ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಮೇಲ್ಮನವಿಗೆ ರೇವಣ್ಣ ಕುಟುಂಬ ಸಿದ್ಧತೆ

ಮೈಸೂರಿನ ಕೆ.ಆರ್.​ನಗರದ ಮಹಿಳೆ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆಗಸ್ಟ್‌ 2ರಂದು ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂಪಾಯಿ ದಂಡ ವಿಧಿಸಿತ್ತು.;

Update: 2025-08-09 06:25 GMT
ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ವಿಧಾನಪರಿಷತ್‌ ಸದಸ್ಯ ಸೂರಜ್‌ ರೇವಣ್ಣ

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಕುಟುಂಬ, ಈ ತೀರ್ಪನ್ನು ಪ್ರಶ್ನಿಸಿ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪ್ರಜ್ವಲ್ ಅವರ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ, "ಪ್ರಕರಣವು ನ್ಯಾಯಾಲಯದಲ್ಲಿರುವುದರಿಂದ ಹೆಚ್ಚು ಮಾತನಾಡುವುದು ಸೂಕ್ತವಲ್ಲ, ನಾವು ಖಂಡಿತವಾಗಿಯೂ ಮೇಲ್ಮನವಿ ಸಲ್ಲಿಸುತ್ತೇವೆ" ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನ ಕೆ.ಆರ್. ನಗರ ಮೂಲದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದಲ್ಲಿ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆಗಸ್ಟ್ 2ರಂದು ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು ₹5 ಲಕ್ಷ ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿತ್ತು. ಅಷ್ಟೇ ಅಲ್ಲದೆ, ಸಂತ್ರಸ್ತ ಮಹಿಳೆಗೆ ₹7 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಲಯ ಆದೇಶಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ಆಗಸ್ಟ್ 1ರಂದು ಪ್ರಜ್ವಲ್ ಅವರನ್ನು ದೋಷಿ ಎಂದು ಘೋಷಿಸಿ, ಶಿಕ್ಷೆಯ ಪ್ರಮಾಣವನ್ನು ಮರುದಿನ ಪ್ರಕಟಿಸಿದ್ದರು. ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376(2)(k) (ಮಹಿಳೆಯ ಮೇಲೆ ನಿಯಂತ್ರಣ ಅಥವಾ ಪ್ರಾಬಲ್ಯದ ಸ್ಥಾನದಲ್ಲಿದ್ದು ಅತ್ಯಾಚಾರ ಎಸಗುವುದು) ಮತ್ತು ಸೆಕ್ಷನ್ 376(2)(n) (ಒಬ್ಬನೇ ವ್ಯಕ್ತಿಯು ಅದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗುವುದು) ಅಡಿಯಲ್ಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಕಠಿಣ ಶಿಕ್ಷೆ ವಿಧಿಸಲಾಗಿದೆ ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದರು.

ಈ ಮಹತ್ವದ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ವಾದ ಮಂಡಿಸಿದ್ದರೆ, ಪ್ರಜ್ವಲ್ ರೇವಣ್ಣ ಅವರ ಪರವಾಗಿ ಹಿರಿಯ ವಕೀಲೆ ನಳಿನಿ ಮಾಯಗೌಡ ಅವರು ವಾದ ಮಂಡಿಸಿದ್ದರು.

Tags:    

Similar News