New Delhi Stampede: ದೆಹಲಿ ರೈಲು ನಿಲ್ದಾಣ ಕಾಲ್ತುಳಿತ; ಪ್ರಾಥಮಿಕ ವರದಿಯಲ್ಲಿ ಏನಿದೆ?
New Delhi Stampede: ರೈಲ್ವೆ ಪ್ರತಿ ಗಂಟೆಗೆ 1,500 ಸಾಮಾನ್ಯ ಟಿಕೆಟ್ಗಳನ್ನು ಮಾರಾಟ ಮಾಡಿದೆ. ಇದರಿಂದಾಗಿ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಕಷ್ಟವಾಗಿದೆ.;
ನವದೆಹಲಿ: ಇಲ್ಲಿ ರೈಲ್ವೆ ನಿಲ್ದಾಣದಲ್ಲಿ ಕುಂಭ ಮೇಳಕ್ಕೆ ಹೊರಟಿದ್ದವರ ಸಂಖ್ಯೆ ಹೆಚ್ಚಾಗಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ಘಟನೆ ಮತ್ತೊಂದು ಬಾರಿ ದೇಶವನ್ನು ಶೋಕದಲ್ಲಿ ಮುಳುಗಿಸಿದೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಘಟನೆ ಬಗ್ಗೆ ತನಿಖಾ ವರದಿ ಹೊರಬಿದ್ದಿದ್ದು, ಅತಿ ಹೆಚ್ಚು ಟಿಕೆಟ್ ಮಾರಾಟವೇ ಈ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ಜನರನ್ನು ನಿಯಂತ್ರಿಸುವಲ್ಲಿ ರೈಲ್ವೆ ಇಲಾಖೆ ವಿಫಲವಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸಾವಿರಾರು ಭಕ್ತರು ಹೊರಟಿದ್ದರು. ಅವರು ರೈಲುಗಳಿಗಾಗಿ ಕಾಯುತ್ತಿದ್ದರು. ಅತಿ ಹೆಚ್ಚಿನ ಜನ ಸಂದಣಿಯಿಂದಾಗಿ ನೂಕು ನುಗ್ಗಲಾಗಿ ಕಾಲ್ತುಳಿತ ಸಂಭವಿಸಿದೆ. ರೈಲ್ವೆ ಪ್ರತಿ ಗಂಟೆಗೆ 1,500 ಸಾಮಾನ್ಯ ಟಿಕೆಟ್ಗಳನ್ನು ಮಾರಾಟ ಮಾಡಿದೆ. ಇದರಿಂದಾಗಿ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಕಷ್ಟವಾಗಿದೆ. ಪ್ಲಾಟ್ಫಾರ್ಮ್ ಸಂಖ್ಯೆ 14 ಮತ್ತು ಪ್ಲಾಟ್ಫಾರ್ಮ್ ಸಂಖ್ಯೆ 16 ರ ಬಳಿಯ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ.
10 ಲಕ್ಷ ರೂ ಪರಿಹಾರ ಘೋಷಣೆ
ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಇಲಾಖೆಯು ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಇಲಾಖೆ ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ.
ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.