Stampade | ಕಾಲ್ತುಳಿತ ದುರಂತದ ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ; ಜೂ.10ಕ್ಕೆ ವಿಚಾರಣೆ ಮುಂದೂಡಿಕೆ

ವಿಜಯೋತ್ಸವದಲ್ಲಿ ಭಾಗಿಯಾಗಲು 2.5 ಲಕ್ಷ ಜನರು ಬಂದಿದ್ದರು. ಕೋಲಾರ, ಉತ್ತರ ಕನ್ನಡ, ತುಮಕೂರು, ಯಾದಗಿರಿ, ಮಂಡ್ಯದಿಂದಲೂ ಅಭಿಮಾನಿಗಳು ಧಾವಿಸಿದ್ದರು ಎಂದು ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ ಅವರು ನ್ಯಾಯಾಲಯಕ್ಕೆ ತಿಳಿಸಿದರು.;

Update: 2025-06-05 12:13 GMT

ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಗುರುವಾರ ಹೈಕೋರ್ಟ್ ಸೂಚನೆ ನೀಡಿದೆ.

ಕಾಲ್ತುಳಿತ ಘಟನೆ ಕುರಿತ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಸಿ.ಎಂ.ಜೋಶಿ ನೇತೃತ್ವದ ನ್ಯಾಯಪೀಠ, ಘಟನೆಗೆ ಕಾರಣಗಳೇನು, ಕೈಗೊಂಡಿದ್ದ ಮುಂಜಾಗ್ರತೆ ಕ್ರಮಗಳೇನು, ಜನದಟ್ಟಣೆ ವೇಳೆ ಯಾವೆಲ್ಲಾ ಮಾರ್ಗಸೂಚಿ ಪಾಲಿಸಲಾಗಿದೆ ಎಂದು ಸರ್ಕಾರವನ್ನು ಪ್ರಶ್ನಿಸಿದೆ.

ಘಟನೆ ಕುರಿತು ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶಿಸಲಾಗಿದೆ ಎಂದು ಅಡ್ವೊಕೇಟ್‌ ಜನರಲ್‌ ನ್ಯಾಯಾಲಯದ ಗಮನಕ್ಕೆ ತಂದರು. ಆಗ ಪ್ರತಿಕ್ರಿಯಿಸಿದ ನ್ಯಾಯಪೀಠ, ಘಟನೆ ಕುರಿತು ಸಮಗ್ರ ವರದಿ ನೀಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ನಿಗದಿಪಡಿಸಿತು.

ವಾದ-ವಿವಾದ ಏನು?

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಹೈಕೋರ್ಟ್ ನೀಡುವ ಸಲಹೆಗಳನ್ನು ಪಾಲಿಸಲು ಸರ್ಕಾರ ಬದ್ಧವಾಗಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ನಮ್ಮ ಪ್ರತಿರೋಧ ಇಲ್ಲ. ಆರ್‌ಸಿಬಿ ತಂಡದೊಂದಿಗೆ ವಿಜಯೋತ್ಸವ ನಡೆಯುವ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಭದ್ರತೆ ಕಲ್ಪಿಸಿದ್ದರು.

ಭದ್ರತೆಗಾಗಿ ಒಟ್ಟು 1,643 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿತ್ತು. ಜಲಫಿರಂಗಿ, ಕೆಎಸ್ಆರ್‌ಪಿ ತುಕಡಿ ಸೇರಿದಂತೆ ಹಲವು ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿತ್ತು. ವಿಜಯೋತ್ಸವದಲ್ಲಿ ಭಾಗಿಯಾಗಲು 2.5 ಲಕ್ಷ ಜನರು ಬಂದಿದ್ದರು. ಕೋಲಾರ, ಉತ್ತರ ಕನ್ನಡ, ತುಮಕೂರು, ಯಾದಗಿರಿ, ಮಂಡ್ಯದಿಂದಲೂ ಅಭಿಮಾನಿಗಳು ಧಾವಿಸಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 34,600 ಜನರಿಗಷ್ಟೇ ಆಸನ ಸಾಮರ್ಥ್ಯ ಇದೆ. ಪ್ರತಿ ಬಾರಿ ಕ್ರಿಕೆಟ್ ಪಂದ್ಯ ನಡೆಯುವಾಗ 33 ಸಾವಿರ ಜನರಿಗೆ ಟಿಕೆಟ್ ನೀಡಲಾಗುತ್ತದೆ. ಆದರೆ, ನಿನ್ನೆ ಎರಡೂವರೆ ಲಕ್ಷ ಜನರು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿದ ಹೈಕೋರ್ಟ್, ದೊಡ್ಡ ಕಾರ್ಯಕ್ರಮಗಳು ನಡೆಯುವಾಗ ಕೈಗೊಂಡಿದ್ದ ಪೂರ್ವ ಸಿದ್ಧತೆಗಳು ಏನು, ಕಾರ್ಯಕ್ರಮದ ಆಯೋಜಕರು ಯಾರು ಎಂದು ಪ್ರಶ್ನಿಸಿತು.

ಪ್ರತಿವಾದಿ ವಕೀಲ ಅರುಣ್‌ ಶಾಮ್‌ ಮಾತನಾಡಿ, ಆರ್‌ಸಿಬಿ ಆಟಗಾರರು ಯಾವುದೇ ರಾಜ್ಯ ಅಥವಾ ದೇಶಕ್ಕೆ ಆಡುತ್ತಿಲ್ಲ. ರಾಜ್ಯ ಸರ್ಕಾರ ಆಟಗಾರರನ್ನು ಗೌರವಿಸುವ ಅಗತ್ಯ ಇರಲಿಲ್ಲ. ಒಂದೇ ಬಾರಿಗೆ ವಿಧಾನಸೌಧ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾರ್ಯಕ್ರಮ ಮಾಡಲಾಗಿದೆ. ಇದರಿಂದ ಸಮಸ್ಯೆಯಾಗಿದೆ. ಸರಿಯಾದ ಭದ್ರತೆ ಒದಗಿಸಿರಲಿಲ್ಲ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಆಗ ನ್ಯಾಯಪೀಠ ಪ್ರತಿಕ್ರಿಯಿಸಿ, ಅದಕ್ಕಾಗಿಯೇ ನಾವು ಸ್ವಯಂಪ್ರೇರಿತ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿ, ಕಾಲ್ತುಳಿತ ಘಟನೆಗೆ ಸಂಬಂಧಿಸಿ ಜೂ.10 ರೊಳಗೆ ವರದಿ ನೀಡುವಂತೆ ಸೂಚಿಸಿತು.

Tags:    

Similar News