ಡಿಜಿಟಲ್‌, ಹಸಿರು ಆರ್ಥಿಕತೆಯತ್ತ ಗಮನ ಹರಿಸಲು ರಾಜ್ಯಪಾಲರ ಸಲಹೆ

ಕರ್ನಾಟಕವು ತನ್ನ ಶ್ರೀಮಂತ ಸಂಸ್ಕೃತಿ, ಜ್ಞಾನ ಸಂಪ್ರದಾಯ, ನಾವೀನ್ಯತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಮನೋಭಾವಕ್ಕೆ ಹೆಸರುವಾಸಿಯಾಗಿದೆ ಎಂದು ರಾಜ್ಯಪಾಲರು ಹೇಳಿದರು.;

Update: 2025-08-15 09:13 GMT

ರಾಜಭವನದ ಅಂಗಳದಲ್ಲಿ ಧ್ವಜಾರೋಹಣ ನೇರವೇರಿಸಿದ ರಾಜ್ಯಪಾಲರು

"ಕರ್ನಾಟಕ ಹಾಗೂ ಭಾರತ ಜಾಗತಿಕ ಮಟ್ಟದಲ್ಲಿ ನಾಯಕರಾಗಲು ಸಾಧ್ಯವಾಗುವಂತಹ ಜ್ಞಾನ, ಕೌಶಲ್ಯ ಮತ್ತು ನಾವೀನ್ಯತೆಯ ದಿಕ್ಕಿನಲ್ಲಿ ಯುವ ಸಮೂಹ ಮುಂದುವರಿಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬೆಂಗಳೂರಿನ ರಾಜಭವನ ಅಂಗಳದಲ್ಲಿ ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಿದರು.

ಭವ್ಯ ಹಾಗೂ ಸಮೃದ್ಧ ಭಾರತ ರೂಪಿಸಲು, ತಾಯ್ನಾಡಿಗೆ ಸಮರ್ಪಣಾಭಾವದಿಂದ ಸೇವೆ ಸಲ್ಲಿಸಲು ಎಲ್ಲರೂ ಪ್ರತಿಜ್ಞೆ ಮಾಡಬೇಕು. ಸ್ವತಂತ್ರ ಭಾರತದ 78 ವರ್ಷಗಳ ಅಭಿವೃದ್ಧಿ ಪ್ರಯಾಣವು ಅನೇಕ ಸಾಧನೆ ಮತ್ತು ಸವಾಲುಗಳಿಂದ ತುಂಬಿದೆ. ಕೃಷಿ, ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶ, ಶಿಕ್ಷಣ, ಆರೋಗ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದೇವೆ. ನಮ್ಮ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವ ಮೌಲ್ಯಗಳು, ನಾಗರಿಕರ ಭಾಗವಹಿಸುವಿಕೆ ಮತ್ತು ಏಕತೆಯ ಬಲದಿಂದ ಇದೆಲ್ಲವೂ ಸಾಧ್ಯವಾಗಿದೆ ಎಂದು ಹೇಳಿದರು. 

ರಾಷ್ಟ್ರೀಯ ಅಭಿವೃದ್ಧಿ ಪ್ರಯಾಣದಲ್ಲಿ ಕರ್ನಾಟಕವು ಪ್ರಮುಖ ಪಾತ್ರ ವಹಿಸಿದೆ. ಕರ್ನಾಟಕವು ತನ್ನ ಶ್ರೀಮಂತ ಸಂಸ್ಕೃತಿ, ಜ್ಞಾನ ಸಂಪ್ರದಾಯ, ನಾವೀನ್ಯತೆ ಮತ್ತು ವೈವಿಧ್ಯತೆಯಲ್ಲಿ ಏಕತೆಯ ಮನೋಭಾವಕ್ಕೆ ದೇಶಾದ್ಯಂತ ಹೆಸರುವಾಸಿಯಾಗಿದೆ. ರಾಜ್ಯದ ವಿಜ್ಞಾನಿಗಳು, ರೈತರು, ಶಿಕ್ಷಕರು, ಉದ್ಯಮಿಗಳು, ಕಲಾವಿದರು ಮತ್ತು ಯುವಕರು ದೇಶದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.

ಡಿಜಿಟಲ್ ಮತ್ತು ಹಸಿರು ಆರ್ಥಿಕತೆಯತ್ತ ನಾವು ಸಾಗುತ್ತಿದ್ದೇವೆ. ಮುಂಬರುವ ಪೀಳಿಗೆಗೆ ಬಲವಾದ, ಸಮೃದ್ಧ ಮತ್ತು ಸುರಕ್ಷಿತ ಕರ್ನಾಟಕ ಮತ್ತು ಭಾರತವನ್ನು ನಿರ್ಮಿಸುವ ಪ್ರತಿಜ್ಞೆ ಮಾಡೋಣ ಎಂದು ಹೇಳಿದರು.

ಕರ್ನಾಟಕ ಸರ್ಕಾರವು ಬಡತನ ನಿರ್ಮೂಲನೆ, ಮಹಿಳಾ ಸಬಲೀಕರಣ, ಆರೋಗ್ಯ ಮತ್ತು ಶಿಕ್ಷಣ ಸುಧಾರಣೆ, ಸಾಮಾಜಿಕ ನ್ಯಾಯ ಉತ್ತೇಜಿಸಲು ಹಲವಾರು ಕಲ್ಯಾಣ ಯೋಜನೆಗಳನ್ನು ತಂದಿದೆ. ಆರ್ಥಿಕ ಅಭಿವೃದ್ಧಿ ಉತ್ತೇಜಿಸಲು ಗೃಹ ಜ್ಯೋತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಆರೋಗ್ಯ, ಅಕ್ಷರ ಆವಿಷ್ಕಾರ, ಯುವ ನಿಧಿ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ತಂದಿದೆ.  ಅಗತ್ಯವಿರುವವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ರಾಜ್ಯಪಾಲರು ಹೇಳಿದರು.

ಕರ್ನಾಟಕ ಕ್ವಾಂಟಮ್ ಮಿಷನ್ ಮೂಲಕ ಸಂಶೋಧನೆ ಮತ್ತು ಅಭಿವೃದ್ಧಿ, ಕೌಶಲ್ಯ ಅಭಿವೃದ್ಧಿ, ಮೂಲಸೌಕರ್ಯ ಮತ್ತು ಸ್ಟಾರ್ಟ್‌ಅಪ್‌ ಉತ್ತೇಜಿಸಲು ಕೆಲಸ ಮಾಡುತ್ತಿದೆ. ಈ ಮಿಷನ್ ಕರ್ನಾಟಕವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿಯಾಗಿ ಅಭಿವೃದ್ಧಿಪಡಿಸಲು ಸಹಾಯ ಮಾಡುತ್ತದೆ. "ಹರ್ ಘರ್ ತಿರಂಗ" ಅಭಿಯಾನವು ನಮ್ಮ ರಾಷ್ಟ್ರೀಯ ಹೆಮ್ಮೆ, ಏಕತೆ ಮತ್ತು ದೇಶಭಕ್ತಿಯ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕನ ಹೃದಯದಲ್ಲಿ ರಾಷ್ಟ್ರದ ಬಗ್ಗೆ ಗೌರವ ಮತ್ತು ಜವಾಬ್ದಾರಿಯ ಭಾವನೆ ಮೂಡಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದು ಹೇಳಿದರು.

ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು.

Tags:    

Similar News