ಆರ್‌ಸಿಬಿ ವಿಜಯೋತ್ಸವದಲ್ಲಿ ಸೂತಕದ ಛಾಯೆ: ಕಾಲ್ತುಳಿತದಿಂದ ಏಳು ಮಂದಿ ಸಾವು; ಎಲ್ಲವೂ ಅಸ್ತವ್ಯಸ್ತ

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಸಾವಿರಾರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದರು. ಪೊಲೀಸ್ ಇಲಾಖೆ ಭದ್ರತೆಯ ದೃಷ್ಟಿಯಿಂದ ಕ್ರಮ ಕೈಗೊಂಡಿದ್ದರೂ, ಜನಸಂದಣಿಯ ನಿಯಂತ್ರಣ ತಪ್ಪಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ.;

Update: 2025-06-04 12:02 GMT

ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಮೊದಲ ಬಾರಿಗೆ ಟ್ರೋಫಿ ಗೆದ್ದ ಸಂಭ್ರಮಕ್ಕೆ ಕಪ್ಪುಚುಕ್ಕೆ ಬಿದ್ದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ವಿಜಯೋತ್ಸವ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ  ಏಳು ಮಂದಿ ದುರ್ಮರಣ ಹೊಂದಿದ್ದಾರೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲವರು ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದ ಆಯೋಜನೆಯಲ್ಲಿ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಸಂಪೂರ್ಣವಾಗಿ ಎಡವಿದ್ದು, ಪೊಲೀಸ್ ಇಲಾಖೆಯೂ ಜನಸಂದಣಿ ನಿಯಂತ್ರಿಸಲು ವಿಫಲವಾದ ಕಾರಣಕ್ಕೆ ಈ ದುರಂತ ಸಂಭವಿಸಿದೆ ಎಂದು ಆರೋಪಿಸಲಾಗಿದೆ.

ನಿಯಂತ್ರಣಕ್ಕೆ ಸಿಗದ ಜನಸಂದಣಿ ಮತ್ತು ಹೆಚ್ಚಿದ ಅವ್ಯವಸ್ಥೆ

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಸಾವಿರಾರು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜಮಾಯಿಸಿದ್ದರು. ಪೊಲೀಸ್ ಇಲಾಖೆ ಭದ್ರತೆಯ ದೃಷ್ಟಿಯಿಂದ ಕ್ರಮ ಕೈಗೊಂಡಿದ್ದರೂ, ಜನಸಂದಣಿಯ ನಿಯಂತ್ರಣ ತಪ್ಪಿದ ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಈ ದುರಂತದಲ್ಲಿ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಸಮೀಪದ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದು, ಕೆಲವರಿಗೆ ಕಾಲು ಮುರಿತವೂ ಉಂಟಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ಮಹಿಳೆಯರು ಹೆಚ್ಚು ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ.

ಆಯೋಜನಾ ಲೋಪಗಳೇ ದುರಂತಕ್ಕೆ ಕಾರಣ

ಪೊಲೀಸ್ ಇಲಾಖೆಯು ಈ ಕಾರ್ಯಕ್ರಮ ಆಯೋಜನೆಗೆ ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಅದಕ್ಕಿಂತ ಮೊದಲೇ ಸರ್ಕಾರ ವಿಧಾನ ಸೌಧದ ಬಳಿ ಕಾರ್ಯಕ್ರಮ ಆಯೋಜನೆಗೆ ಮುಂದಾಗಿತ್ತು. ಅದೇ ರೀತಿ, ಕೆಎಸ್ಸಿಎಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಲಾಗಿದೆ. ಒಂದೇ ಸಮಯದಲ್ಲಿ ಎರಡೆರಡು ಕಡೆ ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಿದ್ದರಿಂದ ಜನದಟ್ಟಣೆ ನಿಯಂತ್ರಣ ಪೊಲೀಸರಿಗೆ ಸುಲಭವಾಗಿರಲಿಲ್ಲ. ಈ ಆಯೋಜನಾ ಲೋಪವೇ ಹೆಚ್ಚು ಸಮಸ್ಯೆ ಉಂಟಾಗಲು ಮತ್ತು ಸಾವು-ನೋವಿಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಂಭ್ರಮದಲ್ಲಿದ್ದ ಆರ್‌ಸಿಬಿ ಅಭಿಮಾನಿಗಳ ಮನೆಯಲ್ಲಿ ಈಗ ದುಃಖ ಮಡುಗಟ್ಟಿದ್ದು, ಈ ದುರಂತಕ್ಕೆ ಸರ್ಕಾರ ಮತ್ತು ಆಯೋಜಕರ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

Tags:    

Similar News