ಗೌರಿ ಲಂಕೇಶ್ ಹತ್ಯೆ ಆರೋಪಿ ಭೇಟಿಯಾದ ಪ್ರತಾಪ್‌ ಸಿಂಹ: ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ

Update: 2024-08-13 09:57 GMT

ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಭೇಟಿಯಾಗಿದ್ದಾರೆ.

ಎರಡು ಅವಧಿಗೆ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಪ್ರತಾಪ್‌ ಸಿಂಹ, ಗೌರಿ ಹತ್ಯೆ ಆರೋಪಿಯೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಪ್ರತಾಪ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಭುಗಿಲೆದ್ದಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ‌ ಹಾಗೂ ಬಿಜೆಪಿ ಮುಖಂಡ ಪ್ರತಾಪ್ ಸಿಂಹ‌ ಆಪ್ತ ಸ್ನೇಹಿತರು ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ. ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್ ಏಕಸದಸ್ಯ ಪೀಠವು ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಎಚ್ಎಲ್ ಸುರೇಶ್ ಅವರಿಗೆ ಜುಲೈ 16ರಂದು ಜಾಮೀನು ನೀಡಿತ್ತು. ಸೋಮವಾರ (ಆ.12) ಪ್ರತಾಪ್ ಸಿಂಹ ಅವರು ಕೊಲೆ‌ ಆರೋಪಿ ನವೀನ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ʻʻಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೊದಲಿಗೆ ಆರೋಪಿ ನಂ-1 ಆಗಿ, ನಂತರ ಎ-17 ಆಗಿ, ಆರೂವರೆ ವರ್ಷ ಜೈಲಿನಲ್ಲಿದ್ದು ಇತ್ತೀಚೆಗೆ ಜಾಮೀನಿನ ಹೊರಬಂದಿರುವ ಸ್ನೇಹಿತ ಮದ್ದೂರು ನವೀನ್ ರನ್ನು ಭೇಟಿಯಾಗಿ ಅರೋಗ್ಯ ವಿಚಾರಿಸಿದೆ. ಮದ್ದೂರಿನ ಯುವ ಸ್ನೇಹಿತರೂ ಜತೆಗಿದ್ದರುʼʼ ಎಂದು ಬರೆದುಕೊಂಡಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಪ್ರತಾಪ್ ಸಿಂಹ ಭೇಟಿಯಾಗಿರುವುದು ವಿವಾದಕ್ಕೆ ನಾಂದಿ ಹಾಡಿದೆ. ಕೊಲೆ ಆರೋಪಿಯೊಬ್ಬ ಪ್ರತಾಪ್ ಸಿಂಹ ಸ್ನೇಹಿತ ಎಂಬ ವಿಚಾರವೂ ಇದೀಗ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದು, ʻʻಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಮದ್ದೂರಿನ ನವೀನ್ ಕುಮಾರ್ ತನ್ನ ಗೆಳೆಯ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿಕೊಂಡಿದ್ದಾರೆ. ಗೋಡ್ಸೆ ಆರಾಧಕರಾದ ಬಿಜೆಪಿಯವರ ಅಸಲಿ ಮುಖವೆ ಇದು‌ʼʼ ಎಂದು ಕಿಡಿಕಾರಿದ್ದಾರೆ.

ʻʻಸಮಾಜದ ಶಾಂತಿ ಕದಡುವ, ಕೊಲೆ, ಸುಲಿಗೆಯಂತಹ ವಿದ್ವಂಸಕ ಕೃತ್ಯ ನಡೆಸುವವರೆಲ್ಲಾ ಬಿಜೆಪಿಯ ಗರ್ಭಗುಡಿಯಲ್ಲೇ ಇರುತ್ತಾರೆ‌ ಎಂಬುವುದಕ್ಕೆ ಇದೊಂದು ನಿದರ್ಶನ. ದಿಟ್ಟ ಪತ್ರಕರ್ತೆಯಾಗಿದ್ದ ಗೌರಿ ಲಂಕೇಶ್‌ರವರನ್ನು ನಿಷ್ಕಾರಣವಾಗಿ ಕೊಲೆಗೈದ ಆರೋಪಿಯ ಕೃತ್ಯವನ್ನು ಬಿಜೆಪಿಯ‌ ಮಾಜಿ ಸಂಸದರು ಖಂಡಿಸುವ ಬದಲು, ಆ ಆರೋಪಿಯ ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆಸಿಕೊಂಡರೆ ಸಮಾಜಕ್ಕೆ ಯಾವ ಸಂದೇಶ ಹೋಗುತ್ತದೆ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭೆ ಟಿಕೆಡ್ ಕೈತಪ್ಪಿದ ನಂತರ ಕಾರ್ಯಕರ್ತರ ಜತೆ ನಿಲ್ಲುತ್ತೇನೆ ಎಂದು ಬಿಂಬಿಸಿಕೊಳ್ಳುತ್ತಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಕೊಲೆ ಆರೋಪಿಗಳು ಮತ್ತು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಪುನೀತ್ ಕೆರೆಹಳ್ಳಿ ಎಂಬಾತನ ಬೆಂಬಲಕ್ಕೆ ನಿಂತು ಸುದ್ದಿಯಲ್ಲಿದ್ದಾರೆ.

ಕೆಲ ದಿನಗಳ ಹಿಂದೆ ಬೆಂಗಳೂರಿನ ಮಾಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಚಂದನ್‌ ಕುಮಾರ್‌ ಅವರು, ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು. ಪುನೀತ್ ಬಂಧನ ವಿರೋಧಿಸಿ ಪ್ರತಾಪ್‌ ಸಿಂಹ ಪೊಲೀಸ್ ಠಾಣೆ ಮುಂದೆ ಹೋಗಿ ಗುಂಪುಗೂಡಿಸಿ ಗಲಾಟೆ ಮಾಡಿದ್ದರು. ಈ ವೇಳೆ ಅಪರಾಧ ಹಿನ್ನೆಲೆಯ ಪುನೀತ್ ಕೆರೆಹಳ್ಳಿಯನ್ನು ಪ್ರತಾಪ್‌ ಸಿಂಹ ಅವರು ತಮ್ಮ ಸಹೋದರ ಎಂದು ಹೇಳಿದ್ದರು. ಇದೀಗ ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾಗಿ ಆತ ತನ್ನ ಸ್ನೇಹಿತ ಎಂದಿದ್ದಾರೆ.

ʻʻಕೊಲೆ‌ ಆರೋಪಿಗಳು, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವವರನ್ನು ತನ್ನ ಸಹೋದರ ಮತ್ತು ಸ್ನೇಹಿತರು ಎಂದು ಪ್ರತಾಪ್‌ ಸಿಂಹ ಹೇಳುತ್ತಿದ್ದಾರೆ. ಈತನಿಗೆ ಟಿಕೆಟ್ ಕೈತಪ್ಪಿದ್ದೆ ಒಳ್ಳೆದಾಯಿತುʼʼ ಎಂದು ಜಾಲತಾಣಗಳಲ್ಲಿ ಹಲವರು ಕಾಮೆಂಟ್ ಮಾಡಿದ್ದಾರೆ.

Tags:    

Similar News