ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಆ.29 ರಂದು ಡಿಎಸ್‌ಎಸ್ ಪ್ರತಿಭಟನೆ

Update: 2024-08-26 07:29 GMT

ಮುಡಾ ಹಗರಣದ ಹೆಸರಿನಲ್ಲಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ, ಜೆಡಿಎಸ್‌ ನಡೆಸಿರುವ ಷಡ್ಯಂತ್ರ ಖಂಡಿಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಅಗಸ್ಟ್ 29 ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ರಾಜ್ಯ ಸಂಚಾಲಕ ಡಿ.ಜಿ.ಸಾಗರ್ ಹೇಳಿದ್ದಾರೆ.

ವಿಜಯಪುರದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ʻʻಸಂವಿಧಾನ ಬಾಹಿರವಾಗಿ ನಡೆದುಕೊಂಡಿರುವ ರಾಜ್ಯಪಾಲರನ್ನು ವಾಪಸ್‌ ಕರೆಸಿಕೊಳ್ಳುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಲಾಗುವುದು" ಎಂದು ತಿಳಿಸಿದರು.

ʻʻಬಿಜೆಪಿ, ಜೆಡಿಎಸ್ ಮುಖಂಡರು ಸುಳ್ಳು ಆರೋಪಗಳ ಮೂಲಕ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟು ಮಾಡುವ ಹುನ್ನಾರ ನಡೆಸಿರುವುದು ಖಂಡನೀಯ. ಮುಡಾ ಪ್ರಕರಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನರು ಗೊಂದಲಕ್ಕೆ ಒಳಗಾಗುವಂತೆ ಮಾಡಿದ್ದಾರೆ. ಮುಡಾದಲ್ಲಿ ಸಿದ್ದರಾಮಯ್ಯ ಹಸ್ತಕ್ಷೇಪ ಇಲ್ಲದಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆʼʼ ಎಂದು ಹೇಳಿದರು.

ʻʻಪ್ರಜಾಪ್ರಭುತ್ವ, ಸಂವಿಧಾನಕ್ಕೆ ಅಪಚಾರ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಖಂಡನೀಯ. ರಾಜ್ಯಪಾಲರು ಸಂವಿಧಾನಿಕ ಪ್ರತಿನಿಧಿಯಾಗಿ ಕರ್ತವ್ಯ ನಿರ್ವಹಿಸದೇ ಬಿಜೆಪಿ, ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂದ ನಡೆದುಕೊಳ್ಳುತ್ತಿರುವುದು ಖಂಡನೀಯ. ಸರ್ಕಾರಕ್ಕೆ ಗಂಡಾಂತರ ತರಲು ರಾಜ್ಯಪಾಲರು ಮುಂದಾಗಿರುವುದು ವಿಷಾದನೀಯ. ರಾಜ್ಯಪಾಲರು ರಾಜಕಾರಣಿಯಾಗಿದ್ದಾರೆ. ಸಂವಿಧಾನದ ಪ್ರಕಾರ ಅಡಳಿತ ನಡೆಸದ ರಾಜ್ಯಪಾಲರನ್ನು ತಕ್ಷಣವೇ ರಾಷ್ಟ್ರಪತಿ ಅವರು ವಾಪಸ್‌ ಕರೆಸಿಕೊಳ್ಳಬೇಕುʼʼ ಎಂದು ಆಗ್ರಹಿಸಿದರು.

ʻʻಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬ ಖಾಸಗಿ ವ್ಯಕ್ತಿ ಮುಖ್ಯಮಂತ್ರಿ ವಿರುದ್ಧ ಅರ್ಜಿ ಸಲ್ಲಿಸಿದ ತಕ್ಷಣ ತನಿಖೆಗೆ ಏಕಾಏಕಿ, ತರಾತುರಿಯಲ್ಲಿ ಅವಕಾಶ ನೀಡಿದ್ದಾರೆ. ಆದರೆ, ಮಾಜಿ ಸಚಿವರಾದ ನಿರಾಣಿ, ಜೊಲ್ಲೆ. ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳಲ್ಲಿ ತನಿಖೆ ನಡೆಸಿದ ತನಿಖಾ ಸಂಸ್ಥೆಗಳೇ ಕ್ರಮಕ್ಕೆ ಅನುಮತಿ ಕೋರಿದರೂ ರಾಜ್ಯಪಾಲರು ಅವಕಾಶ ನೀಡದೇ ಬಾಕಿ ಉಳಿಸಿಕೊಂಡಿದ್ದಾರೆ. ಮುಡಾದಲ್ಲಿ ಹಗರಣ ನಡೆದಿರುವ ಕುರಿತು ತನಿಖೆಗೆ ಈಗಾಗಲೇ ಸಮಿತಿ ರಚನೆಯಾಗಿದೆ. ಇಷ್ಟಾದರೂ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡಿರುವುದು ಖಂಡನೀಯʼʼ ಎಂದರು.

ʻʻಅಲ್ಪಸಂಖ್ಯಾತ, ದಲಿತ, ಹಿಂದುಳಿದ ಹಾಗೂ ಎಲ್ಲ ಸಮಾಜದ ಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರ ನಡೆದಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಬಡ, ಮಧ್ಯಮ ವರ್ಗಗಳ ಸದೃಢತೆಗೆ ಶ್ರಮಿಸುತ್ತಿರುವ, ಎಸ್‌ಸಿಪಿ, ಟಿಎಸ್‌ಪಿ ಕಾನೂನು ಜಾರಿಗೆ ತಂದಿರುವ ಮೂಲಕ ಹಾಗೂ ಎಸ್‌ಸಿ, ಎಸ್‌ಟಿ, ಹಿಂದುಳಿದವರಿಗೆ ಸರ್ಕಾರದ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ದೇಶದಲ್ಲೇ ಮೊದಲ ಬಾರಿಗೆ ಮೀಸಲಾತಿ ಜಾರಿಗೆ ತಂದಿದ್ದಾರೆ. ಇಂತಹ ಮುಖ್ಯಮಂತ್ರಿಯನ್ನು ದಲಿತ ವಿರೋಧಿ ಎನ್ನುವ ಹೇಳಿಕೆಯನ್ನು ನಾವು ಖಂಡಿಸುತ್ತೇವೆ" ಎಂದು ಡಿಎಸ್‌ಎಸ್‌ ರಾಜ್ಯ ಸಂಚಾಲಕ ಡಿ.ಜಿ.ಸಾಗರ್‌ ಹೇಳಿದ್ದಾರೆ.

Tags:    

Similar News