ಶಾಲಾ ಕಟ್ಟಡದಿಂದ ಬಿದ್ದು ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿಗೆ ಗಂಭೀರ ಗಾಯ

ಕಟ್ಟಡದಿಂದ ಕೆಳಗೆ ಬಿದ್ದಿದ್ದರಿಂದ ವಿದ್ಯಾರ್ಥಿನಿಯ ತಲೆಗೆ ಗಂಭೀರ ಗಾಯಗಳಾಗಿವೆ. ವಿದ್ಯಾರ್ಥಿನಿಯನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.;

Update: 2025-06-18 11:50 GMT

ಆಸ್ಪತ್ರೆಗೆ ಶಾಸಕ ಡಾ. ಅಶ್ವತ್ ನಾರಾಯಣ ಭೇಟಿ ನೀಡಿ,ವಿದ್ಯಾರ್ಥಿನಿಯ ಆರೋಗ್ಯ ವಿಚಾರಿಸಿದ್ದಾರೆ.

ಶಾಲಾ ಕಟ್ಟಡದಿಂದ ಬಿದ್ದು ಎಸ್​ಎಸ್​​ಎಲ್​​ಸಿ ವಿದ್ಯಾರ್ಥಿನಿಗೆ ಗಂಭೀರ ಗಾಯ: ತನಿಖೆಗೆ ಆಗ್ರಹ

ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂ 13ನೇ ಕ್ರಾಸ್‌ನಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಟ್ಟಡದಿಂದ ಕೆಳಗೆ ಬಿದ್ದ ಎಸ್​​ಎಸ್​​ಎಲ್​ಸಿ ವಿದ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಘಟನೆ ಶಾಲಾ ಆವರಣದ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ವಿದ್ಯಾರ್ಥಿನಿ ಶಾಲಾ ಕಟ್ಟಡದ ಮೇಲಿನಿಂದ ಅಥವಾ ಎಲ್ಲಿಂದ ಕೆಳಗೆ ಬಿದ್ದಳು ಎಂಬ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಕೆಳಗೆ ಬಿದ್ದ ರಭಸಕ್ಕೆ ವಿದ್ಯಾರ್ಥಿನಿಯ ತಲೆಗೆ ಗಂಭೀರ ಪೆಟ್ಟಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಳೆ ಎಂದು ತಿಳಿದುಬಂದಿದೆ. ಕೂಡಲೇ ಆಕೆಯನ್ನು ಸಮೀಪದ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಘಟನೆ ತಿಳಿದ ಕೂಡಲೇ ಸ್ಥಳೀಯ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಕೆಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ವಿದ್ಯಾರ್ಥಿನಿಯ ಆರೋಗ್ಯ ಸ್ಥಿತಿ ಕುರಿತು ವೈದ್ಯರಿಂದ ಮಾಹಿತಿ ಪಡೆದಿದ್ದಾರೆ.

ವಿದ್ಯಾರ್ಥಿನಿ ಆಕಸ್ಮಿಕವಾಗಿ ಬಿದ್ದಳೇ? ಅಥವಾ ಬೇರೆ ಯಾವುದಾದರೂ ಕಾರಣ ಇದೆಯೇ ಎಂಬುದು ಸ್ಪಷ್ಟವಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಯಿಂದಾಗಲಿ ಅಥವಾ ಪೊಲೀಸರಿಂದಾಗಲಿ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.  

Tags:    

Similar News