ವಾಲ್ಮೀಕಿ ನಿಗಮ ಹಗರಣ | ನಕಲಿ ಖಾತೆ ತೆರೆದಿದ್ದ ಆರೋಪಿ ಬಂಧನ

ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

Update: 2024-06-12 06:26 GMT
ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿ ಹಣ ಜಪ್ತಿ ಮಾಡಿದ್ದಾರೆ.
Click the Play button to listen to article

ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ನಕಲಿ ಖಾತೆ ತೆರೆದಿದ್ದ ಆರೋಪಿಯನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ನಕಲಿ ಖಾತೆ ತೆರೆದ ಆರೋಪದಲ್ಲಿ ಸತ್ಯನಾರಾಯಣ ವರ್ಮ ಎಂಬಾತನನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ. ಈತ ವಿವಿಧ ಕಂಪೆನಿಗಳ ಹೆಸರಿನಲ್ಲಿ 18 ಬ್ಯಾಂಕ್ ಖಾತೆ ತೆರೆದಿದ್ದ. ಎಲ್ಲಾ 18 ಬ್ಯಾಂಕ್ ಖಾತೆಗಳಿಗೂ ವಾಲ್ಮೀಕಿ ನಿಗಮದಿಂದ ಹಣ ವರ್ಗಾವಣೆ ಆಗಿತ್ತು.

ಅಕೌಂಟ್ ನಂಬರ್ ಪರಿಶೀಲನೆ ವೇಳೆ ನಕಲಿ ಖಾತೆ ತೆರೆದಿರುವುದು ಖಚಿತವಾಗಿತ್ತು. ಇದರ ಬೆನ್ನಲ್ಲೇ ನಕಲಿ ಖಾತೆ ತೆರೆದ ವ್ಯಕ್ತಿ ಬಗ್ಗೆ ಮಾಹಿತಿ ಸಂಗ್ರಹಿಸಿದ್ದ ಎಸ್​ಐಟಿ, ಆತನ ಪತ್ತೆಗೆ ಬಲೆ ಬೀಸಿತ್ತು. ಬಂಧಿತ ಸತ್ಯನಾರಾಯಣ ಬಳಿಯಿಂದ 16 ಕೆಜಿ ಚಿನ್ನ, 10 ಕೋಟಿ ನಗದು ಜಪ್ತಿ ಮಾಡಲಾಗಿದೆ. ಬುಧವಾರ ಸತ್ಯನಾರಾಯಣನನ್ನು ಎಸ್​ಐಟಿ ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ಬ್ಯಾಂಕ್ ಖಾತೆಯಿಂದ 18 ಖಾತೆಗಳಿಗೆ ಬರೋಬ್ಬರಿ 94.73 ಕೋಟಿ ರೂಪಾಯಿ ಅಕ್ರಮವಾಗಿ ವರ್ಗಾವಣೆಯಾಗಿತ್ತು. ಎಂಜಿ ರಸ್ತೆಯ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಿಂದ ಹಣ ವರ್ಗಾವಣೆಯಾಗಿತ್ತು. ಈ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ಹಗರಣ ಸಂಬಂಧ ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪ್ತ ಎನ್ನಲಾದ ನಾಗರಾಜ್ ನೆಕ್ಕುಂಟಿ, ನಾಗೇಶ್ವರ್ ರಾವ್ ಎಂಬುವವರನ್ನು ಈಗಾಗಲೇ ಎಸ್‌ಐಟಿ ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದೆ.

ಈಗಾಗಲೇ ಹಗರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗ ಕಲ್ಯಾಣ ಖಾತೆಯ ಸಚಿವ ಬಿ ನಾಗೇಂದ್ರ ರಾಜೀನಾಮೆ ನೀಡಿದ್ದು, ನಿಗಮದ ಅಧ್ಯಕ್ಷ ಹಾಗೂ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ವಿರುದ್ಧವೂ ಆರೋಪ ಕೇಳಿಬಂದಿದೆ.

Tags:    

Similar News