ಡಿಜಿ-ಐಜಿಪಿ ಡಾ.ಎಂ.ಎ. ಸಲೀಂ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಕೆ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಮೇ 21ರಂದು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.;

Update: 2025-06-10 06:06 GMT

ಡಿಜಿ-ಐಜಿಪಿ ಡಾ.ಎಂ.ಎ. ಸಲೀಂ

ಹಿರಿಯ ಐಪಿಎಸ್‌ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ಪ್ರಭಾರ ಪೊಲೀಸ್ ಮಹಾ ನಿರ್ದೇಶಕರಾಗಿ (ಡಿಜಿ - ಐಜಿಪಿ) ನೇಮಕ ಮಾಡಿದ ಸರ್ಕಾರದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ.

ವಕೀಲೆ ಸುಧಾ ಕಾಟ್ವಾ ಸಲ್ಲಿಸಿರುವ ಅರ್ಜಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ಲೋಕಸೇವಾ ಆಯೋಗ ಮತ್ತು ಪ್ರಭಾರ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಇನ್ನೂ ಉಚ್ಚ ನ್ಯಾಯಾಕಯದಲ್ಲಿ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿ ಏನಿದೆ? 

ಪ್ರಕಾಶ್‌ ಸಿಂಗ್‌ ಪ್ರಕರಣದಲ್ಲಿ ಕಾಯಂ ಡಿಜಿಪಿಯನ್ನು ನೇಮಕ ಮಾಡುವಾಗ ನಿರ್ದಿಷ್ಟ ಪ್ರಕ್ರಿಯೆ ಕಡ್ಡಾಯವಾಗಿ ಪಾಲಿಸಬೇಕೆಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಯಾವುದೇ ಕಾರಣಕ್ಕೂ ಕಾರ್ಯಕಾರಿ ಅಥವಾ ಪ್ರಭಾರ ಡಿಜಿಪಿಯನ್ನು ನೇಮಿಸಬಾರದು. ಪ್ರಭಾರ ಡಿಜಿಪಿ ಎಂಬ ಪರಿಕಲ್ಪನೆಯೇ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈ ಆದೇಶ ಉಲ್ಲಂಘಿಸಿ ಡಾ. ಸಲೀಂ ಅವರನ್ನು ಪ್ರಭಾರ ಡಿಜಿ - ಐಜಿಪಿಯಾಗಿ ನೇಮಿಸಿ 2025ರ ಮೇ 21ರಂದು ರಾಜ್ಯ ಸರಕಾರ ಆದೇಶ ಮಾಡಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

 ಡಿಜಿ - ಐಜಿಪಿ ನೇಮಕಕ್ಕೆ ಅರ್ಹರ ಹೆಸರನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌‍ಸಿ)ಕ್ಕೆ ಕಳುಹಿಸಲು ಉನ್ನತ ಮಟ್ಟದ ಸಮಿತಿ ರಚಿಸಬೇಕು. ಆ ಸಮಿತಿ ರಾಜ್ಯದಲ್ಲಿನ ಸೇವಾ ಹಿರಿತನ ಹೊಂದಿರುವ ಮೂವರು ಹಿರಿಯ ಐಪಿಎಸ್‌ ಅಧಿಕಾರಿಗಳ ಸೇವೆ ಹಾಗೂ ನಡಾವಳಿ ಪರಿಶೀಲಿಸಿ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಬೇಕು. ಶಿಫಾರಸುಗೊಂಡವರಲ್ಲಿ ಒಬ್ಬರನ್ನು ಮುಖ್ಯಮಂತ್ರಿಗಳು ಡಿಜಿಪಿಯಾಗಿ ನೇಮಿಸಬೇಕು.

ಆದರೆ, ಯುಪಿಎಸ್‌ಸಿಯಿಂದ ಆರ್‌ಟಿಐ ಮೂಲಕ ಪಡೆದ ಉತ್ತರದಿಂದ ಮೇ 21ರಿಂದ ಖಾಲಿಯಾಗಲಿರುವ ಡಿಜಿ - ಐಜಿಪಿ ನೇಮಕಕ್ಕೆ ಉನ್ನತ ಸಮಿತಿ ರಚನೆ ಮಾಡಲು ಸರಕಾರ ಪ್ರಸ್ತಾವನೆ ಕಳುಹಿಸಿದೆ. ಆ ಪ್ರಕ್ರಿಯೆಯಲ್ಲಿ ಕೆಲ ಲೋಪ ಉಂಟಾಗಿದೆ. ಆ ಕುರಿತು ಸರಕಾರದಿಂದ ಸ್ಪಷ್ಟೀಕರಣಕ್ಕಾಗಿ ಕಾಯುತ್ತಿರುವುದಾಗಿ ಕೇಂದ್ರ ಲೋಕಸೇವಾ ಆಯೋಗ ತಿಳಿಸಿದೆ. ಇದರಿಂದ ಉನ್ನತ ಸಮಿತಿ ರಚನೆಯೇ ಆಗಿಲ್ಲ ಎಂಬುದು ದೃಢಪಡುತ್ತದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಂದ ತೆರವಾದ ಸ್ಥಾನಕ್ಕೆ, ಸೇವಾ ಹಿರಿತನ ಆಧಾರದ ಮೇಲೆ ಸಿಐಡಿ ಡಿಜಿಪಿ ಡಾ.ಎಂ.ಎ. ಸಲೀಂ ಅವರನ್ನು ಮೇ 21ರಂದು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 

Tags:    

Similar News