ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣ: 300 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ ಸಿಐಡಿ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳ ತಂಡ 300 ಪುಟಗಳ ಚಾರ್ಜ್​ಶೀಟ್ ಅನ್ನು ಶಿವಮೊಗ್ಗ ಕೋರ್ಟ್​​ಗೆ ಸಲ್ಲಿಸಿದ್ದಾರೆ.

Update: 2024-08-22 10:04 GMT
ಕರ್ನಾಟಕ ಮಹರ್ಷಿ ವಾಲ್ಮೀಕಿ ನಿಗಮ

ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಿಐಡಿ ಅಧಿಕಾರಿಗಳ ತಂಡ 300ಪುಟಗಳ ಚಾರ್ಜ್​ಶೀಟ್ ಅನ್ನು ಶಿವಮೊಗ್ಗ ಕೋರ್ಟ್​​ಗೆ ಸಲ್ಲಿಸಿದೆ.

ವಾಲ್ಮೀಕಿ ನಿಗಮದ ಅಧಿಕಾರಿಗಳಾದ ಪದ್ಮನಾಭ, ಪರುಶುರಾಮ್ ಅವರ ಒತ್ತಡದಿಂದ ಮನನೊಂದು ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿ ಸಿಐಡಿ ಚಾರ್ಜ್​ಶೀಟ್ ನಲ್ಲಿ ಉಲ್ಲೇಖಿಸಿದೆ. 

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಂದ್ರಶೇಖರ್ ಪತ್ನಿ ನೀಡಿದ್ದ ದೂರು ಆಧರಿಸಿ ಸಿಐಡಿ ತನಿಖೆ ನಡೆಸಿತ್ತು. ಡೆತ್​​ನೋಟ್ ಆಧರಿಸಿ ತನಿಖೆ ಮಾಡಿರುವ ಸಿಐಡಿ ಅಧಿಕಾರಿಗಳ ತಂಡ, ಇದೀಗ ಕೇವಲ ಪದ್ಮನಾಭ, ಪರುಶುರಾಮ್ ಆರೋಪಿಗಳನ್ನಾಗಿ ಹೆಸರಿಸಿ ಚಾರ್ಜ್​​ಶೀಟ್ ಸಲ್ಲಿಸಿದೆ. ಈ ಹಿಂದೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಪ್ರಾಥಮಿಕ ಆರೋಪ ಪಟ್ಟಿಯಲ್ಲೂ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಬಸನಗೌಡ ದದ್ದಲ್‌ ಅವರ ಹೆಸರು ಉಲ್ಲೇಖಿಸಿರಲಿಲ್ಲ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಹಣದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿತ್ತು. ಬ್ಯಾಂಕ್‌ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮಾ.22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆ ಮಾಡಲಾಗಿತ್ತು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಚಂದ್ರಶೇಖರನ್ ಆತ್ಮಹತ್ಯೆಗೂ ಮೊದಲು ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಿಗಮದ ಅಧಿಕಾರಿಗಳ ವಿರುದ್ಧ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದರು. ಈ ಮೂಲಕ ಹಗರಣ ಬೆಳಕಿಗೆ ಬಂದಿತ್ತು. 

Tags:    

Similar News