ದೆಹಲಿ ಸ್ಫೋಟ ಪ್ರಕರಣ: ತನಿಖೆ ಎನ್ಐಎಗೆ ವರ್ಗಾವಣೆ, ಕೇಂದ್ರ ಗೃಹ ಸಚಿವಾಲಯ ಆದೇಶ
ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಹ್ಯುಂಡೈ ಐ20 ಕಾರು ಸ್ಫೋಟಗೊಂಡಿತ್ತು.
ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸಂಭವಿಸಿದ ಭೀಕರ ಕಾರು ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು (MHA) ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ವರ್ಗಾಯಿಸಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ.
ಸೋಮವಾರ ಸಂಜೆ ನಡೆದ ಈ ಸ್ಫೋಟದಲ್ಲಿ 12 ಮಂದಿ ಮೃತಪಟ್ಟಿದ್ದು, ಇದೊಂದು ಭಯೋತ್ಪಾದಕ ಕೃತ್ಯ ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ, ಪ್ರಕರಣದ ಆಳವಾದ ಮತ್ತು ಸಮಗ್ರ ತನಿಖೆಗಾಗಿ ಅದನ್ನು ಎನ್ಐಎಗೆ ಹಸ್ತಾಂತರಿಸಿದೆ. ದೆಹಲಿ ಪೊಲೀಸರು ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಉನ್ನತ ಮಟ್ಟದ ಭದ್ರತಾ ಸಭೆ
ಸ್ಫೋಟದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜಧಾನಿ ದೆಹಲಿ ಮತ್ತು ದೇಶದ ಇತರ ಸೂಕ್ಷ್ಮ ಪ್ರದೇಶಗಳಲ್ಲಿನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ಪರಿಶೀಲನೆಯ ಕೆಲವೇ ಗಂಟೆಗಳಲ್ಲಿ, ತನಿಖೆಯನ್ನು ಎನ್ಐಎಗೆ ವರ್ಗಾಯಿಸುವ ಆದೇಶ ಹೊರಬಿದ್ದಿದೆ. ಇದೇ ವೇಳೆ, ಅಮಿತ್ ಶಾ ಅವರು ಮಂಗಳವಾರ ಮಧ್ಯಾಹ್ನ ಮತ್ತೊಂದು ಉನ್ನತ ಮಟ್ಟದ ಭದ್ರತಾ ಸಭೆಯನ್ನು ನಡೆಸಿದ್ದಾರೆ. "ತನಿಖಾ ಸಂಸ್ಥೆಗಳು ಪ್ರಕರಣದ ಆಳಕ್ಕೆ ಇಳಿದು ಪರಿಶೀಲನೆ ನಡೆಸಲಿವೆ" ಎಂದು ಶಾ ಅವರು ಸಭೆಯ ನಂತರ ಹೇಳಿದ್ದಾರೆ.
ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಹ್ಯುಂಡೈ ಐ20 ಕಾರು ಸ್ಫೋಟಗೊಂಡಿತ್ತು. ಈ ದುರ್ಘಟನೆಯಲ್ಲಿ 12 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು.