Pahalgam Terror Attack: ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರನ್ನು ರಾಜ್ಯಕ್ಕೆ ಕರೆತಂದ ಸಚಿವ ಲಾಡ್
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಪಹಲ್ಗಾಮ್ನಿಂದ 180 ಕನ್ನಡಿಗರನ್ನು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕರೆತಂದ್ದಿದ್ದಾರೆ;
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರವಾಸಿಗರೊಂದಿಗೆ ಸಚಿವ ಸಂತೋಷ್ ಲಾಡ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಮೇರೆಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಸಿಲುಕಿದ್ದ ಕನ್ನಡಿಗರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ರಾಜ್ಯಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ (ಏಪ್ರಿಲ್ 22) ರಂದು ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದರು, ಸಿಎಂ ಸಿದ್ದರಾಮಯ್ಯನವರು ದಾಳಿ ನಡೆದ ದಿನವೇ ಸಚಿವರು ಹಾಗೂ ಉನ್ನತ ಅಧಿಕಾರಿಗಳ ಸಭೆ ಕರೆದಿದ್ದರು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಹಿರಿಯ ಅಧಿಕಾರಿಗಳ ತಂಡಕ್ಕೆ ಪಹಲ್ಗಾಮ್ ಗೆ ತರಳಿ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವಂತೆ ಸೂಚನೆ ನೀಡಿದ್ದರು.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಬುಧವಾರ ಬೆಳಗಿನ ಜಾವ 3.00 ಕ್ಕೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಸಚಿವ ಸಂತೋಷ್ ಲಾಡ್ ಪಹಲ್ಗಾಮ್ನಲ್ಲಿ ಸುಮಾರು 180 ಕನ್ನಡಿಗರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಕರೆತಂದಿದ್ದಾರೆ.
ಲಷ್ಕರ್-ಎ-ತೊಯಿಬಾ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ "ದಿ ರೆಸಿಸ್ಟೆನ್ಸ್ ಫ್ರಂಟ್" (TRF) ದಾಳಿಯ ಹೊಣೆ ಹೊತ್ತುಕೊಂಡಿತ್ತು, ಸೇನೆಯ ಸಮವಸ್ತ್ರ ಧರಿಸಿದ್ದ ಭಯೋತ್ಪಾದಕರು ಏಕಾಏಕಿ ಪ್ರವಾಸಿಗರ ಮೇಲೆ ದಾಳಿ ಮಾಡಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಇಬ್ಬರು ಪ್ರವಾಸಿಗರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದು ಅವರ ಸಂಬಂಧಿಕರಿಗೆ ಸಾಂತ್ವನ ಹೇಳಿದ್ದರು, ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್ ಹಾಗೂ ಬೆಂಗಳೂರಿನ ಸಾಪ್ಟ್ವೇರ್ ಉದ್ಯಮಿ ಭರತ್ ಭೂಷಣ್ ಅವರ ಪಾರ್ಥಿವ ಶರೀರಗಳನ್ನು ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ಮಾಡುವಂತೆ ಸೂಚನೆ ನೀಡಿದ್ದಾರೆ.