ಸಂಪುಟ ಸಭೆಯಲ್ಲಿ ರೋಹಿತ್ ವೇಮುಲ ಕಾಯ್ದೆ ಪ್ರಸ್ತಾಪ; ಮುಂದಿನ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಣಯ
ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಏ.16 ರಂದು ಪತ್ರ ಬರೆದಿದ್ದರು. ಅದರಂತೆ ಕಾಯ್ದೆ ಸಿದ್ದಪಡಿಸಿ ಸಂಪುಟದ ಮುಂದೆ ಇರಿಸಲಾಗಿತ್ತು.;
ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯುವ ರೋಹಿತ್ ವೇಮುಲಾ ಕಾಯ್ದೆ ಕುರಿತು ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗಿದೆ. ಆದರೆ, ಕಾಯ್ದೆ ಕುರಿತು ವಿಸ್ತೃತ ಪರಿಶೀಲನೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಲು ತೀರ್ಮಾನಿಸಲಾಗಿದೆ.
ರಾಜ್ಯದಲ್ಲಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ತರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಏ.16 ರಂದು ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ ಸಿಎಂ ಅವರು ಮುಂದಿನ ಅಧಿವೇಶನದಲ್ಲಿ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿದ್ದರು. ಅದರಂತೆ ರೋಹಿತ್ ವೇಮುಲ ಕಾಯ್ದೆ ಸಿದ್ಧಪಡಿಸಿ ಸಂಪುಟ ಮುಂದೆ ತರಲಾಗಿತ್ತು.
ರೋಹಿತ್ ವೇಮುಲಾ, ಪಾಯಲ್ ತಡವಿ ಮತ್ತು ದರ್ಶನ್ ಸೋಲಂಕಿ ಆತ್ಮಹತ್ಯೆಗಳ ಕುರಿತು ಉಲ್ಲೇಖಿಸಿ, ಇಂತಹ ದುರ್ಘಟನೆಗಳನ್ನು ತಡೆಯಲು ಕಠಿಣ ಕಾನೂನು ಕ್ರಮ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು. ಅಲ್ಲದೇ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಾಲ್ಯದ ಅನುಭವಗಳನ್ನು ಉಲ್ಲೇಖಿಸಿ, ತ್ವರಿತವಾಗಿ ರೋಹಿತ್ ವೇಮುಲ ಕಾಯ್ದೆ ಜಾರಿಗೆ ಸೂಚಿಸಿದ್ದರು.
ಕಾಯ್ದೆ ಜಾರಿಗೆ ತರುವ ಮೊದಲ ರಾಜ್ಯ
ರೋಹಿತ್ ವೇಮುಲಾ ಕಾಯ್ದೆಯನ್ನು ಮುಂದಿನ ಅಧಿವೇಶನದಲ್ಲಿ ಜಾರಿಗೆ ತಂದರೆ ಇಂತಹ ಕಾನೂನನ್ನು ಜಾರಿಗೆ ತಂದ ಭಾರತದ ಮೊದಲ ರಾಜ್ಯ ಕರ್ನಾಟಕವಾಗಲಿದೆ. ಇದು ಶಿಕ್ಷಣದಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವಲ್ಲಿ ರಾಷ್ಟ್ರವ್ಯಾಪಿ ಸುಧಾರಣೆಗಳಿಗೆ ಪೂರ್ವನಿದರ್ಶನ ಸೃಷ್ಟಿಸಲಿದೆ. ಅಲ್ಲದೇ ಪ್ರತಿಯೊಂದು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಭೇದಭಾವ ವಿರೋಧಿ ಘಟಕಗಳನ್ನು ಸ್ಥಾಪಿಸಲು ಮತ್ತು ಜಾತಿ ಆಧಾರಿತ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ.
ರೋಹಿತ್ ವೇಮುಲಾ ಆತ್ಮಹತ್ಯೆ ಏಕೆ?
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್ಡಿ ವಿದ್ಯಾರ್ಥಿಯಾಗಿದ್ದ ರೋಹಿತ್ ವೇಮುಲಾ ಅವರು 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಲೇಜಿನಲ್ಲಿ ಜಾತಿ ಆಧಾರಿತ ಭೇದಭಾವ ಮತ್ತು ಅನ್ಯಾಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಆರೋಪಿಸಿದ್ದರು.
ಅಂಬೇಡ್ಕರ್ ವಿದ್ಯಾರ್ಥಿ ಸಂಘಟನೆಯ (ASA) ಸದಸ್ಯರಾಗಿದ್ದ ವೇಮುಲಾ, ಜಾತಿ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದರು. ಈ ಹಿನ್ನೆಲೆಯಲ್ಲಿ, 2015ರ ಆಗಸ್ಟ್ನಲ್ಲಿ ವೇಮುಲಾ ಮತ್ತು ಇತರ ನಾಲ್ವರನ್ನು ಹಾಸ್ಟೆಲ್ನಿಂದ ಉಚ್ಚಾಟಿಸಲಾಗಿತ್ತು. ಇದರಿಂದ ಮಾನಸಿಕವಾಗಿ ನೊಂದಿದ್ದ ವೇಮುಲಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ವೇಮುಲಾ ಸಾವಿನ ನಂತರ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅವರ ತಾಯಿ ರಾಧಿಕಾ ವೇಮುಲಾ ನ್ಯಾಯಕ್ಕಾಗಿ ಹೋರಾಟ ನಡೆಸಿದ್ದರು. 2024ರಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ತನಿಖೆ ನಡೆಸಿ, ಪರಿಸಮಾಪ್ತಿ ವರದಿ ಸಲ್ಲಿಸಿದ್ದರು.
ವೇಮುಲಾ ಕಾಯ್ದೆಯ ಅನುಕೂಲ ಏನು?
ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ವಿರೋಧಿ ಘಟಕಗಳನ್ನು ಕಡ್ಡಾಯವಾಗಿ ಸ್ಥಾಪಿಸಲಾಗುತ್ತದೆ.
ಸಾಂಸ್ಥಿಕ ತಾರತಮ್ಯಕ್ಕೆ ಕಠಿಣ ದಂಡಗಳು ವಿಧಿಸಲು ಅವಕಾಶ ಇರಲಿದೆ.
ವಿಶ್ವವಿದ್ಯಾನಿಲಯಗಳಲ್ಲಿ ಸ್ವತಂತ್ರ ಕುಂದುಕೊರತೆ ನಿವಾರಣಾ ಘಟಕಗಳನ್ನು ಸ್ಥಾಪಿಸಲು ಅವಕಾಶ ನೀಡಲಿದೆ.
ನಿರ್ಲಕ್ಷ್ಯ ಅಥವಾ ಪಕ್ಷಪಾತದ ಪ್ರಕರಣಗಳಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಲಿದೆ.