar News