ಕಬ್ಬು ಬೆಳೆಗಾರರ ಪ್ರತಿಭಟನೆ: ದರ ನಿಗದಿ ಅಧಿಕಾರ ನಮ್ಮದಲ್ಲ, ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

"ಈ ವಿಷಯವಾಗಿ ರೈತರೊಂದಿಗೆ ಚರ್ಚೆ ನಡೆಸಲು ಸಚಿವರಾದ ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ ಹಾಗೂ ಎಂ.ಬಿ. ಪಾಟೀಲ ಅವರೊಂದಿಗೆ ಮಾತನಾಡಿದ್ದೇನೆ. ಅವರು ಶೀಘ್ರದಲ್ಲೇ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ," ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

Update: 2025-11-05 05:54 GMT

ಸಿಎಂ ಸಿದ್ದರಾಮಯ್ಯ

Click the Play button to listen to article

"ಕಬ್ಬಿಗೆ ಗರಿಷ್ಠ ಚಿಲ್ಲರೆ ಮಾರಾಟ ದರ (MRP) ನಿಗದಿಪಡಿಸಬೇಕಾದ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರಕ್ಕಲ್ಲ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ, ಕಬ್ಬಿನ ದರ ಏರಿಕೆಗಾಗಿ ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಪ್ರತಿಕ್ರಿಯಿಸಿ, ಅವರು ಜವಾಬ್ದಾರಿಯನ್ನು ಕೇಂದ್ರದ ಮೇಲೆ ಹೊರಿಸಿದ್ದಾರೆ.

ಬಂಗಾರಪೇಟೆಯಲ್ಲಿ ಮಂಗಳವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಬ್ಬು ಬೆಳೆಗಾರರು ಮಹಾರಾಷ್ಟ್ರಕ್ಕೆ ಸಮಾನವಾದ ದರವನ್ನು ನಿಗದಿಪಡಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ," ಎಂದರು.

"ಈ ವಿಷಯವಾಗಿ ರೈತರೊಂದಿಗೆ ಚರ್ಚೆ ನಡೆಸಲು ಸಚಿವರಾದ ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ ಹಾಗೂ ಎಂ.ಬಿ. ಪಾಟೀಲ ಅವರೊಂದಿಗೆ ಮಾತನಾಡಿದ್ದೇನೆ. ಅವರು ಶೀಘ್ರದಲ್ಲೇ ರೈತ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ," ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ತೆರಿಗೆ ಪಾಲು: ಕೇಂದ್ರದ ವಿರುದ್ಧ ಮತ್ತೆ ವಾಗ್ದಾಳಿ

ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ನೀತಿಯನ್ನು ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ, "ನಾವು ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ರೂಪಾಯಿ ತೆರಿಗೆ ಪಾವತಿಸುತ್ತೇವೆ. ಆದರೆ, ನಮಗೆ ಪ್ರತಿ ರೂಪಾಯಿಯಲ್ಲಿ ವಾಪಸ್ ಸಿಗುತ್ತಿರುವುದು ಕೇವಲ 14-15 ಪೈಸೆ ಮಾತ್ರ. ಉಳಿದ 85 ಪೈಸೆಯನ್ನು ಕೇಂದ್ರವೇ ಇಟ್ಟುಕೊಳ್ಳುತ್ತಿದೆ," ಎಂದು ಆರೋಪಿಸಿದರು. ಕಬ್ಬಿನ ದರ ನಿಗದಿಯಂತಹ ವಿಷಯಗಳಲ್ಲಿ ಕೇಂದ್ರದ ಹಸ್ತಕ್ಷೇಪದಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಅವರು ಪರೋಕ್ಷವಾಗಿ ಹೇಳಿದರು.

Tags:    

Similar News