Mysuru MUDA Scam| ರಾಜೀನಾಮೆ ಇಲ್ಲ; ರಾಜ್ಯಪಾಲರ ಕ್ರಮದ ವಿರುದ್ಧ ಕಾನೂನು ಹೋರಾಟ: ಸಿದ್ದರಾಮಯ್ಯ

ಬಿಜೆಪಿಗೆ ನನ್ನ ನಾಯಕತ್ವವನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Update: 2024-08-17 09:21 GMT

ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌ ಅವರ ಕ್ರಮದ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ವಿರುದ್ಧ ಕೆಂದ್ರ ಸರ್ಕಾರ, ಬಿಜೆಪಿ, ಸ್ಥಳೀಯ ಬಿಜೆಪಿ ನಾಯಕರು ಹಾಗೂ  ಜೆಡಿಎಸ್‌ ಈ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮಾಧ್ಯಮಗಳಿಗೆ ತಮ್ಮ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ಪ್ರಕರಣದಲ್ಲಿ ತಮ್ಮ ಪಾತ್ರದ ಬಗ್ಗೆ ಯಾವುದೇ ಪುರಾವೆ ಇಲ್ಲ ಅಥವಾ ಮೇಲ್ನೋಟಕ್ಕೆ ಸಾಬೀತಾಗುವ ಅಂಶಗಳಿಲ್ಲ. ಬಿಜೆಪಿಗೆ ತಮ್ಮ ರಾಜೀನಾಮೆ ಕೇಳುವ ಯಾವುದೇ ನೈತಿಕತೆ ಇಲ್ಲ. ತಾವು ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವವಾಗಿಲ್ಲ ಎಂದು  ಹೇಳಿದ್ದಾರೆ.

ಮುಡಾ ಹಗರಣದ ಸಂಬಂದ ಮೂವರು ಖಾಸಗಿ ವ್ಯಕ್ತಿಗಳ ದೂರಿನ ಅನ್ವಯ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕ್ರಮ ಸಂವಿಧಾನ ಬಾಹಿರ.   ಅವರು ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ. ರಾಜ್ಯಪಾಲರ ಬಳಿ ಲೋಕಾಯುಕ್ತ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ವಿರುದ್ಧ ತನಿಖೆಗೆ ಅನುಮತಿ ನೀಡುವ ಅರ್ಜಿ ಇದೆ. ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣವೂ ಇದೆ. ಈ ಬಗ್ಗೆ ರಾಜ್ಯಪಾಲರು ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಜ್ಯಪಾಲರು ಕೈಗೊಂಬೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ.  ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ

ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.



Tags:    

Similar News