ವೈಚಾರಿಕ - ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯವಿದೆ: ಸಿದ್ದರಾಮಯ್ಯ

ಮಾಜಿ ಪ್ರಧಾನಿ ನೆಹರೂ ತಮ್ಮ ಯೌವ್ವನದ 3,200 ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Update: 2025-11-14 13:16 GMT

ಸಿಎಂ ಸಿದ್ದರಾಮಯ್ಯನವರಿಗೆ ಶಾಲಾ ಮಕ್ಕಳು ಹಸ್ತಲಾಘನ ಮಾಡಿದರು.

Click the Play button to listen to article

ದೇಶದ ಭವಿಷ್ಯ ರೂಪಿತವಾಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ‌ ಶಿಕ್ಷಣದಿಂದಲೇ ಮೌಡ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ "ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗಿತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ 65,000 ಕೋಟಿ ರೂಪಾಯಿಗಳನ್ನು ನೀಡುತ್ತಿದೆ ಎಂದರು.

ಮಾಜಿ ಪ್ರಧಾನಿ ನೆಹರೂ ತಮ್ಮ ಯೌವ್ವನದ 3,200 ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಐಐಟಿ, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನು ಸ್ಥಾಪಿಸಿದ್ದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಪುಷ್ಪನಮನ ಸಲ್ಲಿಸಿದರು.

 

 

ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ಇಂದಿರಾ ಕಿಟ್, ಶೂ, ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು, ಪಠ್ಯ ಪುಸ್ತಕ ಹಾಗೂ ವಿದ್ಯಾರ್ಥಿವೇತನ ಸೇರಿ ಬಡವರ ಮಕ್ಕಳಿಗಾಗಿ ಸಕಲ ಸವಲತ್ತು ನೀಡಲಾಗುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ ಎಂದರು.

ಮನುಷ್ಯ ಮನುಷ್ಯನನ್ನು ಜಾತಿ, ಧರ್ಮ, ಭಾಷೆಯ ಮಿತಿ ಇಲ್ಲದೆ ಪ್ರೀತಿಸಬೇಕು. ಜಾತಿ ವ್ಯವಸ್ಥೆಯ ಆಧಾರದ ಮೇಲೆ ತಾರತಮ್ಯ ಮಾಡುವವರನ್ನು ಹತ್ತಿರಕ್ಕೆ ಸೇರಿಸದೆ, ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಸಹಿಷ್ಣತೆ ಮತ್ತು ಸಹಬಾಳ್ವೆಯನ್ನು ಪಾಲಿಸುವ ಮೂಲಕ ವೈವಿದ್ಯತೆಯಲ್ಲಿ ಏಕತೆಯನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ಕರೆ ನೀಡಿದರು.

Tags:    

Similar News