ತೆರಿಗೆ ಹಂಚಿಕೆಯಲ್ಲಿ ತಾರತಮ್ಯದಿಂದಾಗಿ ರಾಜ್ಯಕ್ಕೆ 80 ಸಾವಿರ ಕೋಟಿ ರೂ. ನಷ್ಟ

ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸಬೇಕು ಎಂದು ಕೇಂದ್ರಕ್ಕೆ ಸಿಎಂ ಮನವಿ ಮಾಡಿದರು.;

Update: 2025-06-24 14:26 GMT

ತೆರಿಗೆ ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, 15ನೇ ಹಣಕಾಸು ಆಯೋಗದ ಅವಧಿಯಲ್ಲಿ 80 ಸಾವಿರ ಕೋಟಿ ರೂಪಾಯಿ  ರಾಜ್ಯಕ್ಕೆ ನಷ್ಟವಾಗಿದೆ.

ಈ ವಿಷಯವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಕುರಿತು ಚರ್ಚೆ ನಡೆಸಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಪ್ರತಿಪಾದಿಸಬೇಕು ಎಂದು ಮನವಿ ಮಾಡಿದ್ದಾರೆ.

15ನೇ ಹಣಕಾಸು ಆಯೋಗವು ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ  ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.23ರಷ್ಟು ಕಡಿಮೆಯಾಗಿದೆ. ಅಲ್ಲದೇ, 15 ನೇ ಹಣಕಾಸು ಆಯೋಗವು ರಾಜ್ಯಕ್ಕೆ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂಪಾಯಿ ವಿಶೇಷ ಅನುದಾನವು ಸಿಗದ ಕಾರಣ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ 80 ಸಾವಿರ ಕೋಟಿಗಳು ರಾಜ್ಯಕ್ಕೆ ನಷ್ಟವಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ವಿವರಿಸಿದ್ದಾರೆ. 

15ನೇ ಹಣಕಾಸು ಆಯೋಗವು ರಾಜ್ಯಗಳ ನಡುವೆ ತೆರಿಗೆ ಹಂಚಿಕೆಯ ಸೂತ್ರವನ್ನು ಲೆಕ್ಕಮಾಡಲು ಆದಾಯ-ದೂರ ಮಾನದಂಡದ ಮೇಲೆ ಅತಿಯಾಗಿ ಅವಲಂಬಿಸಿದ ಕಾರಣ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಹೆಚ್ಚಿನ ನಷ್ಟವಾಯಿತು. 15 ನೇ ಹಣಕಾಸು ಆಯೋಗವು ಆದಾಯ-ದೂರ ಮಾನದಂಡಕ್ಕೆ ಶೇ.45ರಷ್ಟು ಅಂಕವನ್ನು ನೀಡಿತ್ತು. ರಾಜ್ಯಕ್ಕೆ ಇದರಿಂದ ಉಂಟಾದ ನಷ್ಟವನ್ನು ತಪ್ಪಿಸುವ ಸಲುವಾಗಿ ಆದಾಯ-ದೂರ ಮಾನದಂಡದ ಅಂಕವನ್ನು ಶೇ.20 ರಷ್ಟು ಕಡಿಮೆ ಮಾಡಿ, ದೇಶದ ಪ್ರಗತಿಗೆ ರಾಜ್ಯಗಳು ನೀಡುವ ಕೊಡುಗೆಯನ್ನು ಪರಿಗಣಿಸಬೇಕು ಹಾಗೂ ಇದಕ್ಕೆ ಶೇ.20 ರಷ್ಟು ಅಂಕವನ್ನು ನೀಡಬೇಕು ಎಂದು ವಾದಿಸಿದ್ದಾರೆ.

ಹಣಕಾಸು ಆಯೋಗವು ಶಿಫಾರಸು ಮಾಡುವ ರಾಜಸ್ವ ಕೊರತೆ ಅನುದಾನಗಳನ್ನು ನಿಲ್ಲಿಸಲು ವಿನಂತಿಸಲಾಗಿದೆ. ಅವು ವಿತ್ತೀಯ ಹೊಣೆಗಾರಿಕೆ ಅಧಿನಿಯಮದ ಚೌಕಟ್ಟಿನಲ್ಲಿ ಪ್ರಸ್ತಾಪಿಸಲಾದ ಆರ್ಥಿಕ ಶಿಸ್ತಿನ ತತ್ವಗಳಿಗೆ ವಿರುದ್ಧವಾಗಿವೆ. 15ನೇ ಹಣಕಾಸು ಆಯೋಗವು, ಒಟ್ಟು ಕೇಂದ್ರ ಸ್ವೀಕೃತಿಗಳ ಶೇ.1.92 ರಷ್ಟನ್ನು ರಾಜಸ್ವ ಕೊರತೆ ಅನುದಾನಗಳೆಂದು ಶಿಫಾರಸ್ಸು ಮಾಡಿತ್ತು. ಆದ್ದರಿಂದ ಕೇಂದ್ರ ಸರ್ಕಾರದ ಒಟ್ಟು ಸ್ವೀಕೃತಿಗಳ ಶೇ.1.92 ರಷ್ಟು ಮೊತ್ತವನ್ನು ತೆರಿಗೆ ಹಂಚಿಕೆಯ ಸೂತ್ರದ ಆಧಾರದ ಮೇಲೆ ಎಲ್ಲಾ ರಾಜ್ಯಗಳಿಗೂ ಹಂಚಿಕೆ ಮಾಡಬೇಕು ಎಂದು  ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ.

ಬೆಂಗಳೂರು, ಕಲ್ಯಾಣ ಕರ್ನಾಟಕ ಮತ್ತು ಮಲೆನಾಡು ಪ್ರದೇಶದ ಅಭಿವೃದ್ಧಿ ಸವಾಲುಗಳನ್ನು ಸಹ ಹಣಕಾಸು ಸಚಿವರ ಮುಂದೆ ಪ್ರಸ್ತಾಪಿಸಲಾಯಿತು.  ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು ನ್ಯಾಯಯುತ ಮತ್ತು ಬೆಳವಣಿಗೆಗೆ ಪೂರಕವಾಗುವ ತೆರಿಗೆ ಹಂಚಿಕೆಯ ಅವಶ್ಯಕತೆಯನ್ನು ಮನವರಿಕೆ ಮಾಡಿದ್ದಾರೆ.


Tags:    

Similar News