ಆರ್​ಎಸ್​​ಎಸ್​ಗೆ ಸಂವಿಧಾನ. ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.;

Update: 2025-06-28 12:14 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್.)ಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ. ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಅವರು ಮಾತನಾಡಿದರು.

ಆರ್.ಎಸ್.ಎಸ್.ನ ದತ್ತಾತ್ರೇಯ ಹೊಸಬಾಳೆ ಅವರು 'ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು' ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, "ಆರ್ ಎಸ್ಎಸ್ ನವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು. ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ ಇನ್ನೇನು ಹೇಳಲು ಸಾಧ್ಯ," ಎಂದರು. ಸಂವಿಧಾನವು ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದ್ದು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜಾತ್ಯತೀತ ಮತ್ತು ಸಮಾಜವಾದ ಎಂಬ ಪದಗಳನ್ನು ನಂತರ ಸೇರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಂಸತ್ತಿನಲ್ಲಿ ಇದು ಚರ್ಚೆಯಾಗಿ ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಹುಲಿಗಳ ಸಾವಿನ ಕುರಿತು ಪ್ರತಿಕ್ರಿಯೆ

ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ನಡೆದ ಹುಲಿಗಳ ಸಾವಿನ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಈ ಕುರಿತು ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ತನಿಖಾ ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Tags:    

Similar News