ಜಾತಿಗಣತಿ ಜಾರಿಗೆ ವಿರೋಧ| ಸಿದ್ದರಾಮಯ್ಯಗೆ ಸೆಡ್ಡು ಹೊಡೆದ ಶಾಮನೂರು; ಬಿಎಸ್‌ವೈ, ಬೊಮ್ಮಾಯಿ ಭೇಟಿ

ಕಾಂಗ್ರೆಸ್‌ ಹಿರಿಯ ಶಾಸಕರೂ ಆಗಿರುವ ಶಾಮನೂರು ಶಿವಶಂಕರಪ್ಪ ಹಾಗೂ ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಶಂಕರ ಬಿದರಿ ಗುರುವಾರ ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅ.22 ರ ಸಭೆಗೆ ಆಹ್ವಾನಿಸಿದ್ದಾರೆ.

Update: 2024-10-18 03:02 GMT

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ತಯಾರಿಸಿರುವ ಜಾತಿ ಗಣತಿ ವರದಿಯನ್ನು ಮುಂಬರುವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಅಖಿಲ ಭಾರತ ವೀರಶೈವ ಮಹಾಸಭೆ ನೇತೃತ್ತದಲ್ಲಿ ಪಕ್ಷಾತೀತವಾಗಿ ಲಿಂಗಾಯತ ನಾಯಕರು ಪ್ರತಿರೋಧ ತೋರಲು ಮುಂದಾಗಿದ್ದಾರೆ. 

ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರನ್ನು ಒಂದೆಡೆ ಸೇರಿಸಿ ಚರ್ಚಿಸಲು ಇದೇ 22 ರಂದು ಎಲ್ಲ ಲಿಂಗಾಯತ ನಾಯಕರ ಸಭೆ ಕರೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹಿರಿಯ ಶಾಸಕರೂ ಆಗಿರುವ  ಶಾಮನೂರು ಶಿವಶಂಕರಪ್ಪ ಹಾಗೂ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ  ಅವರು ಗುರುವಾರ ಬಿಜೆಪಿ ಮುಖಂಡರಾದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಅಕ್ಟೋಬರ್ 22 ರಂದು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.

ಅಂದಿನ ಸಭೆಗೆ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಮಾಜಿ ಹಾಗೂ ಹಾಲಿ ಸಚಿವರು, ಶಾಸಕರು, ಸಂಸದರನ್ನು ಆಹ್ವಾನಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಗಣತಿ ಜಾರಿಗೆ ಬದ್ಧ ಎಂದು ಹೇಳಿರುವುದರಿಂದ ವೀರಶೈವ ಲಿಂಗಾಯತ ಸಮುದಾಯ ಈ ವರದಿ ಅವೈಜ್ಞಾನಿಕವಾಗಿದ್ದು, ಇದನ್ನು ಜಾರಿಗೆ ತರಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿದೆ.



 



Tags:    

Similar News