ಬುರ್ಖಾಧಾರಿ ಮಹಿಳೆಯರ ಬಂಧನ ಏಕಿಲ್ಲ ಎಂದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಮೇಲೆ ಕೇಸ್
ಫೇಸ್ಬುಕ್ನಲ್ಲಿ ಬರೆದಿದ್ದ ಪೋಸ್ಟ್ ಆಧರಿಸಿ, ಕಾಂಗ್ರೆಸ್ ಸದಸ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಅನ್ವಯ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.;
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳದಲ್ಲಿ ಕಾಣಿಸಿಕೊಂಡಿದ್ದ ಬುರ್ಖಾಧಾರಿ ಮಹಿಳೆಯರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಹಾಗೂ ಮಾಜಿ ಕಾರ್ಪೊರೇಟರ್ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಕ್ರಮಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಸುಹಾಸ್ ಶೆಟ್ಟಿ ಹತ್ಯೆಯ ಸಂದರ್ಭದಲ್ಲಿ ಹಂತಕರೊಂದಿಗೆ ಮಾತನಾಡಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರ ಬಗ್ಗೆ ಸಂಶಯಗಳು ಎದ್ದಿದ್ದವು. ಈ ಹಿನ್ನೆಲೆಯಲ್ಲಿ, ಶ್ವೇತಾ ಪೂಜಾರಿ ತಮ್ಮ ಫೇಸ್ಬುಕ್ ಖಾತೆಯಲ್ಲಿ "ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ? ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಈ ಬಗ್ಗೆ ಯಾಕೆ ಮಾತನಾಡುತ್ತಿಲ್ಲ?" ಎಂಬ ಪೋಸ್ಟ್ ಮಾಡಿದ್ದರು.
ಈ ಪೋಸ್ಟ್ ಆಧರಿಸಿ, ಕಾಂಗ್ರೆಸ್ ಸದಸ್ಯೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದು, ದೂರಿನ ಅನ್ವಯ ಶ್ವೇತಾ ಪೂಜಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆಯು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದುತ್ವದ ಪರವಾಗಿ ಧ್ವನಿ ಎತ್ತುವವರನ್ನು ದಮನಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಮತ್ತು ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಆರೋಪಿಸಲಾಗಿದೆ.