ರಾಜೀನಾಮೆ ಕೊಟ್ಟಿರುವ ನಿಮ್ಮವರ ಪಟ್ಟಿ ಬಿಡುಗಡೆ ಮಾಡಿ; ರಾಜ್ಯ ಬಿಜೆಪಿ ನಾಯಕರಿಗೆ ಸಿ.ಎಂ ತಿರುಗೇಟು
ಕಾಲ್ತುಳಿತ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ನನ್ನ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳಲ್ಲಿ ರಾಜೀನಾಮೆ ನೀಡಿರುವ ಬಿಜೆಪಿ ನಾಯಕರ ಪಟ್ಟಿ ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆ ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ. ರಾಜ್ಯ ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಮೂರ್ತಿಗಳಾದ ಜಾನ್ ಮೈಕೆಲ್ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜಕೀಯ ದುರುದ್ದೇಶದ ಪ್ರತಿಭಟನೆ
ಕಾಲ್ತುಳಿತ ಪ್ರಕರಣ ಸಂಬಂಧ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆಯೇ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎಂಬುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಅಪಘಾತ, ಹತ್ಯೆ, ದೌರ್ಜನ್ಯಗಳು ನಡೆದ ತಕ್ಷಣ ಸತ್ತ ಜೀವಗಳನ್ನು ಹುಡುಕಿಕೊಂಡು ಹೋಗುವ ರಣಹದ್ದುಗಳಂತೆ ಎರಗಿ ಬೀಳುವುದು ಬಿಜೆಪಿಯ ರಕ್ತದಲ್ಲಿಯೇ ಇದೆ. ತಮ್ಮ ಊಟದೆಲೆಯ ಮೇಲೆ ಆನೆ ಸತ್ತುಬಿದ್ದಿದ್ದರೂ ಎದುರಿಗಿದ್ದವರ ಎಲೆ ಮೇಲೆ ಸತ್ತು ಬಿದ್ದ ನೊಣದ ಕಡೆ ಬೊಟ್ಟು ಮಾಡುವುದು ಬಿಜೆಪಿಯ ಹಳೆಯ ಚಾಳಿ ಎನ್ನುವುದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೀಡಾದವರ ದು:ಖ ಮತ್ತು ಸಂಕಟ ಇರುವುದನ್ನು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಇಂತಹ ಪ್ರಕರಣಗಳನ್ನು ಕೆದಕಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಇವರ ಆತ್ಮವಂಚಕ ನಡವಳಿಕೆ ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ ಎಂದು ತಿಳಿಸಿದ್ದಾರೆ.
ಮೋದಿ ರಾಜೀನಾಮೆ ನೀಡಿದ್ದರೆ?
2002ರಲ್ಲಿ ಗುಜರಾತ್ ರಾಜ್ಯದಲ್ಲಿ ನಡೆದ ಹತ್ಯಾಕಾಂಡದಲ್ಲಿ ಎಲ್ಲ ಧರ್ಮಗಳಿಗೆ ಸೇರಿದ್ದ ಅಂದಾಜು ಎರಡು ಸಾವಿರ ಅಮಾಯಕರು ಪ್ರಾಣ ಕಳೆದುಕೊಂಡರು. ಆ ಘಟನೆಯ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಅವರದ್ದೇ ಪಕ್ಷದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಸೂಚನೆ ನೀಡಿದರೂ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಿಲ್ಲ. ಮಾತ್ರವಲ್ಲ, ಇಲ್ಲಿಯವರೆಗೆ ಕನಿಷ್ಠ ವಿಷಾದವನ್ನೂ ಸೂಚಿಸಿಲ್ಲ. ನಮ್ಮ ರಾಜೀನಾಮೆ ಕೇಳುವವರು ಮೊದಲು ಇದಕ್ಕೆ ಉತ್ತರಿಸಿ ಎಂದು ಕಟುವಾಗಿ ಟೀಕಿಸಿದ್ದಾರೆ.
ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಬೇಡಿಕೆಯನ್ನೂ ಪ್ರಧಾನಿ ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲಾ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ?, ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು?, ಪಂಡಿತ ಜವಾಹರಲಾಲ್ ನೆಹರೂ ಅವರಾ? , ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ? ಎಂದು ಪ್ರಶ್ನಿಸಿದ್ದಾರೆ.
ಗೃಹ ಸಚಿವರ ಯಾಕೆ ರಾಜೀನಾಮೆ ನೀಡಿಲ್ಲ?
ಕಳೆದ ಎರಡು ವರ್ಷಗಳಿಂದ ದೇಶದ ಈಶಾನ್ಯ ಭಾಗದ ಮಣಿಪುರ ಹಿಂಸೆಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದೆ. ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಆ ರಾಜ್ಯದ ಬಿಜೆಪಿ ಮುಖ್ಯಮಂತ್ರಿ ಬಿರೇನ್ ಸಿಂಗ್ 20 ತಿಂಗಳ ಕಾಲ ಕುರ್ಚಿಗೆ ಅಂಟಿ ಕೂತಿದ್ದರು. ಕೊನೆಗೂ ಸುಪ್ರೀಂಕೋರ್ಟ್ ಚಾಟಿ ಬೀಸಿದ ನಂತರ ರಾಜೀನಾಮೆ ನೀಡಿದ್ದರು. ಈಗಲೂ ಅಲ್ಲಿ ಹಿಂಸಾಚಾರ ಮುಂದುವರಿದಿದೆ. ಇದರ ಹೊಣೆಯನ್ನು ಕೇಂದ್ರ ಗೃಹ ಸಚಿವರು ಹೊರುವುದು ಬೇಡವೇ? ಎಂದು ಪ್ರಶ್ನಿಸಿದ್ದಾರೆ.
ಗುಜರಾತ್ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾ ಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ? ಎಂದಿದ್ದಾರೆ.
ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ
ನಮ್ಮ ಸರ್ಕಾರ ರಾಜ್ಯದ ಏಳು ಕೋಟಿ ಜನರಿಗೆ ಉತ್ತರದಾಯಿಯಾಗಿದೆ. ಈ ಕಾರಣಕ್ಕಾಗಿ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಭ್ರಷ್ಟರಾಗಿದ್ದಾರೆಂದು ಮೇಲ್ನೋಟಕ್ಕೆ ಅನಿಸಿದವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಉಳಿದಂತೆ ಇದರ ಬಗ್ಗೆ ಆಮೂಲಾಗ್ರ ಮತ್ತು ನಿಷ್ಪಕ್ಷಪಾತ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗಿದೆ. ಆಯೋಗ ನೀಡುವ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ದ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.