ಮಂಡ್ಯ: ರಜೆ ಮೇಲೆ ಊರಿಗೆ ಬಂದಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ನವೀನ್ ಅವರಿಗೆ ಮನೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾರೆ.;
ಸಾಂದರ್ಭಿಕ ಚಿತ್ರ
ಕೆ.ಆರ್. ಪೇಟೆ ತಾಲ್ಲೂಕಿನ ಕರೋಟಿ ಗ್ರಾಮದಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಅಕಾಲಿಕವಾಗಿ ನಿಧನರಾದ ದುರ್ಘಟನೆ ವರದಿಯಾಗಿದೆ. ನವೀನ್ (21) ಮೃತ ದುರ್ದೈವಿ. ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ರಜೆ ಹಿನ್ನೆಲೆಯಲ್ಲಿ ತಮ್ಮ ಸ್ವಗ್ರಾಮಕ್ಕೆ ಬಂದಿದ್ದರು.
ನವೀನ್ ಅವರಿಗೆ ಮನೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದಿದ್ದಾರೆ. ಕೂಡಲೇ ಕುಟುಂಬಸ್ಥರು ಅವರನ್ನು ಕಿಕ್ಕೇರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿನ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಚನ್ನರಾಯಪಟ್ಟಣದ ಆಸ್ಪತ್ರೆಗೆ ಹೋಗಲು ಸೂಚಿಸಿದ್ದಾರೆ. ದಾರಿ ಮಧ್ಯದಲ್ಲಿಯೇ ನವೀನ್ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೆಚ್ಚುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳಿಂದ ಉಂಟಾಗುತ್ತಿರುವ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಆರೋಗ್ಯ ತಜ್ಞರು ಈ ಕುರಿತು ಜಾಗೃತಿ ಮೂಡಿಸಲು ಮತ್ತು ನಿಯಮಿತ ಆರೋಗ್ಯ ತಪಾಸಣೆಯ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಿದ್ದಾರೆ.