ಹೈದರಾಬಾದ್‌ನ ಚಾರ್‌ಮಿನಾರ್ ಬಳಿ ಅಗ್ನಿ ದುರಂತ: 17 ಮಂದಿ ದುರ್ಮರಣ

ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ, ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಕುರಿತು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.;

Update: 2025-05-18 08:15 GMT

ಹೈದರಾಬಾದ್‌ನ ಐತಿಹಾಸಿಕ ಚಾರ್‌ಮಿನಾರ್ ಸಮೀಪದ ಕಟ್ಟಡವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಕಟ್ಟಡದೊಳಗೆ ಸಿಲುಕಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಈ ದುರಂತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಬೆಳಗ್ಗೆ ಸುಮಾರು 6:30ರ ಸುಮಾರಿಗೆ ಅಗ್ನಿಶಾಮಕ ದಳಕ್ಕೆ ಬೆಂಕಿ ಅವಘಡದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಹೈದರಾಬಾದ್‌ನ ಹಳೆ ನಗರದಲ್ಲಿರುವ ಗುಲ್ಜಾರ್ ಹೌಸ್‌ಗೆ ಧಾವಿಸಿದರು. ಈ ಘಟನೆಗೆ ತೀವ್ರ ದುಃಖ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ, "ಘಟನೆ ತಿಳಿದು ಅತೀವ ಬೇಸರವಾಗಿದೆ. ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಕುರಿತು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರೊಂದಿಗೆ ಚರ್ಚಿಸುತ್ತೇನೆ" ಎಂದು ತಿಳಿಸಿದ್ದಾರೆ.

ಮೃತಪಟ್ಟ 17 ಜನರಲ್ಲಿ ಕೆಲವರನ್ನು ಗುರುತಿಸಲಾಗಿದ್ದು, ಅವರಲ್ಲಿ ಅಭಿಷೇಕ್ ಮೋದಿ (30), ರಾಜೇಂದರ್ ಕುಮಾರ್ (67), ಮುನ್ನಿಬಾಯಿ (72), ಸುಮಿತ್ರಾ (65), ಇರಾಜ್ (2), ಅರುಷ್ ಜೈನ್ (17), ಹರ್ಷಾಲಿ ಗುಪ್ತಾ (7) ಮತ್ತು ಶೀತಜ್ ಜೈನ್ (37) ಸೇರಿದ್ದಾರೆ. ರಕ್ಷಣಾ ತಂಡವು ಈಗಾಗಲೇ 15-20 ಜನರನ್ನು ಸುರಕ್ಷಿತವಾಗಿ ರಕ್ಷಿಸಿದೆ.

ಘಟನೆಯ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದು, ಐಜಿ ನಾಗಿರೆಡ್ಡಿ ಅವರಿಗೆ ಸ್ಥಳದಲ್ಲೇ ಇದ್ದು ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸಲು ಆದೇಶಿಸಿದ್ದಾರೆ.

Tags:    

Similar News