ಕರಾವಳಿ ಮತ್ತು ಮಲೆನಾಡಲ್ಲಿ ಮಳೆ ಅಬ್ಬರ; ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗಿನಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ
ಸಂಬಂಧಪಟ್ಟ ಜಿಲ್ಲಾಡಳಿತಗಳು ಭೂಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ. ವಿದ್ಯುತ್ ಕಂಬಗಳು ಸೇರಿದಂತರೆ ಅಪಾಯಕಾರಿ ವಸ್ತುಗಳನ್ನು ಮುಟ್ಟದಂತೆ ಹಾಗೂ ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.;
ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನಿರಂತರ ವರ್ಷಧಾರೆಯಿಂದಾಗಿ ಹಲವೆಡೆ ಭೂಕುಸಿತ, ರಸ್ತೆ ಸಂಪರ್ಕ ಕಡಿತ ಮತ್ತು ವಿದ್ಯುತ್ ವ್ಯತ್ಯಯಗಳು ಸಂಭವಿಸಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಸಂಪರ್ಕ ರಸ್ತೆಯ ಪ್ರಮುಖ ಭಾಗವಾದ ದೇವಿಮನೆ ಘಟ್ಟ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಮತ್ತೆ ಭೂಕುಸಿತ ಸಂಭವಿಸಿದೆ. ಕಳೆದೆರಡು ದಿನಗಳ ಅವಧಿಯಲ್ಲಿ ಇದು ಎರಡನೇ ಭೂಕುಸಿತ ಪ್ರಕರಣವಾಗಿದೆ. ಶನಿವಾರ ರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯೇ ಇದಕ್ಕೆ ಕಾರಣ.
ರಸ್ತೆ ನಿರ್ಮಾಣ ಕಂಪನಿಯು ತೆರವು ಕಾರ್ಯವನ್ನು ಆರಂಭಿಸಿದೆ. ಶಿರಸಿ ಮತ್ತು ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿಗಳ ವೇಳೆ ಗುಡ್ಡಗಳನ್ನು ಅವೈಜ್ಞಾನಿಕವಾಗಿ ಕಡಿದಿರುವುವುದ ಪದೇ ಪದೇ ಭೂಕುಸಿತಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. "ಜೋರು ಮಳೆಯಾದರೆ ಇನ್ನಷ್ಟು ಕಡೆ ಅಪಾಯವಾಗುವ ಸಾಧ್ಯತೆಯಿದೆ. ಈ ರಸ್ತೆಯಲ್ಲಿ ಸಂಚರಿಸುವುದು ಎಂದರೆ ಭಯದಲ್ಲೇ ಸಾಗುವಂತಾಗಿದೆ" ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯ ಆರ್ಭಟ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಭಾರೀ ಮಳೆ ಮುಂದುವರಿದಿದೆ. ನಗರದ ಹೊರವಲಯದ ಕೆತ್ತಿಕಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಕುಸಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಶನಿವಾರ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್, ಜಪ್ಪಿನಮೊಗರು ಮತ್ತಿತರ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿದಿದ್ದು, ನಿವಾಸಿಗಳು ಸ್ವಚ್ಛತಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಮಂಗಳೂರು ನಗರದ ಕಂಕನಾಡಿ ಬಳಿಯ ನಾಗುರಿ ಸಮೀಪದ ಜನವಸತಿ ಪ್ರದೇಶದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿದು ಕೆಲವು ಮನೆಗಳಿಗೆ ಹಾನಿಯಾಗಿದೆ. ಮರೋಳಿ ಸಮೀಪ ಪೊಲೀಸರ ಕುಟುಂಬಗಳು ಸೇರಿದಂತೆ ಬಾಡಿಗೆಗೆ ವಾಸಿಸುತ್ತಿದ್ದ ಸುಮಾರು 12 ಮನೆಗಳಿಗೆ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ. ಉಡುಪಿ ಜಿಲ್ಲೆಯಲ್ಲೂ ಇದೇ ರೀತಿಯ ವಾತಾವರಣವಿದ್ದು, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಚಿಕ್ಕಮಗಳೂರು ಮಲೆನಾಡಲ್ಲಿ ಭೂಕುಸಿತ, ವಿದ್ಯುತ್ ವ್ಯತ್ಯಯ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆ ಮತ್ತು ಗಾಳಿಯ ಆರ್ಭಟ ಮುಂದುವರಿದಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದ ಗುಡ್ಡ ಕುಸಿತ ಸಂಭವಿಸಿದ್ದು, ಶೃಂಗೇರಿ-ಮಂಗಳೂರು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ನಿರಂತರ ಮಳೆಯಿಂದಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭೂಮಿಯ ಸ್ಥಿರತೆ ಕಡಿಮೆಯಾಗಿದ್ದು, ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದೆ. ಮಣ್ಣು ಮತ್ತು ಕಲ್ಲುಬಂಡೆಗಳು ರಸ್ತೆಯ ಮೇಲೆ ಉರುಳಿಬಿದ್ದಿರುವುದರಿಂದ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಶೃಂಗೇರಿ ತಾಲೂಕಿನಾದ್ಯಂತ ವಿದ್ಯುತ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿ ಹಲವು ಗ್ರಾಮೀಣ ಪ್ರದೇಶಗಳು ಕತ್ತಲಿನಲ್ಲಿ ಮುಳುಗಿವೆ. ಜೂನ್ 14ರಂದು ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಕವಿಕಲ್ ಗಂಡಿ ಬಳಿ ಸಣ್ಣ ಪ್ರಮಾಣದ ಭೂಕುಸಿತ ಸಂಭವಿಸಿತ್ತು. ಸಿರಿಮನೆ ಜಲಪಾತ ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿದ್ದು, ತುಂಗಾ ನದಿಯೂ ತುಂಬಿ ಹರಿಯುತ್ತಿರುವುದರಿಂದ ಪ್ರವಾಹದ ಆತಂಕ ಎದುರಾಗಿದೆ.
ಕೊಡಗಿನಲ್ಲಿ ಹಾರಂಗಿ ಜಲಾಶಯ ಭರ್ತಿ, ನೀರು ಬಿಡುಗಡೆ
ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಶಾಲನಗರ ಸಮೀಪದ ಹಾರಂಗಿ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಜಲಾಶಯವು ಬಹುತೇಕ ಭರ್ತಿಯಾಗಿದ್ದು, ಗರಿಷ್ಠ ಮಟ್ಟವಾದ 2,859 ಅಡಿಗಳಲ್ಲಿ ಪ್ರಸ್ತುತ 2,852 ಅಡಿ ನೀರು ಸಂಗ್ರಹವಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಲಾಶಯದ ನಾಲ್ಕು ಕ್ರೆಸ್ಟ್ ಗೇಟ್ಗಳನ್ನು ತೆರೆದು 4,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗುತ್ತಿದೆ. ಜಿಲ್ಲಾಡಳಿತವು ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದು, ಸುರಕ್ಷಿತ ಸ್ಥಳಗಳಲ್ಲಿ ಇರಲು ಸೂಚಿಸಿದೆ.
ಜಿಲ್ಲಾಡಳಿತಗಳ ಮುನ್ನೆಚ್ಚರಿಕಾ ಕ್ರಮಗಳು
ಸಂಬಂಧಪಟ್ಟ ಜಿಲ್ಲಾಡಳಿತಗಳು ಭೂಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿವೆ. ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಸಂಚಾರ ಪುನರ್ಸ್ಥಾಪಿಸಲು ಯತ್ನಿಸುತ್ತಿವೆ. ಸಾರ್ವಜನಿಕರು ಅಪಾಯಕಾರಿ ಪ್ರದೇಶಗಳಿಂದ ದೂರವಿರುವಂತೆ, ವಿದ್ಯುತ್ ತಂತಿಗಳ ಬಗ್ಗೆ ಜಾಗರೂಕರಾಗಿರುವಂತೆ ಮತ್ತು ಅಗತ್ಯವಿದ್ದರೆ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ಸೂಚಿಸಲಾಗಿದೆ.