ಕಾರಿನಲ್ಲೇ ಕುಳಿತು ಡಿಸಿಗಳೊಂದಿಗೆ ಸಭೆ ನಡೆಸಿದ ಸಚಿವ ಕೃಷ್ಣ ಬೈರೇಗೌಡ
ರಾಜ್ಯಾದ್ಯಂತ ಈ ವರ್ಷದ ಮಳೆಯ ಪ್ರಮಾಣದ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.;
ಪ್ರವಾಸದ ವೇಳೆ ಕಾರಿನಲ್ಲಿಯೇ ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆ ನಡೆಸಿದರು.
ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬೆಳೆಹಾನಿ ಹಾಗೂ ಬರ ಸ್ಥಿತಿಯ ಬಗೆಗಿನ ಜಿಲ್ಲಾಧಿಕಾರಿಗಳ ಸಭೆಯನ್ನು ಸಚಿವ ಕೃಷ್ಣ ಬೈರೇಗೌಡ ಅವರು ಕಾರಿನ ಪ್ರಯಾಣದ ವೇಳೆಯೇ ನಡೆಸುವ ಮೂಲಕ ಸಮಯ ಹಾಗೂ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಗೆ ಒತ್ತು ನೀಡಿದ್ದಾರೆ.
ಮಂಗಳವಾರ ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಸಚಿವ ಕೃಷ್ಣ ಬೈರೇಗೌಡ ಅವರು ಜಿಲ್ಲೆಯ ಸಚಿವರಾದ ನಂತರ ನಡೆಸುತ್ತಿರುವ ಮೊದಲ ಸಭೆ ಇದಾಗಿದ್ದು, ಸಭೆಗೆ ಬೆಂಗಳೂರಿನಿಂದ ಕಾರಿನಲ್ಲಿ ಹೊರಟ ಸಚಿವರು ಪ್ರಯಾಣದ ಸಮಯ ವ್ಯರ್ಥ ಮಾಡದೆ ಎಲ್ಲಾ ಜಿಲ್ಲಾಧಿಕಾರಿಗಳು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಆಯುಕ್ತರ ಸಭೆ ನಡೆಸಿದರು.
ಸಭೆಯಲ್ಲಿ “ರಾಜ್ಯಾದ್ಯಂತ ಈ ವರ್ಷದ ಮಳೆಯ ಪ್ರಮಾಣದ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಾತ್ರ ಮಳೆಯಿಂದಾಗಿ ಬೆಳೆ ನಾಶವಾಗಿದ್ದು, ಶೀಘ್ರ ಈ ಮಾಹಿತಿಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸಲು ಸೂಚಿಸಲಾಯಿತು.
ಮಳೆ ಹಾಗೂ ಸಿಡಿಲಿನ ಕಾರಣಕ್ಕೆ 51 ಜನರು ಹಾಗೂ 329 ಜಾನುವಾರುಗಳು ಮೃತಪಟ್ಟಿವೆ. ಮಳೆಗೆ 121 ಮನೆಗಳೂ ಸಂಪೂರ್ಣ ಕುಸಿದಿದ್ದು ಎಲ್ಲರಿಗೂ ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸುವ ಸಚಿವರು, ಪ್ರವಾಸದ ಸಂದರ್ಭದಲ್ಲಿಯೇ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.