ಆರ್‌ಸಿಬಿ ವಿಜಯೋತ್ಸವ ದುರಂತ: ಹೈಕೋರ್ಟ್​ಗೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಜನಸಂದಣಿ ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ನಡುವಿನ ಸಮನ್ವಯದ ಸಂಪೂರ್ಣ ಕೊರತೆಯಿಂದಾಗಿ ಕಾರ್ಯಕ್ರಮವು ಹಾಳಾಗಿತ್ತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪತ್ರದಲ್ಲಿ ತಿಳಿಸಿದ್ದಾರೆ.;

Update: 2025-06-05 10:39 GMT

ಹೈಕೋರ್ಟ್‌ಗೆ ಪತ್ರ ಬರೆದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ.

ಬುಧವಾರ (ಜೂನ್ 4) ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ ಅಮಾಯಕ ಜೀವಗಳು ಬಲಿಯಾಗಿ, ಹಲವಾರು ಮಂದಿ ಗಾಯಗೊಂಡಿರುವ ಘಟನೆಗೆ ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ತೀವ್ರ ನಿರ್ಲಕ್ಷ್ಯ ಹಾಗೂ ಆಡಳಿತ ವೈಫಲ್ಯವೇ ಕಾರಣ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ನ್ಯಾಯಾಂಗ ತನಿಖೆ ನಡೆಸುವಂತೆ ಅವರು ಹೈಕೋರ್ಟ್‌ಗೆ ಪತ್ರ ಬರೆದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸನ್ಮಾನಿಸಲು ಸಮಾರಂಭ ಏರ್ಪಡಿಸಲಾಗಿತ್ತು. ಸಂಜೆ ವೇಳೆಗೆ, ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದು, 45ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜನಸಂದಣಿ ನಿಯಂತ್ರಿಸಲು ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ನಡುವಿನ ಸಂಪೂರ್ಣ ಸಮನ್ವಯದ ಕೊರತೆಯೇ ಈ ದುರಂತಕ್ಕೆ ಕಾರಣ ಎಂದು ಕರಂದ್ಲಾಜೆ ಹೇಳಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದಾರೆಂದು ಅಂದಾಜಿಸಲಾಗಿತ್ತು. ಆದರೆ, ಸರಿಯಾದ ಜನಸಂದಣಿ ನಿರ್ವಹಣೆ, ತುರ್ತು ವೈದ್ಯಕೀಯ ನೆರವು ಮತ್ತು ಸಾಕಷ್ಟು ಅಂಬ್ಯುಲೆನ್ಸ್‌ಗಳು ಇಲ್ಲದಿರುವುದು ಆಘಾತಕಾರಿಯಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಸಂಜೆ 4:45ರ ಸುಮಾರಿಗೆ, ಕ್ರೀಡಾಂಗಣದ ಹಲವಾರು ದ್ವಾರಗಳ ಹೊರಗೆ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿ, ಹಲವು ಅಭಿಮಾನಿಗಳು ಉಸಿರುಗಟ್ಟಿದಂತಾಗಿ ಅಸ್ವಸ್ಥಗೊಂಡಿದ್ದಾರೆ. 45ಕ್ಕೂ ಹೆಚ್ಚು ಅಸ್ವಸ್ಥರಾದವರನ್ನು ಬೌರಿಂಗ್, ಲೇಡಿ ಕರ್ಜನ್ ಹಾಗೂ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಸರ್ಕಾರದ ಹೇಳಿಕೆ ಮತ್ತು ನ್ಯಾಯಾಂಗ ತನಿಖೆಗೆ ಆಗ್ರಹ

ಕಾಲ್ತುಳಿತದಿಂದಾದ ಈ ದುರ್ಘಟನೆಗೆ ರಾಜ್ಯ ಸರ್ಕಾರ ಜವಾಬ್ದಾರಿಯಲ್ಲ ಎಂದು ಮುಖ್ಯಮಂತ್ರಿಗಳು ಹೇಳಿರುವುದು ಆತಂಕಕಾರಿ ಸಂಗತಿ ಎಂದು ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರವು ವಿಧಾನಸೌಧದಲ್ಲಿ ಮಾತ್ರ ಕಾರ್ಯಕ್ರಮವನ್ನು ಆಯೋಜಿಸಿದ್ದೆಯೇ ಹೊರತು ಕ್ರೀಡಾಂಗಣದಲ್ಲಿ ಅಲ್ಲ ಎಂದು ಹೇಳಿಕೊಂಡಿದೆ. ಅವರ ಈ ಹೇಳಿಕೆಯು ಜವಾಬ್ದಾರಿಯಿಂದ ತಪ್ಪಿಸಿಕೊಂಡು, ಘಟನೆಗೆ ಕಾರಣರಾದ ಅಧಿಕಾರಿಗಳನ್ನು ರಕ್ಷಿಸಿ ಕ್ಲೀನ್ ಚಿಟ್ ನೀಡುವ ಉದ್ದೇಶವಾಗಿದೆ ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ಆದೇಶಿಸಿರುವ ಮ್ಯಾಜಿಸ್ಟೀರಿಯಲ್ ತನಿಖೆ ಪಕ್ಷಪಾತದಿಂದ ಕೂಡಿದ್ದು, ವಿಶ್ವಾಸಾರ್ಹತೆಯ ಕೊರತೆಯಿದೆ ಎಂದು ಕರಂದ್ಲಾಜೆ ಹೇಳಿದ್ದಾರೆ. ಅಂತಹ ಆಂತರಿಕ ತನಿಖೆಯು ಘಟನೆಯ ಬಗ್ಗೆ ನಿಷ್ಪಕ್ಷಪಾತ ಮತ್ತು ಸ್ವತಂತ್ರ ತನಿಖೆ ನಡೆಸುತ್ತದೆ ಎಂದು ನಿರೀಕ್ಷಿಸಲಾಗುವುದಿಲ್ಲ. ಆದ್ದರಿಂದ, ಈ ದುರಂತ ಘಟನೆಯನ್ನು ಸಾರ್ವಜನಿಕ ಹಿತಾಸಕ್ತಿಯ ವಿಷಯವೆಂದು ಪರಿಗಣಿಸಿ, ನ್ಯಾಯಾಂಗ ತನಿಖೆ ನಡೆಸಬೇಕು ಎಂದು ನ್ಯಾಯಾಲಯವನ್ನು ಕೋರುವುದಾಗಿ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags:    

Similar News