ಹಿರಿಯ ನಟ ಬ್ಯಾಂಕ್ ಜನಾರ್ಧನ್ ಇನ್ನಿಲ್ಲ ; 800ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ
ಬೆಂಗಳೂರಿನ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಬ್ಯಾಂಕ್ ಜನಾರ್ಧನ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.;
ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ (76) ಸೋಮವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಸೋಮವಾರ ಮುಂಜಾನೆ 2.30ರ ಸುಮಾರಿಗೆ ನಿಧನರಾದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಬೆಂಗಳೂರಿನ ಸುಲ್ತಾನ್ ಪಾಳ್ಯದ ನಿವಾಸದಲ್ಲಿ ಬ್ಯಾಂಕ್ಪಾ ಜನಾರ್ಧನ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.
1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದ ಬ್ಯಾಂಕ್ ಜನಾರ್ಧನ್ಅವರು, 1985ರಲ್ಲಿ ‘ಪಿತಾಮಹ’ ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟರು.
‘ಬೆಟ್ಟದ ತಾಯಿ’, ‘ಪೊಲೀಸ್ ಹೆಂಡತಿ’, ‘ಶ್..’, ‘ತರ್ಲೆ ನನ್ಮಗ’ ಹೀಗೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. 2016ರಿಂದ ಚಿತ್ರರಂಗದಲ್ಲಿ ಅಷ್ಟಾಗಿ ಕಾಣಿಸಿಕೊಂಡಿರಲಿಲ್ಲ. 2022ರ ‘ಮಠ’ ಹಾಗೂ 2023ರ ‘ಉಂಡೇನಾಮ’ ಚಿತ್ರದಲ್ಲಿ ನಟಿಸಿದ್ದರು.
ಜನಾರ್ಧನ್ ಅವರು ಹೊಳಲ್ಕೆರೆ ಸಮೀಪದ ಬ್ಯಾಂಕ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಆಗಲೇ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಅವರ ನಾಟಕವನ್ನು ವೀಕ್ಷಿಸಿದ ಧೀರೇಂದ್ರ ಗೋಪಾಲ್ ಅವರು ಬೆಂಗಳೂರಿಗೆ ಬರುವಂತೆ ಹೇಳಿದ್ದರು. ಒಂದೂವರೆ ವರ್ಷದ ನಂತರ ಜನಾರ್ಧನ್ ಅವರು ಬೆಂಗಳೂರಿಗೆ ಬಂದರು. ಅವರು ‘ಊರಿಗೆ ಉಪಕಾರಿ’ ಸಿನಿಮಾದಲ್ಲಿ ವಜ್ರಮುನಿ ಬಾಡಿಗಾರ್ಡ್ ಪಾತ್ರ ಮಾಡಿದರು. ವಿಷ್ಣುವರ್ಧನ್ ಅವರು ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಇದ್ದರು. ಜನಾರ್ಧನ್ ಅವರು ಸುಮಾರು 800ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಾಟಕಗಳಿಂದ ಆರಂಭವಾದ ಕಲಾ ಬದುಕು ನಂತರ ಸಿನಿಮಾಗಳತ್ತ ಹೊರಳಿತು. ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿಕೊಂಡೇ ಅವರು ಸಮಯ ಕಳೆದರು. ನಂತರದ ದಿನಗಳಲ್ಲಿ ದೊಡ್ಡ ಆಫರ್ಗಳು ಬಂದು ಚಿತ್ರರಂಗದಲ್ಲಿ ಬಹು ಬೇಡಿಕೆಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು.