ಕ್ಯಾನ್ಸರ್ಪೀಡಿತ ಮಕ್ಕಳಿಗೆ ಹೊಸ ಆಶಾಕಿರಣ: ಬೆಂಗಳೂರಿನಲ್ಲಿ ಶೀಘ್ರ ವಸತಿ ಶಾಲೆ ಆರಂಭ
ಜುಲೈ ತಿಂಗಳಿನಿಂದಲೇ ಈ ಶಾಲೆಯನ್ನು ಕಾರ್ಯಾರಂಭ ಮಾಡಲು ಯೋಜಿಸಲಾಗಿದ್ದು, ಅಗತ್ಯ ಮೂಲಸೌಕರ್ಯ ಮತ್ತು ಹಣಕಾಸು ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ.;
ಕ್ಯಾನ್ಸರ್ನಿಂದ ಬಳಲುತ್ತಿರುವ ಮಕ್ಕಳಿಗೆ ಶಿಕ್ಷಣ ಮತ್ತು ನಿರಂತರ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿರಿಸಿದೆ. ರಾಜ್ಯದಲ್ಲಿ ಗುರುತಿಸಲಾಗಿರುವ ಸುಮಾರು 3,500 ಕ್ಯಾನ್ಸರ್ಪೀಡಿತ ಮಕ್ಕಳಿಗೆ ಅನುಕೂಲವಾಗುವಂತೆ ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಸಮೀಪದಲ್ಲಿ ವಸತಿಯುತ ಶಾಲೆಯೊಂದನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕ್ಯಾನ್ಸರ್ ಈಗ ಗುಣಪಡಿಸಬಹುದಾದ ಕಾಯಿಲೆಯಾಗಿದ್ದರೂ, ಅದಕ್ಕೆ ಆರಂಭಿಕ ಹಂತದಿಂದಲೇ ನಿರಂತರ ವೈದ್ಯಕೀಯ ಆರೈಕೆ ಬೇಕಾಗುತ್ತದೆ. ಚಿಕಿತ್ಸೆಯ ಅವಧಿ ಆರು ತಿಂಗಳಿಂದ ಒಂದು ವರ್ಷದವರೆಗೆ ಇರಬಹುದು. ಈ ಅವಧಿಯಲ್ಲಿ ಮಕ್ಕಳು ಶಾಲೆಯಿಂದ ದೂರವಾಗಬಾರದು ಎಂಬ ಉದ್ದೇಶದಿಂದ ಈ ವಸತಿಯುತ ಶಾಲೆ ನೆರವಾಗಲಿದೆ ಎಂದು ಸಚಿವರು ವಿವರಿಸಿದರು.
ಒಂದು ಸರ್ಕಾರೇತರ ಸಂಸ್ಥೆ (ಎನ್ಜಿಒ) ನಡೆಸಿದ ಸಮೀಕ್ಷೆಯ ಮೂಲಕ ಈ ಕ್ಯಾನ್ಸರ್ಪೀಡಿತ ಮಕ್ಕಳನ್ನು ಗುರುತಿಸಲಾಗಿದೆ. ಆರಂಭದಲ್ಲಿ 1,500 ಮಕ್ಕಳಿಗೆ ಈ ವಸತಿಯುತ ಶಾಲೆಯಲ್ಲಿ ಪ್ರವೇಶ ಕಲ್ಪಿಸಲಾಗುವುದು. ಕಿದ್ವಾಯಿ ಆಸ್ಪತ್ರೆಗೆ ಹತ್ತಿರದಲ್ಲೇ ಇಲಾಖೆಗೆ ಸೇರಿದ 3 ಎಕರೆ ಜಾಗವನ್ನು ಈಗಾಗಲೇ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಕ್ಕಳನ್ನು ನೋಡಿಕೊಳ್ಳಲು ಬರುವ ಪೋಷಕರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆಯನ್ನೂ ಒದಗಿಸಲಾಗುವುದು ಎಂದು ಮಧು ಬಂಗಾರಪ್ಪ ಮಾಹಿತಿ ನೀಡಿದರು.
ಜುಲೈ ತಿಂಗಳಿನಿಂದಲೇ ಈ ಶಾಲೆಯನ್ನು ಕಾರ್ಯಾರಂಭ ಮಾಡಲು ಯೋಜಿಸಲಾಗಿದ್ದು, ಅಗತ್ಯ ಮೂಲಸೌಕರ್ಯ ಮತ್ತು ಹಣಕಾಸು ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಆಸ್ಪತ್ರೆಗೆ ಮಕ್ಕಳನ್ನು ಕರೆದೊಯ್ಯಲು ಮತ್ತು ಕರೆತರಲು ಬಸ್ ಸೌಲಭ್ಯ ಇರಲಿದೆ. ಕ್ಯಾನ್ಸರ್ಪೀಡಿತರನ್ನು ರೋಗಿಗಳಂತೆ ನೋಡದೆ, ಸಾಮಾನ್ಯ ಮಕ್ಕಳಂತೆಯೇ ಪರಿಗಣಿಸಿ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗುವುದು ಎಂದೂ ಸಚಿವರು ಸ್ಪಷ್ಟಪಡಿಸಿದರು.
ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ 'ಡಯೆಟ್'ಗಳಿಗೆ ಜವಾಬ್ದಾರಿ
ಇದೇ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಾಲೆಗಳ ಫಲಿತಾಂಶ ಸುಧಾರಣೆ ಕುರಿತಂತೆಯೂ ಸಚಿವರು ಮಾತನಾಡಿದರು. ಪ್ರತಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಸಾಧನೆ ಮಾಡಿದ ಶಾಲೆಗಳ ಪಟ್ಟಿಯನ್ನು ತಯಾರಿಸಿ, ಈ ಶೈಕ್ಷಣಿಕ ವರ್ಷದಿಂದ ಆಯಾ ಜಿಲ್ಲೆಯಲ್ಲಿರುವ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ (ಡಯೆಟ್-DIET) ತಜ್ಞರಿಗೆ ಹಂಚಿಕೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದರು.
ಆ ಶಾಲೆಗಳ ಫಲಿತಾಂಶವನ್ನು ಸುಧಾರಿಸುವ ಜವಾಬ್ದಾರಿ ಆಯಾ ಶಿಕ್ಷಣ ತಜ್ಞರದ್ದಾಗಿರುತ್ತದೆ. ತಮ್ಮ ಜವಾಬ್ದಾರಿಯಲ್ಲಿ ವಿಫಲರಾದರೆ, ಆ ಡಯೆಟ್ನಿಂದ ಅವರನ್ನು ಬೇರೆಡೆಗೆ ವರ್ಗಾಯಿಸಲಾಗುವುದು. "ಡಯೆಟ್ಗಳು ನಿಷ್ಕ್ರಿಯಗೊಂಡಿವೆ, ಅವು ನಿರಾಶ್ರಿತರ ತಾಣಗಳಾಗಿವೆ ಎಂಬ ಆರೋಪಗಳಿವೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗುತ್ತಿದೆ" ಎಂದು ಮಧು ಬಂಗಾರಪ್ಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.