Air India plane crash | ವಿಮಾನ ಅಫಘಾತದಲ್ಲಿ ಮೃತಪಟ್ಟ ಮಾಜಿ ಸಿಎಂ ವಿಜಯ್ ರೂಪಾನಿ ಸಂಬಂಧಿಕರ ಭೇಟಿಯಾದ ಮೋದಿ
ಹತ್ತು ನಿಮಿಷಗಳ ಅಂತರದಲ್ಲಿ ಏರ್ ಇಂಡಿಯಾ ವಿಮಾನವನ್ನು ತಪ್ಪಿಸಿಕೊಂಡಿದ್ದ ಯುವತಿ
ಅಹಮದಾಬಾದ್ ವಿಮಾನ ನಿಲ್ದಾಣದ ರಸ್ತೆಯಲ್ಲಿ ಸಂಚಾರ ದಟ್ಟಣೆಯಿಂದಾಗಿ ಹತ್ತು ನಿಮಿಷಗಳ ಅಂತರದಲ್ಲಿ ಏರ್ ಇಂಡಿಯಾ ವಿಮಾನವನ್ನು ತಪ್ಪಿಸಿಕೊಂಡಿದ್ದ ಭೂಮಿ ಚೌಹಾಣ್ ಎಂಬ ಯುವತಿ ಮಾತನಾಡಿದ್ದು, "ನಾನು ಲಂಡನ್ಗೆ ತೆರಳಬೇಕಿತ್ತು. ಆದರೆ ಹತ್ತು ನಿಮಿಷ ತಡವಾಗಿ ವಿಮಾನ ನಿಲ್ದಾಣಕ್ಕೆ ಹೋಗಿದ್ದರಿಂದ ಅಧಿಕಾರಿಗಳು ನನ್ನನ್ನು ವಿಮಾನ ಹತ್ತಲು ಬಿಡಲಿಲ್ಲ. ಇದರಿಂದ ಬೇಸರವಾಗಿತ್ತು. ಆದರೆ ಕೆಲವೇ ನಿಮಿಷಗಳಲ್ಲಿ ವಿಮಾನ ಪತನವಾದ ಸುದ್ದಿ ಕೇಳಿ ಕೈ ಕಾಲುಗಳು ನಡುಗಲಾರಂಭಿಸಿದವು. ನನಗೆ ಏನು ಮಾಡಬೇಕೆಂದು ತಿಳಿಯದಾಗಿತ್ತು" ಎಂದಿದ್ದಾರೆ.
ಏರ್ ಇಂಡಿಯಾ ವಿಮಾನ ಸ್ಪೋಟಗೊಂಡ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್
ಅಹಮದಾಬಾದ್ನಲ್ಲಿ ನಡೆದ ವಿಮಾನ ಅಪಘಾತದಲ್ಲಿ 265 ಮಂದಿ ಮೃತಪಟ್ಟಿದ್ದು ಹಲವು ಮಂದಿ ಗಾಯಗೊಂಡಿದ್ದಾರೆ. ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಸೆಕೆಂಡುಗಳಲ್ಲಿ ವೈದ್ಯಕೀಯ ವಸತಿ ನಿಲಯಕ್ಕೆ ಅಪ್ಪಳಿಸಿ ಸ್ಫೋಟಗೊಂಡ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮೊಹಮ್ಮದ್ ಸುಹೈಬ್ ರಜಾ ಎಂಬುವವರು ತಮ್ಮ ʼಎಕ್ಸ್ʼ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣ ಖಾತೆಗಳ ಪ್ರೊಫೈಲ್ಗಳನ್ನು ಕಪ್ಪು ಬಣ್ಣಕ್ಕೆ ಬದಲಿಸಿದ ಏರ್ ಇಂಡಿಯಾ
ಅಹಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ಕನಿಷ್ಠ 265 ಮಂದಿ ಮೃತಪಟ್ಟಿದ್ದಾರೆ. ಈ ಭೀಕರ ಘಟನೆ ಬೆನ್ನಲ್ಲೇ ಏರ್ ಇಂಡಿಯಾ ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಾದ ಎಕ್ಸ್ ಖಾತೆ, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಪ್ರೊಫೈಲ್ ಚಿತ್ರವನ್ನು ಕಪ್ಪು ಐಕಾನ್ಗೆ ಬದಲಾಯಿಸಿದೆ. ಹಾಗೂ ವಿಮಾನಯಾನ ಸಂಸ್ಥೆಯು ತನ್ನ ವೆಬ್ಸೈಟ್ನ ಮುಖಪುಟವನ್ನು ಕಪ್ಪು ಮತ್ತು ಬಿಳಿ ಬಣ್ಣಕ್ಕೆ ಬದಲಾಯಿಸಿದೆ.
ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಅಹಮದಾಬಾದ್ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ಅಪಘಾತವಾದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ವೈದ್ಯಕೀಯ ಕಾಲೇಜಿನ ವಸತಿ ನಿಲಯದ ಮೇಲೆ ವಿಮಾನ ಸ್ಪೋಟಗೊಂಡ ಪರಿಣಾಮ 5 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದ್ದು ಇದೀಗ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.