ಗಂಧ ಸೋಪಿಗೆ ಮಿಲ್ಕಿ ಬ್ಯೂಟಿ ಬ್ರಾಂಡ್ ಅಂಬಾಸಿಡರ್ ಆಗುವುದು ಬೇಡ ಎಂದ ಸಂಸದ ಯದುವೀರ್ ಒಡೆಯರ್
ತಮನ್ನಾ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಹೊಂದಿಲ್ಲ. ಕನ್ನಡತನದ ಗಂಧ ಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ ಗಂಧದ ಸೋಪಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಸಂಸದ ಯದುವೀರ್ ಪ್ರಶ್ನಿಸಿದ್ದಾರೆ.;
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ಗೆ ಪರಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಿರುವ ಸರ್ಕಾರದ ನಿರ್ಧಾರವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಅತ್ಯಂತ ಅಸಂಬದ್ಧ ಮತ್ತು ಬೇಜವಾಬ್ದಾರಿಯುತ ನಿರ್ಧಾರ ಎಂದು ಅವರು ಟೀಕಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಯದುವೀರ್, ಇದು ಕಾಂಗ್ರೆಸ್ ಸರ್ಕಾರದ ಅವಿವೇಕದ ತೀರ್ಮಾನ ಎಂದು ದೂರಿದ್ದಾರೆ. 1916ರಲ್ಲಿ ಮೈಸೂರು ಸಂಸ್ಥಾನದ ಕೃಷ್ಣರಾಜ ಒಡೆಯರ್ ಅವರು ಈ ಸಂಸ್ಥೆಯನ್ನು ಸ್ಥಾಪಿಸಲು ಪ್ರಮುಖ ಪಾತ್ರ ವಹಿಸಿದ್ದರು. ಈ ಸಂಸ್ಥೆಯ ಸಾಬೂನು ದಶಕಗಳಿಂದಲೂ ಜನರ ಮನೆಗಳಲ್ಲಿ ಸ್ಥಾನ ಪಡೆದಿತ್ತು. ಈ ಸಂಸ್ಥೆಯ ಬಹುತೇಕ ಉತ್ಪನ್ನಗಳನ್ನು ಬಳಸುತ್ತಿದ್ದವರು ಕನ್ನಡಿಗರು. ಇಂತಹ ಸಂಸ್ಥೆಗೆ ಪರಭಾಷಾ ನಟಿಯನ್ನು ರಾಯಭಾರಿಯನ್ನಾಗಿ ಮಾಡಿದ್ದು ಹುಚ್ಚುತನ. ಅಷ್ಟೇ ಅಲ್ಲದೆ, ಆರು ಕೋಟಿ ರೂಪಾಯಿಗೂ ಹೆಚ್ಚು ಸಂಭಾವನೆ ನೀಡಿ ರಾಯಭಾರಿ ಮಾಡಿರುವುದು ಅಕ್ಷಮ್ಯ ಎಂದು ಅವರು ಕಿಡಿಕಾರಿದ್ದಾರೆ.
ಈ ಸಂಸ್ಥೆಗೆ ರಾಯಭಾರಿಯನ್ನು ಮಾಡಲೇಬೇಕು ಎಂಬುದು ಸರ್ಕಾರದ ನಿರ್ಧಾರವಾಗಿದ್ದರೆ, ಕನ್ನಡದ ಜನಪ್ರಿಯ ಹಾಗೂ ಪ್ರತಿಭಾವಂತ ನಟಿಯರನ್ನು ನೇಮಿಸಿಕೊಳ್ಳಬೇಕಿತ್ತು. ತಮನ್ನಾ ಅವರಿಗೆ ಮಣೆ ಹಾಕುವ ಮೂಲಕ ರಾಜ್ಯ ಸರ್ಕಾರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದ್ದಾರೆ. ತಮನ್ನಾ ಅವರಿಗೆ ಕರ್ನಾಟಕದ ಸಂಸ್ಕೃತಿ, ಇತಿಹಾಸದೊಂದಿಗೆ ಯಾವುದೇ ನಂಟು ಇಲ್ಲ. ಕನ್ನಡತನದ ಗಂಧಗಾಳಿ ಗೊತ್ತಿಲ್ಲದ ಈ ನಟಿಯನ್ನು ನಮ್ಮ ಗಂಧದ ಸಾಬೂನಿನ ಸಂಸ್ಥೆಗೆ ರಾಯಭಾರಿ ಮಾಡುವ ಅಗತ್ಯವೇನಿತ್ತು ಎಂದು ಯದುವೀರ್ ಪ್ರಶ್ನಿಸಿದ್ದಾರೆ.
ಸರ್ಕಾರ ತೀರ್ಮಾನ ಹಿಂಪಡೆಯಲು ಆಗ್ರಹ
ರಾಜ್ಯ ಸರ್ಕಾರ ಕೂಡಲೇ ಈ ನೇಮಕವನ್ನು ರದ್ದುಗೊಳಿಸಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ. ಇದರಿಂದ ಕನ್ನಡಿಗರ 6.20 ಕೋಟಿ ರೂಪಾಯಿಯನ್ನು ಉಳಿಸಬೇಕು. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ಸಾವಿರಾರು ಕೋಟಿ ರೂ. ಜನರಿಗೆ ನೀಡದೆ ಮಾತು ತಪ್ಪಿರುವ ಕಾಂಗ್ರೆಸ್ ಸರ್ಕಾರ, ಈಗ ಪರಭಾಷಾ ನಟಿಗೆ ಮಣೆ ಹಾಕುವುದನ್ನು ನಿಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.