ಸಂಪುಟ ಪುನಾರಚನೆ ಕಸರತ್ತು: ದೆಹಲಿಯಲ್ಲಿ ಬೀಡುಬಿಟ್ಟ 'ಕೈ' ನಾಯಕರು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ
ಸಿಎಂ ಕಾನೂನು ಸಲಹೆಗಾರ ಎಸ್. ಪೊನ್ನಣ್ಣ, ಆಳಂದ ಶಾಸಕ ಬಿ.ಆರ್. ಪಾಟೀಲ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿಎಂ ಆಪ್ತ ಅಶೋಕ್ ಪಟ್ಟಣ್, ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವು ಶಾಸಕರು ಸಿಎಂ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ನವದೆಹಲಿಯ ಕರ್ನಾಟಕ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಹಾಗೂ ಶಾಸಕರು ಭೋಜನ ಸೇವಿಸಿದರು.
ಕರ್ನಾಟಕ ಸಚಿವ ಸಂಪುಟ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರುತ್ತಿದ್ದಂತೆ, ರಾಜ್ಯ ರಾಜಕೀಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ, ಸಚಿವರು ಮತ್ತು ಶಾಸಕರ ದಂಡೇ ದೆಹಲಿಯಲ್ಲಿ ಬೀಡುಬಿಟ್ಟಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಸಚಿವ ಸ್ಥಾನ ಉಳಿಸಿಕೊಳ್ಳಲು ಹಾಲಿ ಸಚಿವರು ಮತ್ತು ಹೊಸದಾಗಿ ಸಚಿವರಾಗಲು ಆಕಾಂಕ್ಷಿಗಳು ತಮ್ಮ ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರುವ ತಂತ್ರದಲ್ಲಿ ನಿರತರಾಗಿದ್ದಾರೆ.
ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಲವು ಶಾಸಕರು ಮತ್ತು ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿಯಾಗಿ ಮಾತುಕತೆ ನಡೆಸಿದರು. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಡಬಾರದೆಂದು ಕೆಲವು ಹಾಲಿ ಸಚಿವರು ಸಿಎಂ ಮೇಲೆ ಒತ್ತಡ ಹೇರಿದರೆ, ಇತ್ತ ಹೊಸ ಆಕಾಂಕ್ಷಿಗಳು ತಮ್ಮ ಹಿರಿತನ, ಜಾತಿ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಮುಂದಿಟ್ಟುಕೊಂಡು ಸಚಿವ ಸ್ಥಾನಕ್ಕೆ ಪಟ್ಟುಹಿಡಿದಿದ್ದಾರೆ.
ಸಚಿವ ಸ್ಥಾನಕ್ಕಾಗಿ ದಂಬಾಲು ಬಿದ್ದ ಆಕಾಂಕ್ಷಿಗಳು
ಹೊಸದಾಗಿ ಸಚಿವ ಸ್ಥಾನ ಪಡೆಯಲು ಹಲವು ಶಾಸಕರು ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ, ಆಳಂದ ಶಾಸಕ ಬಿ.ಆರ್. ಪಾಟೀಲ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಸಿಎಂ ಆಪ್ತ ಹಾಗೂ ಶಾಸಕ ಅಶೋಕ್ ಪಟ್ಟಣ್, ಮತ್ತು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಅನೇಕರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ತಾವು ಪಕ್ಷಕ್ಕೆ ಸಲ್ಲಿಸಿದ ಸೇವೆ ಮತ್ತು ತಮ್ಮ ಹಿರಿತನವನ್ನು ಪರಿಗಣಿಸಿ ಅವಕಾಶ ನೀಡಬೇಕೆಂದು ಈ ಶಾಸಕರು ಬಲವಾಗಿ ಪ್ರತಿಪಾದಿಸಿದ್ದಾರೆ.
ಕರ್ನಾಟಕ ಭವನದಲ್ಲಿ ಭೋಜನಕೂಟ
ಸೋಮವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸಚಿವರು ಮತ್ತು ಶಾಸಕರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ವಿಧಾನಪರಿಷತ್ ಸದಸ್ಯ ಎಂ.ಆರ್. ಸೀತಾರಾಂ ಸೇರಿದಂತೆ ಹಲವು ಹಿರಿಯ ನಾಯಕರು ಮತ್ತು ಶಾಸಕರು ಹಾಜರಿದ್ದರು. ಇದು ಕೇವಲ ಭೋಜನಕೂಟವಾಗಿರದೆ, ಸಂಪುಟ ಪುನಾರಚನೆಯ ಬಗ್ಗೆ ಅನೌಪಚಾರಿಕ ಚರ್ಚೆ ನಡೆಸುವ ವೇದಿಕೆಯೂ ಆಗಿತ್ತು ಎನ್ನಲಾಗಿದೆ. ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ವಿಷಯಗಳ ಬಗ್ಗೆ ಚರ್ಚಿಸಿದ ನಂತರ, ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಸಂಪುಟ ಪುನಾರಚನೆಯ ಅಂತಿಮ ಪಟ್ಟಿಯ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.