ಮದ್ದೂರು ಗಲಭೆ | ಹಿಂದೂಗಳ ಮೇಲಷ್ಟೇ ಲಾಠಿಚಾರ್ಜ್‌; ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಆರೋಪ

ಘಟನೆಗೆ ಸರ್ಕಾರದ ಕುಮ್ಮಕ್ಕು ನೀಡಿರುವುದೇ ಕಾರಣ, ಕಳೆದ ಎರಡು ವರ್ಷಗಳಿಂದ ಇದೇ ರೀತಿಯ ಪ್ರಕರಣಗಳು ನಡೆದಿವೆ. ಧರ್ಮಸ್ಥಳ, ಚಾಮುಂಡೇಶ್ವರಿ ಬೆಟ್ಟದ ವಿಷಯದಲ್ಲೂ ಹಿಂದೂಗಳ ಭಾವನೆಗೆ ದಕ್ಕೆ ತಂದಿದೆ ಎಂದು ಆರ್‌. ಅಶೋಕ್‌ ಕಿಡಿಕಾರಿದರು.;

Update: 2025-09-08 08:58 GMT

ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌

Click the Play button to listen to article

ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಗಲಭೆ ಪ್ರಕರಣದಲ್ಲಿ ಹಿಂದೂಗಳ ಮೇಲಷ್ಟೇ ಸರ್ಕಾರ ಕ್ರಮ ಜರುಗಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

ಹಿಂದೂಗಳ ಭಾವನೆಗೆ ಸರ್ಕಾರವೇ ಧಕ್ಕೆ ತರುತ್ತಿರುವುದು ನೋಡಿದರೆ ಇದಲ್ಲಾ ಕರ್ನಾಟಕದಲ್ಲಿ ನಡೆಯುತ್ತಿದೆಯೋ ಅಥವಾ ಪಾಕಿಸ್ತಾನದಲ್ಲಿ ನಡೆಯುತ್ತಿದೆಯೋ ಎಂಬ ಭ್ರಮೆ ಮೂಡುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಅಗತ್ಯ ಭದ್ರತೆ ಒದಗಿಸುವಲ್ಲಿ ಪೊಲೀಸ್‌ ಇಲಾಖೆ ನಿರ್ಲಕ್ಷ್ಯ ವಹಿಸಿದೆ. ಕಲ್ಲುತೂರಾಟ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಹಿಂದೂಗಳ ಮೇಲಷ್ಟೇ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ರಾತ್ರಿ ಕಲ್ಲು ತೂರಾಟ ನಡೆಸಿ, ಗಲಭೆ ಮಾಡಿದವರ ಮೇಲೆ ಏಕೆ ಕ್ರಮ ಜರುಗಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಗೆ ಸರ್ಕಾರದ ಕುಮ್ಮಕ್ಕೇ ಕಾರಣ. ಕಳೆದ ಎರಡು ವರ್ಷಗಳಿಂದ ಇದೇ ರೀತಿ ಹಲವು ಪ್ರಕರಣಗಳು ನಡೆದಿವೆ. ಧರ್ಮಸ್ಥಳ, ಚಾಮುಂಡೇಶ್ವರಿ ಬೆಟ್ಟದ ವಿಷಯದಲ್ಲಿ ಕೆಲವರು ಹಿಂದೂಗಳ ಭಾವನೆಗೆ ದಕ್ಕೆ ತಂದಿದ್ದರು. ಇದೀಗ ಮದ್ದೂರಿನಲ್ಲಿ ಇಂತಹದ್ದೇ ಘಟನೆ ನಡೆದಿದೆ. "ಪಾಕಿಸ್ತಾನ ಜಿಂದಾಬಾದ್" ಎಂದು ಕೂಗಿದವರ ವಿರುದ್ಧ ವಿಧಾನಸೌಧದಲ್ಲಿ ಯಾವುದೇ ಕ್ರಮ ಕೈಗೊಳ್ಳದ ಕಾರಣ ʼಟಿಪ್ಪು ಗ್ಯಾಂಗ್‌ʼಗೆ ಇಂತಹ ಕೃತ್ಯಗಳನ್ನು ಎಸಗುತ್ತಿದೆ ಎಂದು ದೂರಿದರು. 

ಮಂಡ್ಯ ಮತ್ತು ಮೈಸೂರಿನಲ್ಲಿ ಹಿಂದೂಗಳನ್ನು ಗುರಿಯಾಗಿಸಲು ಪಿತೂರಿ ನಡೆದಿದೆ ಎಂದು ಆರೋಪಿಸಿದರು.

ಹಿಂದೂಗಳು ಎರಡನೇ ದರ್ಜೆ ಪ್ರಜೆಗಳು

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ" ಎಂದು ಹೇಳಿರುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಸ್ಥಳಕ್ಕೆ ಸಂಬಂಧಿಸಿದ ಹೇಳಿಕೆಗಳು ಗಮನಿಸಿದರೆ ಸರ್ಕಾರ ಹಿಂದೂಗಳನ್ನು ಎರಡನೇ ದರ್ಜೆಯ ಪ್ರಜೆಗಳನ್ನಾಗಿ ನೋಡುತ್ತಿದೆ. ಮತಗಳಿಗಾಗಿ ಸರ್ಕಾರ ದೇಶವನ್ನು ಮಾರಾಟ ಮಾಡುತ್ತಿದೆಯೇ ಎಂಬ ಅನುಮಾನ ಮೂಡುತ್ತಿದೆ. ಸಂವಿಧಾನದ ಬಗ್ಗೆ ಮಾತನಾಡುವ ಸರ್ಕಾರ ಇಂತಹ ಘಟನೆಗಳನ್ನು ಏಕೆ ತಡೆಗಟ್ಟುತ್ತಿಲ್ಲ ಎಂದು ತೀವ್ರ ಅಸಮಾಧಾನ ಹೊರಹಾಕಿದರು.

Tags:    

Similar News