Mandya Violence | ನಾಗಮಂಗಲದಲ್ಲಿ ಪಾಕ್‌ ಪರ ಘೋಷಣೆ: ಆರ್‌ ಅಶೋಕ ಆರೋಪ

Update: 2024-09-16 06:44 GMT

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವುದಾಗಿ ಗಂಭೀರ ಆರೋಪ ಮಾಡಿರುವ ವಿಧಾನಸಭಾ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ಗಲಭೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ ಎಂದು ಹೇಳಿದ್ದಾರೆ.

ನಾಗಮಂಗಲ ಗಲಭೆಯಲ್ಲಿ ಕೇರಳ ಮೂಲದವರ ಮತ್ತು ನಿಷೇಧಿತ ಪಿಎಫ್ಐ ಸಂಘಟನೆ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿರುವ ಬೆನ್ನಲ್ಲೇ ಅಶೋಕ್ ಅವರ ಈ ಹೇಳಿಕೆ ಹೊರಬಿದ್ದಿದೆ.

‘‘ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗುತ್ತಿದೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕಿಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ’’ ಎಂದು ತಮ್ಮ ʼಎಕ್ಸ್ʼ ಸಂದೇಶದಲ್ಲಿ ಅಶೋಕ್ ಉಲ್ಲೇಖಿಸಿದ್ದಾರೆ.

‘‘ಇಂತಹ ಘಟನೆಗಳು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನು ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನು ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಜಿ ಪರಮೇಶ್ವರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸುತ್ತೇನೆ’’ ಎಂದು ಅಶೋಕ್ ಹೇಳಿದ್ದಾರೆ.

ನಾಗಮಂಗಲ ಗಲಭೆ ಸಂಬಂಧ ದಾಖಲಾಗಿರುವ ಎಫ್ಐಆರ್‌ನಲ್ಲಿ ಕೇರಳ ಮೂಲದ ಇಬ್ಬರ ಹೆಸರು ಇರುವುದು ಭಾನುವಾರ ಬೆಳಕಿಗೆ ಬಂದಿತ್ತು. ಇದನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿರುವ ಪ್ರತಿಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ತೀವ್ರಗೊಳಿಸಿವೆ.

Tags:    

Similar News