ರಾಜಕೀಯವಾಗಿ ತೊಂದರೆ ಕೊಡಬಹುದು; ಆದರೆ ನನ್ನನ್ನು ಅಲ್ಲಾಡಿಸಲು ಸಾಧ್ಯವಿಲ್ಲ: ಸಿದ್ದರಾಮಯ್ಯ

Update: 2024-09-29 13:27 GMT

ಆತ್ಮಸಾಕ್ಷಿಯಾಗಿ ನಾನು ಸರಿಯಾಗಿದ್ದೀನಿ. ಹೀಗಾಗಿ ನಾನು ಹೆದರುವ, ಜಗ್ಗುವ-ಬಗ್ಗುವ ಪ್ರಶ್ನೆಯೇ ಇಲ್ಲ.ಜನರ ಆಶೀರ್ವಾದ, ನಿಮ್ಮೆಲ್ಲರ ಬೆಂಬಲ ಇರುವವರೆಗೂ ನಾನು ಅಲ್ಲಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.

ಮೈಸೂರಿನ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, "ಬಹಳ ಜನ ಬಂದು ಬಂದು ನನಗೆ, "ಧೈರ್ಯವಾಗಿರಿ, ರಾಜೀನಾಮೆ ಕೊಡಬೇಡಿ" ಅಂತಾರೆ. ನಾನು ಇದಕ್ಕೆಲ್ಲಾ ಹೆದರುವವನೇ ಅಲ್ಲ. ರಾಜಕೀಯವಾಗಿ ನನಗೆ ಒಂದೆರಡು ತಿಂಗಳು ತೊಂದರೆ ಕೊಡಬಹುದು. ಆದರೆ ಕಾನೂನಾತ್ಮಕವಾಗಿ ನಾನು ಗೆದ್ದೇ ಗೆಲ್ತೇನೆ. ರಾಜಕೀಯವಾಗಿ ಇದನ್ನೆಲ್ಲಾ ಎದುರಿಸಿ ನಿಲ್ಲೋದು ನನಗೆ ಗೊತ್ತಿದೆ," ಎಂದು ಘೋಷಿಸಿದರು.

ಅಂಬೇಡ್ಕರ್‌ ಸಂಪುಟಗಳ ಕನ್ನಡ ಅನುವಾದ

ನಾವೆಲ್ಲಾ ಅಂಬೇಡ್ಕರ್ ವಾದಿಗಳು. ಅವಕಾಶಗಳಿಂದ ವಂಚಿತರಾದವರೆಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ ಎಂದರು. ಸಂವಿಧಾನ ಜಾರಿ ಸಭೆಯಲ್ಲಿ ಅಂಬೇಡ್ಕರ್ ಅವರು ಮಾಡಿದ 10 ಸಂಪುಟಗಳ ಭಾಷಣವನ್ನು ನಾನು ಕನ್ನಡಕ್ಕೆ ಮಾಡಿಸಿದ್ದೇನೆ. ಈ ಎಲ್ಲವನ್ನೂ ಪ್ರತಿಯೊಬ್ಬರೂ ಓದಬೇಕು ಎಂದು ಕರೆ ನೀಡಿದರು. 

ದಲಿತರಿಗೆ ಬಜೆಟ್‌ ಮೀಸಲು

ದೇಶದ ಬಜೆಟ್ ಗಾತ್ರ 48 ಲಕ್ಷ ಕೋಟಿ. ಇದರಲ್ಲಿ ಅಭಿವೃದ್ಧಿಗೆ 28ಲಕ್ಷ ಕೋಟಿ ಖರ್ಚಾಗುತ್ತದೆ. ಇದರಲ್ಲಿ ಶೇ24 ರಷ್ಟು ಹಣವನ್ನು ದಲಿತರ ಅಭಿವೃದ್ಧಿಗೆ ಕೊಡಬೇಕಿತ್ತು. ಆದರೆ ಕೊಡುತ್ತಿರುವುದು ಕೇವಲ 60 ಸಾವಿರ ಕೋಟಿ ಎಂದರು. ಆದರೆ ನಮ್ಮ ರಾಜ್ಯದ ಅಭಿವೃದ್ಧಿ ಬಜೆಟ್ ನಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಹಣ ಮೀಸಲಿಟ್ಟಿದ್ದೀವಿ. ಸಮಾಜದಲ್ಲಿ ಎಲ್ಲರಿಗೂ ಸಮಾನ ಅವಕಾಶಗಳನ್ನು ಒದಗಿಸಿಕೊಡುವ ಭಾಗವಾಗಿ ಈ ಹಣ ಮೀಸಲು ಎಂದರು.

ಬಜೆಟ್ ನಲ್ಲಿ 59000 ಕೋಡಿ ಹಣವನ್ನು ಗ್ಯಾರಂಟಿಗಳ ಜಾರಿಗಾಗಿ ಮೀಸಲಿಟ್ಟಿದ್ದೇನೆ. ಇಷ್ಟೂ ಹಣ ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ವರ್ಗದವರಿಗೂ ತಲುಪುತ್ತಿದೆ. ವಿರೋಧ ಪಕ್ಷಗಳು ಎಷ್ಟೇ ಸುಳ್ಳು, ಅಪಪ್ರಚಾರ ಮಾಡಿದರೂ ಈ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚಸಿದರು.

Tags:    

Similar News