ಕೃಷ್ಣಾ ಜಲವಿವಾದ |ಅಂತಿಮ ತೀರ್ಪಿನ ಗೆಜೆಟ್ ಅಧಿಸೂಚನೆ ; ಕೇಂದ್ರದ ಮೇಲೆ ಒತ್ತಡ ಹೇರಲು ಶೀಘ್ರವೇ ಸರ್ವಪಕ್ಷ ಸಭೆ - ಸಿಎಂ
ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ರಾಜ್ಯದ ಪಾಲಿನ ನೀರನ್ನು ಪಡೆಯಲು ಅಗತ್ಯವಿರುವ ಕಾನೂನು ಕ್ರಮ ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.;
ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನಕ್ಕೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಂಬಂಧ ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೃಷ್ಣಾ ನ್ಯಾಯಾಧೀಕರಣ-2 ರ ಗೆಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ರಾಜ್ಯದ ಪಾಲಿನ ನೀರನ್ನು ಪಡೆಯಲು ಅಗತ್ಯವಿರುವ ಕಾನೂನು ಕ್ರಮ ಸೇರಿದಂತೆ ಎಲ್ಲಾ ಪ್ರಯತ್ನ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಗೆಜೆಟ್ ಅಧಿಸೂಚನೆ ಪ್ರಕಟ ಸೇರಿದಂತೆ 2011ರ ಸುಪ್ರೀಂಕೋರ್ಟ್ ಆದೇಶ ಮಾರ್ಪಡಿಸಲು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಯಿತು.
ನ್ಯಾಯಾಧೀಕರಣದ ಅಂತಿಮ ತೀರ್ಪು ಕೇಂದ್ರ ಸರ್ಕಾರದ ಗಜೆಟ್ ಅಧಿಸೂಚನೆಗೆ ಒಳಪಟ್ಟಿದೆ. ಈ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಇನ್ನೂ ಅಧಿಸೂಚನೆ ಪ್ರಕಟಿಸಿಲ್ಲ. ನ್ಯಾಯಾಧೀಕರಣದ ಅಂತಿಮ ತೀರ್ಪು ನೀಡಿದ ದಿನಾಂಕದಿಂದ ಇಂದಿಗೆ 15 ವರ್ಷಗಳೇ ಕಳೆದಿವೆ. ಉತ್ತರ ಕರ್ನಾಟಕದ ಯುಕೆಪಿ-3 ಯೋಜನೆ ಪ್ರದೇಶದ ರೈತರು ತಮ್ಮ ಪಾಲಿನ ನೀರು ಪಡೆಯಲು ಹಲವು ವರ್ಷಗಳಿಂದ ಕಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.
ಕಾವೇರಿ ಜಲವಿವಾದ ನ್ಯಾಯಮಂಡಳಿ ತೀರ್ಪಿಗೆ ಸಂಬಂಧಿಸಿ ಸಿವಿಲ್ ಮೇಲ್ಮನವಿಗಳು ಬಾಕಿ ಇರುವಾಗಲೂ ಕಾವೇರಿ ನ್ಯಾಯಾಧೀಕರಣದ ತೀರ್ಪು ಪ್ರಕಟಿಸಲು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಮಹದಾಯಿ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಪ್ರಕಟಣೆಗೆ ಸುಪ್ರೀಂಕೋರ್ಟ್ 2020 ಫೆ.20 ರಂದು ತನ್ನ ಆದೇಶದಲ್ಲಿ ನಿರ್ದೇಶಿಸಿದೆ. ಅದರಂತೆ ಈ ಎರಡೂ ನ್ಯಾಯಾಧೀಕರಣಗಳ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಈಗ ಅದೇ ರೀತಿ ಕೃಷ್ಣಾ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಕೃಷ್ಣಾ ಜಲ ವಿವಾದ ಸಂಬಂಧ 2010 ರಲ್ಲಿ ಕೃಷ್ಣಾ ನ್ಯಾಯಾಧೀಕರಣ-2 ರ ತೀರ್ಪು ಬಂದಿದೆ. 2013ರಂದು ಹೆಚ್ಚುವರಿ ವರದಿ (further report ) ನೀಡಿದೆ. ನ್ಯಾಯಾಧೀಕರಣದ ಅಂತಿಮ ತೀರ್ಪಿನಡಿ ಕರ್ನಾಟಕ ರಾಜ್ಯಕ್ಕೆ 173 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ.
ಈ ಪೈಕಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರ ಯೋಜನೆಗೆ 130 ಟಿಎಂಸಿ ನಿಗದಿಪಡಿಸಲಾಗಿದೆ. ಆದರೆ ನ್ಯಾಯಮಂಡಳಿಯ ವರದಿ ಮತ್ತು ನ್ಯಾಯಾಧೀಕರಣದ ಅಂತಿಮ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಎಸ್ಎಲ್ಪಿ ಅರ್ಜಿ ದಾಖಲಿಸಿದೆ. ಈ ಕುರಿತು ಸುಪ್ರೀಂಕೋರ್ಟ್ 2011 ರ ಆದೇಶದಲ್ಲಿ ತನ್ನ ಮುಂದಿನ ಆದೇಶದವರೆಗೆ ನ್ಯಾಯಾಧೀಕರಣ ತೆಗೆದುಕೊಳ್ಳಬಹುದಾದ ಯಾವುದೇ ನಿರ್ಧಾರಗಳ ಅಧಿಸೂಚನೆ ಪ್ರಕಟಿಸದಂತೆ ಆದೇಶ ನೀಡಿತ್ತು.