ವೋಟ್‌ ಚೋರಿ, ಗದ್ದಿ ಚೋಡ್‌; ನ್ಯಾಯಸಮ್ಮತ ಚುನಾವಣೆಗಾಗಿ ಅಭಿಯಾನ-ಡಿಕೆಶಿ

ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ವಿರುದ್ಧ ಜನಜಾಗೃತಿ ಮೂಡಿಸಲು ಬೀದಿಗಿಳಿದು ಹೋರಾಟ ನಡೆಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

Update: 2025-12-14 10:10 GMT

ದೆಹಲಿಯಲ್ಲಿ ಪಿಸಿಸಿ ಅಧ್ಯಕ್ಷರೊಂದಿಗೆ ಡಿಕೆ ಶಿವಕುಮಾರ್‌

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸುವ ಉದ್ದೇಶದಿಂದಲೇ ಮತಕಳ್ಳತನದ ವಿರುದ್ಧ ಹೋರಾಟ ನಡೆಸಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮತಕಳ್ಳತನ ವಿರೋಧಿ ಹೋರಾಟ ಆರಂಭಿಸಲಾಗಿತ್ತು. ಇದೀಗ ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಯುತ್ತಿದೆ. ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯಬೇಕು. ಆದರೆ, ಇತ್ತೀಚೆಗೆ ಚುನಾವಣೆಗಳು ನ್ಯಾಯಸಮ್ಮತವಾಗಿಲ್ಲ, ಮತಕಳ್ಳತನ ನಡೆಯುತ್ತಿದೆ ಎಂಬುದಕ್ಕೆ ಸಾವಿರಾರು ಉದಾಹರಣೆಗಳಿವೆ ಎಂದು ಆರೋಪಿಸಿದರು.

ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ವೋಟ್‌ ಚೋರಿ ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆ ಬಹಿರಂಗಗೊಳಿಸಿದ್ದಾರೆ. ಆದರೂ, ಚುನಾವಣಾ ಆಯೋಗದಿಂದ ಸಮರ್ಪಕ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ವಿರುದ್ಧ ಜನಜಾಗೃತಿ ಮೂಡಿಸಲು ಬೀದಿಗಿಳಿದು ಹೋರಾಟ ನಡೆಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಿಂದ 4 ಸಾವಿರ ಕಾರ್ಯಕರ್ತರು ಭಾಗಿ

ದೆಹಲಿ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸಿರುವ 1500 ಕಾರ್ಯಕರ್ತರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ. ಇನ್ನೂ 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮದೇ ವ್ಯವಸ್ಥೆಯಲ್ಲಿ ಬಂದಿದ್ದಾರೆ. ಕೆಲವರು ವಿಮಾನದಲ್ಲಿ, ಮತ್ತೆ ಕೆಲವರು ರೈಲಿನಲ್ಲಿ ಆಗಮಿಸಿದ್ದಾರೆ. ಒಟ್ಟು 3500ರಿಂದ 4000 ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಮತಕಳ್ಳತನ ವಿರೋಧಿ ಸಹಿಸಂಗ್ರಹ ಅಭಿಯಾನದಲ್ಲಿ ರಾಜ್ಯದಲ್ಲಿ 1.42 ಕೋಟಿ ಸಹಿ ಸಂಗ್ರಹಿಸಲಾಗಿದೆ ಎಂದು ಹೇಳಿದರು.

ದೆಹಲಿಗೆ ಬರುತ್ತಿರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆ ಎಂದು ಆರೋಪಿಸಿದ ಅವರು, ದೆಹಲಿ ಪ್ರವೇಶಕ್ಕೆ ಅವಕಾಶ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಏಕೆ ಗಾಬರಿಯಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ನಮ್ಮ ಧ್ವನಿಯನ್ನು ಯಾರೂ ಅಡಗಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಕಚೇರಿಗೆ ಬರುವಂತೆ ಆಹ್ವಾನ ದೊರೆತಿದೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಅಲ್ಲಿಂದ ಬಸ್ ಮೂಲಕ ರಾಮಲೀಲಾ ಮೈದಾನಕ್ಕೆ ತೆರಳಲಾಗುತ್ತದೆ. ಚಳಿ ವಾತಾವರಣಕ್ಕೆ ಅನುಕೂಲವಾಗುವಂತೆ ಕಾರ್ಯಕರ್ತರಿಗೆ ವಿಶೇಷ ಟೀ-ಶರ್ಟ್‌ಗಳನ್ನು ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್‌ ಅವರು, ಅಮಿತ್‌ ಶಾ ತಮ್ಮ ಇಷ್ಟಕ್ಕೆ ಏನು ಬೇಕಾದರೂ ಮಾತನಾಡುತ್ತಾರೆ. ಕಾಂಗ್ರೆಸ್ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದುಕೊಡಲು ಹಿರಿಯರು ಅಪಾರ ತ್ಯಾಗ ಮಾಡಿದ್ದಾರೆ. ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಪ್ರಾಣ ಅರ್ಪಿಸಿದ್ದಾರೆ. ಜವಾಹರಲಾಲ್ ನೆಹರು, ಮಹಾತ್ಮ ಗಾಂಧಿ ಸೇರಿದಂತೆ ಅನೇಕರು ಜೈಲು ವಾಸ ಅನುಭವಿಸಿದ್ದಾರೆ. ಪಕ್ಷ ಸಂಕಷ್ಟದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷರಾಗಿದ್ದಾರೆ ಎಂದು ಹೇಳಿದರು.

Tags:    

Similar News