ಮನೆ ಹಂಚಿಕೆಗೆ ಹಣ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಸಚಿವ ಜಮೀರ್‌ ಅಹಮದ್‌

ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ ಅದಕ್ಕೆ ನಮ್ಮ ಇಲಾಖೆಯಲ್ಲಿ ಅವಕಾಶವಿಲ್ಲ ಎಂದು ಸಚಿವ ಜಮೀರ್‌ ಅಹಮದ್‌ ತಿಳಿಸಿದರು.;

Update: 2025-06-24 11:03 GMT

ಮಾಧ್ಯಮಗೋಷ್ಠಿಯಲ್ಲಿ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿದರು.

ಬಡವರಿಗೆ ಮನೆ ಹಂಚಿಕೆ ಮಾಡಲು ನಾನು ಹಣ ಪಡೆದಿರುವುದು ಸಾಬೀತು ಮಾಡಿದರೆ ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಡಲು ಸಿದ್ಧ ಎಂದು ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ.

ಮಂಗಳವಾರ(ಜೂ.24) ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಕೊಡುವ ಮನೆಗೆ ಹಣ ಪಡೆದು ಬದುಕುವ ದರಿದ್ರ ನನಗೆ ಬಂದಿಲ್ಲ. ಬಡವರ ಮನೆಗೆ ಹಣ ಪಡೆಯುವುದು ಅಕ್ಷಮ್ಯ ಅಪರಾಧ ಅದಕ್ಕೆ ನಮ್ಮ ಇಲಾಖೆಯಲ್ಲಿ ಅವಕಾಶವಿಲ್ಲ ಎಂದು ತಿಳಿಸಿದರು.

ಹಿರಿಯ ಶಾಸಕ ಬಿ. ಆರ್. ಪಾಟೀಲ್ ಅವರು ಹಣ ಪಡೆದು ಮನೆಗಳನ್ನು ಹಂಚಲಾಗಿದೆ ಎಂದು ಆರೋಪ ಮಾಡಿದ್ದಾರೆ. ಸಚಿವರು, ಅಧಿಕಾರಿಗಳ ಹೆಸರು ಸಹ ಹೇಳಿಲ್ಲ. ಪಂಚಾಯಿತಿಯಲ್ಲಿ ಯಾರಾದರೂ ಹಣ ಪಡೆದಿದ್ದರೆ ಮಾಹಿತಿ ನೀಡಲಿ. ಈ ಸಂಬಂಧ ತನಿಖೆಗೆ ಆದೇಶಿಸಲಾಗುವುದು. ಯಾರಾದರೂ ತಪ್ಪು ಮಾಡಿದ್ದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಶಾಸಕರೊಂದಿಗೆ ಮಾತನಾಡುತ್ತೇನೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಈ ವಿಚಾರದ ಬಗ್ಗೆ ಎಲ್ಲ ಮಾಹಿತಿ ತಿಳಿಸಿದ್ದೇನೆ. ನಾನು ಪ್ರವಾಸದಲ್ಲಿದ್ದ ಕಾರಣ ಮಾತನಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ತಿಳಿಸಿದರು.

ಶಾಸಕರ ಪತ್ರದ ಆಧಾರದಲ್ಲೇ ಮನೆ ಹಂಚಿಕೆ

ಶಾಸಕ ಬೇಳೂರು ಗೋಪಾಲಕೃಷ್ಣ ರಾಜೀನಾಮೆ ಗೆ ಆಗ್ರಹ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರಿಗೆ ವಾಸ್ತವ ಬಗ್ಗೆ ಮಾಹಿತಿ ಇಲ್ಲ. ಮನೆ ಹಂಚಿಕೆ ವಿಚಾರದಲ್ಲಿ ನಮ್ಮ ಪಾತ್ರವೇ ಇರುವುದಿಲ್ಲ. ಫಲಾನುಭವಿ ಆಯ್ಕೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯುತ್ತದೆ. ಶಾಸಕರ ಪತ್ರದ ಆಧಾರದಲ್ಲೇ ಮನೆ ಹಂಚಿಕೆ ಮಾಡಲಾಗುವುದು. ಆಳಂದ ಕ್ಷೇತ್ರಕ್ಕೂ ಬಿ. ಆರ್. ಪಾಟೀಲ್ ಅವರ ಪತ್ರದ ಆಧಾರದಲ್ಲೇ  950 ಮನೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.

ಶಾಸಕ ಬಿ.ಆರ್. ಪಾಟೀಲ್ ಮಾಡಿದ ಭ್ರಷ್ಟಾಚಾರದ ಆರೋಪಗಳೇನು?

ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರು ತಮ್ಮದೇ ಸರ್ಕಾರದ ಆಡಳಿತದ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳನ್ನು ಮಾಡಿದ್ದರು. ಬಳಿಕ ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡಿರುವ ಪಾಟೀಲ್, "ನಾನೇನು ಹೇಳಬೇಕೋ ಅದನ್ನು ಹೇಳಿದ್ದೇನೆ, ಮುಖ್ಯಮಂತ್ರಿಗಳು ಏನು ಮಾಡುತ್ತಾರೆ ಗೊತ್ತಿಲ್ಲ," ಎಂದು ತಿಳಿಸಿದ್ದಾರೆ.

ಎಲ್ಲಾ ಸರ್ಕಾರಗಳಲ್ಲಿ ಭ್ರಷ್ಟಾಚಾರ ಇರುತ್ತದೆ ಎಂಬುದನ್ನು ಪಾಟೀಲ್ ಒಪ್ಪಿಕೊಂಡಿದ್ದಾರೆ. ಆದರೆ, "ನಾವು ಜನಪರವಾಗಿ ಆಡಳಿತ ಕೊಡುತ್ತೇವೆ ಎಂದು ಹೇಳಿ ಅಧಿಕಾರಕ್ಕೆ ಬಂದಿದ್ದೇವೆ. ಆದರೆ ಇಂತಹ ಭ್ರಷ್ಟಾಚಾರ ಆಗಬಾರದಿತ್ತು," ಎಂದು ವಿಷಾದ ವ್ಯಕ್ತಪಡಿಸಿದ್ದರು, ಶಾಸಕರು ತಮ್ಮ ಕ್ಷೇತ್ರದ ನಿರ್ದಿಷ್ಟ ಉದಾಹರಣೆಗಳನ್ನು ನೀಡಿದ್ದು, "ನನ್ನ ಕ್ಷೇತ್ರದಲ್ಲಿ ಐದಾರು ಪಂಚಾಯಿತಿಗಳಲ್ಲಿ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಕೆಲವು ಪಂಚಾಯಿತಿ ಅಧ್ಯಕ್ಷರು ಹೋಗಿ ತಮಗೆ ಬೇಕಾದಂತೆ ಕೆಲಸ ಮಾಡಿಸಿಕೊಂಡು ಬಂದಿದ್ದಾರೆ," ಎಂದು ನೇರವಾಗಿ ಆರೋಪಿಸಿದ್ದರು.

ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸರ್ಕಾರದ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು ನನ್ನ ಕ್ಷೇತ್ರಕ್ಕೆ ಮನೆಗಳನ್ನು ಕೊಡಿ ಎಂದು ವಸತಿ ಇಲಾಖೆಗೆ ನಾಲ್ಕು ಪತ್ರಗಳನ್ನು ಬರೆದಿದ್ದೆ, ಆದರೆ ಇಲ್ಲಿಯವರೆಗೂ ಒಂದೂ ಕೆಲಸ ಆಗಿಲ್ಲ," ಎಂದು ಅಸಾಹಯಕತೆ ವ್ಯಕ್ತಪಡಿಸಿದ್ದರು. 

Tags:    

Similar News