ಡಿ ಕೆ ಶಿವಕುಮಾರ್‌ಗೆ ಸಂಕಷ್ಟ |‌ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ರದ್ದತಿ ಮನವಿ ವಜಾ

Update: 2024-07-15 09:45 GMT

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ತಮ್ಮ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿರುವ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ರದ್ದು ಕೋರಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ (ಪಿಸಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಡಿ ಕೆ ಶಿವಕುಮಾರ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಸೋಮವಾರ ನಡೆಯಿತು. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಎಸ್‌ಸಿ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠವು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಹಾಗಾಗಿ ಈ ಅರ್ಜಿಯನ್ನು ವಜಾಗೊಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ, ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಅನುಮತಿ ಪಡೆಯದೆ ತನಿಖೆ ಆರಂಭಿಸಲಾಗಿದೆ. 2018 ರ ತಿದ್ದುಪಡಿಯ ದಿನಾಂಕದ ಮೊದಲು ಸೆಕ್ಷನ್ 17 ಎ ಸೇರಿಸಲಾದ ಅಪರಾಧಗಳಿಗೆ ಸೆಕ್ಷನ್ 17 ಎ ಅನ್ವಯಿಸುತ್ತದೆಯೇ ಎಂಬ ವಿಷಯವನ್ನು ಘನ ಪೀಠಕ್ಕೆ ಉಲ್ಲೇಖಿಸಲಾಗಿದೆ ಎಂದು ಅವರು ಚಂದ್ರಬಾಬು ನಾಯ್ಡು ಪ್ರಕರಣದ ತೀರ್ಪನ್ನು ಉಲ್ಲೇಖಿಸಿದರು.

ವಾದ- ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ತ್ರಿವೇದಿ ಅವರು, ಭಿನ್ನ ತೀರ್ಪಿನ ಆಧಾರದ ಮೇಲೆ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಉತ್ತರಿಸಿದರು. ಮುಕುಲ್ ರೋಹಟಗಿ ಅವರು ಅರ್ಜಿಯ ಕುರಿತು ನೋಟಿಸ್ ಜಾರಿ ಮಾಡುವಂತೆ ಮನವಿ ಮಾಡುತ್ತಿರುವುದಾಗಿ ತಿಳಿಸಿದರು. ಆದರೆ, ಪೀಠ ಇದಕ್ಕೆ ನಿರಾಸಕ್ತಿ ವ್ಯಕ್ತಪಡಿಸಿತು.

ವಾದ ಮುಂದುವರಿಸಿದ ರೋಹಟಗಿ, ‘ಡಿಕೆ ಶಿವಕುಮಾರ್ ಅವರಿಂದ 41 ಲಕ್ಷ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ನ್ಯಾಯಮೂರ್ತಿ ತ್ರಿವೇದಿ ಹೇಳಿದ್ದಾರೆ. ಆದಾಯ ತೆರಿಗೆ ಕಾಯಿದೆಯಡಿ ವಿಚಾರಣೆಯಲ್ಲಿ ಇದು ಆರೋಪವಾಗಿದೆ. ಇದೇ ವಿಚಾರದಲ್ಲಿ ಸಿಬಿಐ ಎಫ್‌ಐಆರ್‌ ಹಾಕಲು ಸಾಧ್ಯವಿಲ್ಲ" ಎಂದು ಪ್ರತಿಪಾದಿಸಿದರು. ಇದಕ್ಕೆ ಒಪ್ಪದ ನ್ಯಾಯಮೂರ್ತಿ ತ್ರಿವೇದಿ, "ಈ ಪ್ರಕರಣ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರತ್ಯೇಕ ಅಪರಾಧಕ್ಕೆ ಸಂಬಂಧಿಸಿದ್ದು, ಆದಾಯ ತೆರಿಗೆ ಅಧಿಕಾರಿಗಳು ಪಿಸಿ ಆಕ್ಟ್ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಾಧ್ಯವಿಲ್ಲʼʼ ಎಂದು ಹೇಳಿದರು.

ಪ್ರಕರಣದ ಹಿನ್ನಲೆ?

ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಡಿಕೆ ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದರು. ಆ ಸಂದರ್ಭದಲ್ಲಿ ಅಂದರೆ 2013 ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪ ಹೊರಿಸಿತ್ತು.

2017ರಲ್ಲಿ ಡಿಕೆ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು. ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

Tags:    

Similar News