Mandya Violence | ಕೋಮು ಗಲಭೆಯಲ್ಲ; ಆಕಸ್ಮಿಕ ಘಟನೆ: ಗೃಹ ಸಚಿವ ಪರಮೇಶ್ವರ್‌

Update: 2024-09-12 07:19 GMT

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಸಂಭವಿಸಿದ ಗಲಭೆ ಪ್ರಕರಣದ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್‌ ಅವರು ಪ್ರತಿಕ್ರಿಯಿಸಿದ್ದು, "ಅಲ್ಲಿ ಕೋಮು ಗಲಭೆಯಾಗಿಲ್ಲ. ಅದೊಂದು ಆಕಸ್ಮಿಕ ಘಟನೆಯಷ್ಟೇ" ಎಂದಿದ್ದಾರೆ.

ಬುಧವಾರ ರಾತ್ರಿ ನಾಗಮಂಗಲದಲ್ಲಿ ಸಂಭವಿಸಿದ ಗಲಭೆಯ ಕುರಿತು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, "ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ಆಗಿದೆ. ಅದು ಕೋಮು ಗಲಭೆ ಅಲ್ಲ, ಆಕಸ್ಮಿಕವಾಗಿ ನಡೆದಿರುವ ಘಟನೆ. ಒಬ್ಬರಿಗೊಬ್ಬರು ಘರ್ಷಣೆ ಮಾಡಿಕೊಂಡಿದ್ದಾರೆ" ಎಂದಿದ್ದಾರೆ.

ಗಲಾಟೆ ವೇಳೆ ಬೈಕು, ಅಂಗಡಿಗೆ ಬೆಂಕಿ ಹಾಕಿದ್ದಾರೆ. ಗಣೇಶ ವಿಸರ್ಜನೆ ವೇಳೆ ಯಾರೋ ಕಲ್ಲು ತೂರಾಟ ಮಾಡಿದ್ದಾರೆ. ಅದಕ್ಕೆ ಈ ಕಡೆಯಿಂದಲೂ ಕಲ್ಲು ತೂರಾಟ ಮಾಡಿದ್ದಾರೆ. ಹಾಗಾಗಿ ಎರಡೂ ಕಡೆಯಿಂದಲೂ ಕಲ್ಲು ತೂರಾಟ, ಹಿಂಸಾಚಾರ ಆಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಆಗಿಲ್ಲ. ಸದ್ಯ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜಕೀಯ ಬೇಡ: ಬಿಜೆಪಿ ನಾಯಕರಿಗೆ ಮನವಿ

ಈವರೆಗೆ ಘಟನೆ ಸಂಬಂಧ ಸುಮಾರು 52 ಜನರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ವೇಳೆ ಒಬ್ಬ ಎಎಸ್ಐಗೂ ಗಾಯವಾಗಿದೆ. ಆದರೆ, ಇಂತಹ ಸೂಕ್ಷ್ಮ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದೂ ಅವರು ಮನವಿ ಮಾಡಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣ ಸಂಬಂಧ ನಾಗಮಂಗಲಕ್ಕೆ ಬಿಜೆಪಿ ನಾಯಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜಕೀಯ ಮಾಡಬೇಡಿ ಎಂದು ನಾನು ಬಿಜೆಪಿ ನಾಯಕರಲ್ಲಿ ಮನವಿ ಮಾಡುತ್ತೇನೆ. ಅವರು ಕಾನೂನಾತ್ಮಕವಾಗಿ ಸಲಹೆ ಕೊಡಲಿ. ಎಡಿಜಿಪಿ ಹೋಗಿದ್ದಾರೆ, ಅವಶ್ಯಕತೆ ಇದ್ದರೆ ನಾನು ಹೋಗುತ್ತೇನೆ ಎಂದರು.

ಈ ಮಧ್ಯೆ, ನಾಗಮಂಗಲಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಭೇಟಿ ನೀಡಿದ್ದಾರೆ. ಜಿಲ್ಲಾಧಿಕಾರಿ ಡಾ. ಕುಮಾರ್, ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರಿಂದ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ನಂತರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ಧಾರೆ.

Tags:    

Similar News