Jindal Land Deal | ಹಿಂದಿನ ಬಿಜೆಪಿ ಸರ್ಕಾರದ ತೀರ್ಮಾನದಂತೆ ಜಿಂದಾಲ್‌ಗೆ ಭೂಮಿ: ಎಂ ಬಿ ಪಾಟೀಲ್ ಸ್ಪಷ್ಟನೆ

Update: 2024-08-26 06:18 GMT

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌ ಬಿ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ʻʻಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ. ಈ ವಿಷಯದಲ್ಲಿ ಸರ್ಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ್‌ ಅವರ ಆರೋಪ ನಿರಾಧಾರವಾಗಿದೆ. ಒಂದು ವೇಳೆ ಒಳ ಒಪ್ಪಂದ ಆಗಿದ್ದರೆ ಅದು ಅವರದ್ದೇ ಪಕ್ಷದ ಸರ್ಕಾರದ ಜತೆ ಆಗಿರಬೇಕು" ಎಂದು ತಿರುಗೇಟು ನೀಡಿದ್ದಾರೆ.

"ಯಡಿಯೂರಪ್ಪ ಸರ್ಕಾರದ ಆದೇಶ ಜಾರಿಯಾಗದ ಕಾರಣ ಜಿಂದಾಲ್ ಕಂಪನಿ ಹೈಕೋರ್ಟ್‌ಗೆ ಹೋಗಿತ್ತು. ಬಳಿಕ ಕೋರ್ಟ್ ಆ ಆದೇಶವನ್ನು ಪಾಲಿಸುವಂತೆ ಸೂಚಿಸಿತು. ಅದರಂತೆ ನಮ್ಮ ಸರ್ಕಾರ ನಡೆದುಕೊಂಡಿದೆ. ಇಷ್ಟಕ್ಕೂ ಜಿಂದಾಲ್ ಕಂಪನಿ ರಾಜ್ಯದಲ್ಲಿ 90 ಸಾವಿರ‌ ಕೋಟಿ ರೂ. ಹೂಡಿಕೆ‌ ಮಾಡಿ, 50 ಸಾವಿರ ಜನರಿಗೆ ಉದ್ಯೋಗ ನೀಡಿದೆ. ಸರ್ಕಾರದ ಷರತ್ತುಗಳನ್ನು ಪಾಲಿಸಿದ ನಂತರವೂ ಅವರಿಗೆ ಜಮೀನಿನ ಗುತ್ತಿಗೆ ಮಾರಾಟ ಮಾಡದಿದ್ದರೆ ಹೂಡಿಕೆ‌ ವಲಯಕ್ಕೆ ಕೆಟ್ಟ ಸಂದೇಶ ಕೊಟ್ಟಂತಾಗುತ್ತದೆʼʼ ಎಂದು ಅವರು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ʻʻಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೊಟ್ಟ ಹಾಗೆ ನಮ್ಮ ಸರ್ಕಾರ ಜಿಂದಾಲ್ ಕಂಪನಿಗೆ ಯಾವ ರಿಯಾಯಿತಿಯನ್ನೂ ಕೊಟ್ಟಿಲ್ಲ. 20 ವರ್ಷದ ಹಿಂದೆ ಇದ್ದ ಮಾರುಕಟ್ಟೆ ದರವನ್ನು ಆಧರಿಸಿ‌ಯೇ ಭೂಮಿ ದರ ನಿಗದಿಪಡಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ದೇವನಹಳ್ಳಿ ಬಳಿ ಕೆಐಎಡಿಬಿಯ 116 ಎಕರೆ ಜಮೀನನ್ನು ಕೇವಲ 50 ಕೋಟಿ ರೂಪಾಯಿಗೆ ಭಾರಿ ರಿಯಾಯಿತಿ ದರದಲ್ಲಿ ಕೊಟ್ಟಿದೆ. ಅದರ ನೈಜ ಬೆಲೆ ಅಂದು 187 ಕೋಟಿ ರೂಪಾಯಿ ಇತ್ತು. ಇದರಲ್ಲಿ 137 ಕೋಟಿ ರೂಪಾಯಿ ಮೇಲ್ನೋಟಕ್ಕೇ ನಷ್ಟವಾಗಿದೆ. ಈ ಹಣ ಇಲ್ಲಿಯವರೆಗೂ ಕೆಐಎಡಿಬಿ ಗೂ ಸಂದಾಯವಾಗಿಲ್ಲ. ಇದರ ಬಗ್ಗೆ ಬೆಲ್ಲದ್‌ ಅವರ ಜಾಣ ಮೌನ ಯಾಕೆʼʼ ಎಂದು ಎಂಬಿ ಪಾಟೀಲ್ ಪ್ರಶ್ನಿಸಿದ್ದಾರೆ.

Tags:    

Similar News