ರೇಣುಕಾಸ್ವಾಮಿ ಕೊಲೆ ಪ್ರಕರಣ| ನಟ ದರ್ಶನ್, ಪವಿತ್ರಾಗೌಡ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇನ್ನಿತರ ಐವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಅ.9ರವರೆಗೆ ವಿಸ್ತರಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿದೆ.

Update: 2025-09-26 06:54 GMT

ನಟ ದರ್ಶನ್‌

Click the Play button to listen to article

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಹಾಗೂ ಇತರೆ ಐವರು ಆರೋಪಿಗಳ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಅ.9 ರವರೆಗೆ ವಿಸ್ತರಿಸಿದೆ. 

ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ದರ್ಶನ್‌, ಪವಿತ್ರಾಗೌಡ ಬಂಧನ ಅವಧಿಯನ್ನು ಮತ್ತೆ 14ದಿನ ವಿಸ್ತರಿಸಿ ಮುಂದಿನ ವಿಚಾರಣೆಯನ್ನು ಸೆ.30ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಮಾತನಾಡಿದ ದರ್ಶನ್ ಪರ ವಕೀಲರು, ನ್ಯಾಯಾಲಯ ಸೂಚನೆ ನೀಡಿದರೂ ಕಕ್ಷಿದಾರರಿಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಗಮನ ಸೆಳೆದರು. ಈ ವೇಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ವಿಡಿಯೊ ಕಾನ್ಸರೆನ್ಸ್ ಮೂಲಕ ದರ್ಶನ್ ಹಾಗೂ ಪವಿತ್ರಾಗೌಡ ಅವರು ವಿಚಾರಣೆಗೆ ಹಾಜರಾಗಿದ್ದರು. ಉಳಿದ ಐವರು ಆರೋಪಿಗಳು ಖುದ್ದು ನ್ಯಾಯಾಲಯದಲ್ಲಿ ಹಾಜರಿದ್ದರು.

ವಾಕಿಂಗ್‌ ಸೂಕ್ತ ಜಾಗ ನೀಡಿಲ್ಲ

ವಿಚಾರಣೆ ವೇಳೆ ನಟ ದರ್ಶನ್ ಜೈಲಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದರು. ನನಗೆ 25 ಅಡಿ ಉದ್ದ ಮತ್ತು 3 ಅಡಿ ಅಗಲದ ಪ್ಯಾಸೇಜ್‌ನಲ್ಲಿ ವಾಕಿಂಗ್ ಮಾಡಲು ಸೂಚಿಸಿದ್ದಾರೆ, ಅಲ್ಲಿ ಸೂರ್ಯನ ಬೆಳಕು ಬೀಳುವುದಿಲ್ಲ. ಈವರೆಗೂ ಹಾಸಿಗೆ, ದಿಂಬು ಹಾಗೂ ಹೊದಿಕೆ ಸೇರಿದಂತೆ ಕನಿಷ್ಟ ಸೌಲಭ್ಯಗಳನ್ನು ನೀಡಿಲ್ಲ. ಕೇಳಿದರೆ ನ್ಯಾಯಾಲಯದ ಆದೇಶ ತೋರಿಸು ಅಂತಾರೆ. ನ್ಯಾಯಾಲಯದ ಆದೇಶ ಪಾಲಿಸದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಕೋರಿದರು. 

ಆಗ ನ್ಯಾಯಾಧೀಶರು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧೀಕ್ಷಕರಿಗೆ ಸೆ.30ರಂದು ಖುದ್ದು ವಿಚಾರಣೆಗೆ ಹಾಜರಾಗಲು ಸೂಚಿಸಿದರು.  

ನನಗೆ ವಿಷ ಕೊಡಿ ಎಂದಿದ್ದ ದರ್ಶನ್‌ 

ನಾನು ಹಲವು ದಿನಗಳಿಂದ ಬೆಳಕನ್ನೇ ನೋಡಿಲ್ಲ, ಬಟ್ಟೆಗಳಲ್ಲಿ ದುರ್ವಾಸನೆ ಬರುತ್ತಿದೆ. ಹಾಸಿಗೆ–ದಿಂಬು ಇಲ್ಲ,ಇಂತಹ ಪರಿಸ್ಥಿತಿಯಲ್ಲಿ ನನಗೆ ಬದುಕಲು ಸಾಧ್ಯವಿಲ್ಲ. ದಯವಿಟ್ಟು ನನ್ನೊಬ್ಬನಿಗೆ ವಿಷ ನೀಡಿ ಎಂದು ನಟ ದರ್ಶನ್‌ ಈ ಹಿಂದೆ ನ್ಯಾಯಾಲಯದಲ್ಲಿ ಕಣ್ಣೀರಿಟ್ಟಿದ್ದರು. 

ದರ್ಶನ್ ಸೆಲೆಬ್ರಿಟಿ ಆಗಿರುವ ಮತ್ತು ಈ ಹಿಂದೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯಗಳನ್ನು ಪಡೆದಿದ್ದಾರೆ ಎಂಬ ಆರೋಪ ಹಿನ್ನೆಲೆಯಲ್ಲಿ ಅವರನ್ನು ಹಾಗೂ ಇತರ ನಾಲ್ವರು ಆರೋಪಿಗಳಾದ ಲಕ್ಷ್ಮಣ್, ನಾಗರಾಜ್, ಜಗದೀಶ್ ಮತ್ತು ಪ್ರದೂಷ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸರ್ಕಾರವು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಆದರೆ, ದರ್ಶನ್ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಬೆಂಗಳೂರಿನಲ್ಲೇ ಉಳಿಯಲು ಬಯಸಿದ್ದರು.

ಜೈಲಿನಲ್ಲಿ ಕನಿಷ್ಠ ಮೂಲಸೌಕರ್ಯಗಳ ಕೊರತೆಯಿಂದ ತೊಂದರೆಯಾಗುತ್ತಿದೆ ಎಂದು ದರ್ಶನ್ ಪರವಾಗಿ ಸಲ್ಲಿಸಲಾಗಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯವು ದರ್ಶನ್‌ಗೆ ಹಾಸಿಗೆ, ದಿಂಬು ಸೇರಿ ಜೈಲು ಕೈಪಿಡಿ ಪ್ರಕಾರ ಆರೋಪಿಗೆ ಯಾವೆಲ್ಲಾ ಸೌಲಭ್ಯಗಳನ್ನು ನೀಡಬಹುದೋ, ಅವೆಲ್ಲವನ್ನೂ ಒದಗಿಸಿ ಎಂದು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

Tags:    

Similar News