ಆರ್‌ಸಿಬಿ ವಿಜಯೋತ್ಸದಲ್ಲಿ ಕಾಲ್ತುಳಿತ : ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಕೆಂಡಮಂಡಲ

ಯಾವುದೇ ಸಿದ್ಧತೆ ಇಲ್ಲದೆ ಸರ್ಕಾರ ಅಭಿನಂದನಾ ಸಮಾರಂಭ. ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ.;

Update: 2025-06-04 14:45 GMT

18 ವರ್ಷಗಳ ಬಳಿಕ ಐತಿಹಾಸಿಕ ಗೆಲುವು ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ)  ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸರ್ಕಾರ ವಿರುದ್ಧ  ಪ್ರತಿಪಕ್ಷ ಮುಖಂಡರು ಕೆಂಡಮಂಡಲರಾಗಿದ್ದಾರೆ. 

ಯಾವುದೇ ಸಿದ್ಧತೆ ಇಲ್ಲದೆ ಸರ್ಕಾರ ಅಭಿನಂದನಾ ಸಮಾರಂಭ ಆಯೋಜಿಸಿದ್ದು ಘಟನೆ ಕಾರಣ. ಅಭಿಮಾನಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ರಾಜ್ಯ  ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರವು ಆತುರದ ನಿರ್ಧಾರದಿಂದಾಗಿ ಹಲವು ಜನರು ಜೀವ ಕಳೆದುಕೊಳ್ಳುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಮುಖಂಡರು ಬೌರಿಂಗ್‌ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆಗೊಳಗಾಗಿರುವವರ ಯೋಗಕ್ಷೇಮ ವಿಚಾರಿಸಿದರು. ಅಲ್ಲದೇ, ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸಹ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ದಾಖಲಾಗಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 

ಚಿಕಿತ್ಸೆಗೊಳಗಾದವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು ಮತ್ತು ಮೃತಪಟ್ಟ ಕುಟುಂಬದವರಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಸಂಭ್ರಮ ಆಚರಣೆ ಈಗ ಸೂತಕದ ಮನೆಯಾಗಿದೆ. ಇದಕ್ಕೆ ಯಾರು ಹೊಣೆ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀರ್ಮಾನ ಮಾಡಬೇಕು. ರಾಜ್ಯಸರ್ಕಾರ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಪ್ರಚಾರದ ಹುಚ್ಚಿನಿಂದಾಗಿ ಇಂತಹ ಘಟನೆ ನಡೆದಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ. ಲಕ್ಷಾಂತರ ಜನರು ಬರಲಿದ್ದಾರೆ ಎಂಬುದನ್ನು ಸರ್ಕಾರಕ್ಕೆ ಗೊತ್ತಿರಲಿಲ್ಲವೇ?  ಕಿಡಿಕಾರಿದರು. 

ವಿಧಾನಸಭಾ ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಮಾತನಾಡಿ, ಐಪಿಎಲ್‌ ಪಟ್ಟ ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ ಘಳಿಗೆ ಮಾಡಿರುವ ಕಾಂಗ್ರೆಸ್‌ ಸರ್ಕಾರದ ವಿವೇಚನಾ ರಹಿತ ದುರಾಡಳಿತವಾಗಿದೆ. ಅಮಾಯಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಕನ್ನಡಿಗರ ಜನಪ್ರಿಯ ಆರ್‌ಸಿಬಿ ತಂಡ ಚಾಂಪಿಯನ್‌ ಪಟ್ಟ ಗೆದ್ದ ಸಾಧನೆಯಲ್ಲಿ ತಾನೂ ಒಂದಿಷ್ಟು ಕ್ರೆಡಿಟ್‌ ಪಡೆಯಬೇಕು ಎನ್ನುವ ಆತುರದಲ್ಲಿ ಸರಿಯಾದ ಪೂರ್ವ ಸಿದ್ಧತೆ ಇಲ್ಲದೆ, ಯೋಜನೆ ಇಲ್ಲದೆ, ಪೊಲೀಸರಿಗೆ ಕಾಲಾವಕಾಶ ನೀಡದೆ ಅಭಿನಂದನಾ  ಸಮಾರಂಭ ನಡೆಸಲು ರಾಜ್ಯ ಸರ್ಕಾರ ದುಂಬಾಲು ಬಿದ್ಧಿದ್ದೆ ಈ ಅನಾಹುತಕ್ಕೆ ಕಾರಣ ಎಂದು ವಾಗ್ದಾಳಿ ನಡೆಸಿದರು. 

ಇನ್ನು, ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಮಾತನಾಡಿ, ಆರ್‌ಸಿಬಿ ತಂಡದ ವಿಜಯೋತ್ಸದ ಅಭಿನಂದನಾ ಸಮಾರಂಭದ ವೇಳೆ ಕಾಲ್ತುಳಿತದಿಂದ ಹಲವು ಅಭಿಮಾನಿಗಳ ಜೀವ ಹೋಗಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಯಾಕಿಷ್ಟು ಆತುರ. ಸೂಕ್ತ ಭದ್ರತೆ ಕೈಗೊಂಡು ಒಂದು ದಿನ ತಡವಾಗಿಯೇ ಕಾರ್ಯಕ್ರಮ ಆಯೋಜಿಸಬಹುದಿತ್ತು ಎಂದು ಕಿಡಿಕಾರಿದರು. 



Tags:    

Similar News