ಡಿಜಿಟಲ್ ಪೇಮೆಂಟ್‌ನಿಂದ ಬೀದಿಬದಿ ವ್ಯಾಪಾರಿಗಳಿಗೆ ತೆರಿಗೆ ಸಂಕಷ್ಟ: ಸಿಎಂ ಭರವಸೆ

ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶಕ್ಕೆ ಸುಮಾರು 2 ಲಕ್ಷ ಜನ ಸೇರಿದ್ದರು. ಇದು ನಮ್ಮ ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತದೆ.;

Update: 2025-07-20 11:40 GMT

ಸಿಎಂ ಸಿದ್ದರಾಮಯ್ಯ

ರಾಜ್ಯದ ಸಣ್ಣ ವ್ಯಾಪಾರಿಗಳು ಡಿಜಿಟಲ್ ಪೇಮೆಂಟ್ ಮಾಡಿದ ಕಾರಣಕ್ಕೆ ತೆರಿಗೆ ಇಲಾಖೆಯಿಂದ ನೋಟೀಸ್ ಎದುರಿಸುತ್ತಿರುವ ಗಂಭೀರ ಸಮಸ್ಯೆಯ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಕುರಿತು ಕೇಂದ್ರ ಸರ್ಕಾರದೊಂದಿಗೆ ಸಮಾಲೋಚಿಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, "ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್‌ನಿಂದ ತೆರಿಗೆ ನೋಟೀಸ್ ನೀಡಲಾಗುತ್ತಿದೆ ಎಂಬ ಕೂಗು ಕೇಳಿಬಂದಿದೆ. ಜಿಎಸ್‌ಟಿ ವ್ಯವಸ್ಥೆಯು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಜಿಎಸ್‌ಟಿ ಕೌನ್ಸಿಲ್ ತೆಗೆದುಕೊಳ್ಳುವ ತೀರ್ಮಾನಗಳಿಗೆ ರಾಜ್ಯ ಸರ್ಕಾರ ನೇರ ಹೊಣೆಯಲ್ಲ. ಆದರೂ, ನಮ್ಮ ರಾಜ್ಯದ ವ್ಯಾಪಾರಿಗಳಿಗೆ ತೊಂದರೆಯಾಗಲು ನಾವು ಬಿಡುವುದಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ, ನಮ್ಮ ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳೊಂದಿಗೂ ಸಮಾಲೋಚನೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು," ಎಂದು ಸ್ಪಷ್ಟಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಸಣ್ಣಪುಟ್ಟ ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು ಸೇರಿದಂತೆ ಬಹುತೇಕ ಎಲ್ಲಾ ವಲಯಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಆದರೆ, ಈ ಎಲ್ಲಾ ವಹಿವಾಟುಗಳು ದಾಖಲಾಗುವುದರಿಂದ, ಸಣ್ಣ ವ್ಯಾಪಾರಿಗಳು ತೆರಿಗೆ ಇಲಾಖೆಯ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ ಮತ್ತು ನೋಟೀಸ್‌ಗಳನ್ನು ಎದುರಿಸುತ್ತಿದ್ದಾರೆ ಎಂಬ ಕೂಗು ರಾಜ್ಯಾದ್ಯಂತ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಹೇಳಿಕೆಯು ಮಹತ್ವ ಪಡೆದುಕೊಂಡಿದೆ.

ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ

ಮೈಸೂರಿನ ಸಮಾವೇಶದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ಬಿಜೆಪಿಯವರ ಟೀಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, "ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಸಂಪ್ರದಾಯ. ಆ ಸಮಯದಲ್ಲಿ ಉಪಮುಖ್ಯಮಂತ್ರಿಗಳು ಅಲ್ಲಿ ಇರಲಿಲ್ಲ, ಹಾಗಾಗಿ ಅವರ ಹೆಸರನ್ನು ಹೇಳಲಿಲ್ಲ. ಇದರಲ್ಲಿ ಅವಮಾನದ ಪ್ರಶ್ನೆಯೇ ಇಲ್ಲ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ರಾಜಕೀಯ ಲಾಭ ತಂದುಕೊಡುತ್ತದೆ ಎಂಬುದು ಅವರ ಭ್ರಮೆಯಾಗಿದ್ದು, ಅದು ಸದಾ ಭ್ರಮೆಯಾಗಿಯೇ ಉಳಿಯಲಿದೆ," ಎಂದರು.

ಕಾಂಗ್ರೆಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ

ಸರ್ಕಾರದ ಸಾಧನಾ ಸಮಾವೇಶದ ಯಶಸ್ಸಿನ ಬಗ್ಗೆ ಮಾತನಾಡಿದ ಅವರು, "ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶಕ್ಕೆ ಸುಮಾರು 2 ಲಕ್ಷ ಜನ ಸೇರಿದ್ದರು. ಇದು ನಮ್ಮ ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಾರೆ. ವಾಸ್ತವದಲ್ಲಿ, ನಮ್ಮ ಗ್ಯಾರಂಟಿ ಯೋಜನೆಗಳನ್ನೇ ಅವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ ಈಗಾಗಲೇ 52 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ," ಎಂದು ತಿಳಿಸಿದರು.

Tags:    

Similar News