ಮೈಸೂರು ಸ್ಯಾಂಡಲ್ ಸೋಪಿಗೆ ತಮನ್ನಾ ರಾಯಭಾರಿ: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸಮರ್ಥನೆ
ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಕೆಲವು ಪ್ರಶ್ನೆಗಳು ಎದ್ದಿವೆ.;
ಮೈಸೂರು ಸ್ಯಾಂಡಲ್ ಸೋಪಿಗೆ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿರುವುದಕ್ಕೆ ತೀವ್ರ ಅಪಸ್ವರ ವ್ಯಕ್ತವಾದ ಹಿನ್ನೆಲೆಯಲ್ಲಿ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಕೆಲವು ಪ್ರಶ್ನೆಗಳು ಎದ್ದಿದ್ದವು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ತಮನ್ನಾ ಅವರ ವರ್ಚಸ್ಸು, ಡಿಜಿಟಲ್ ಪ್ರಸ್ತುತಿ ಮತ್ತು ಯುವಜನರೊಂದಿಗೆ ಅವರ ಸಂಪರ್ಕ ಇವುಗಳನ್ನು ಮಾತ್ರ ಪರಿಗಣಿಸಲಾಗಿದೆ ಎಂದು ಹೇಳಿದರು.
ಕೆಎಸ್ಡಿಎಲ್ನ ಪ್ರಗತಿ ಮತ್ತು ಭವಿಷ್ಯದ ಗುರಿ
ಕೆಎಸ್ಡಿಎಲ್ ಕಳೆದ ಸಾಲಿನಲ್ಲಿ 1,785 ಕೋಟಿ ರೂಪಾಯಿ ವಹಿವಾಟು ನಡೆಸಿದೆ. ಇದರಲ್ಲಿ ಕರ್ನಾಟಕದ ಪಾಲು ಶೇಕಡಾ 18ರಷ್ಟಿದ್ದು, ಉಳಿದದ್ದು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಮಹಾರಾಷ್ಟ್ರದಿಂದ ಬಂದಿದೆ. ಸಂಸ್ಥೆಯ ವಹಿವಾಟನ್ನು 2030ರ ವೇಳೆಗೆ 5,000 ಕೋಟಿ ರೂಪಾಯಿಗೆ ಕೊಂಡೊಯ್ಯುವ ಗುರಿ ಇಟ್ಟುಕೊಂಡು ದಾಪುಗಾಲು ಹಾಕುತ್ತಿದೆ. ಇಂತಹ ಸಂದರ್ಭದಲ್ಲಿ ಮಾರುಕಟ್ಟೆ ತಂತ್ರವೇ ಮುಖ್ಯವಾಗುತ್ತದೆ ಎಂದು ಅವರು ಪ್ರತಿಪಾದಿಸಿದರು. ಇದು ಮಾರುಕಟ್ಟೆ ಪರಿಣತರ ಸಮಿತಿಯ ತೀರ್ಮಾನವಾಗಿದೆ ಎಂದು ಅವರು ಹೇಳಿದರು.
ಬ್ರ್ಯಾಂಡ್ ರಾಯಭಾರಿ ಆಯ್ಕೆ ಪ್ರಕ್ರಿಯೆ
ನಾವು ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ, ಪೂಜಾ ಹೆಗಡೆ, ಕಿಯಾರಾ ಅಡ್ವಾಣಿ ಅವರನ್ನೂ ಪರಿಗಣಿಸಿ ನೋಡಿದೆವು. ಆದರೆ, ತಮನ್ನಾ ಅವರು ಡಿಜಿಟಲ್ ಲೋಕದಲ್ಲಿ 2.8 ಕೋಟಿ ಫಾಲೋಯರ್ಸ್ಗಳನ್ನು ಹೊಂದಿದ್ದು ಉಳಿದವರಿಗಿಂತ ಮುಂದಿದ್ದಾರೆ. ಜತೆಗೆ ಅವರು ಅಖಿಲ ಭಾರತ ಮಟ್ಟದ ವರ್ಚಸ್ಸು ಹೊಂದಿದ್ದಾರೆ. ಹೀಗಾಗಿ ಅವರನ್ನೇ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಳ್ಳಲಾಗಿದೆ. ಇದು ಕೆಎಸ್ಡಿಎಲ್ ಸಂಸ್ಥೆಗೆ ನಾವು ತರುತ್ತಿರುವ ಸಮಗ್ರ ಪರಿವರ್ತನೆಯಲ್ಲಿ ಕೇವಲ ಒಂದು ಅಂಶವಷ್ಟೇ ಎಂದು ಸಚಿವರು ವಿವರಿಸಿದರು.
ಕೆಎಸ್ಡಿಎಲ್ನ ಉದ್ಯೋಗಿಗಳು ಕನ್ನಡಿಗರೇ ಆಗಿದ್ದು, ಬರುವ ಲಾಭಾಂಶದಲ್ಲಿ ಶೇಕಡಾ 30ರಷ್ಟನ್ನು ಸರ್ಕಾರಕ್ಕೆ ನೀಡಲಾಗುತ್ತಿದೆ. ಈಗ ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದ್ದು, ಇದಕ್ಕಾಗಿ 435 ವಿತರಕರನ್ನು ಹೊಸದಾಗಿ ನೇಮಿಸಿಕೊಳ್ಳಲಾಗಿದೆ. ಜತೆಗೆ, ಇ-ಕಾಮರ್ಸ್ ಮೂಲಕ 500 ಕೋಟಿ ರೂಪಾಯಿ ವಹಿವಾಟು ನಡೆಸುವ ಮತ್ತು ರಫ್ತಿನಿಂದ 150 ಕೋಟಿ ರೂಪಾಯಿ ಗಳಿಸುವ ಗುರಿ ಹೊಂದಿದ್ದೇವೆ ಎಂದು ಪಾಟೀಲ್ ಪ್ರತಿಪಾದಿಸಿದರು.
ಒಂದು ಸರ್ಕಾರಿ ಸಂಸ್ಥೆ ಹೊಸ ಘಟಕವನ್ನು ವಿಜಯಪುರದಲ್ಲಿ ಆರಂಭಿಸುವ ಹಂತಕ್ಕೆ ಹೋಗುತ್ತಿದೆ ಎನ್ನುವುದೇ ಹೆಮ್ಮೆಯ ವಿಷಯ. ಹೀಗೆ ಮಾಡಿದ ನಂತರ ಅದನ್ನು ವಿಶ್ವಮಟ್ಟಕ್ಕೆ ತೆಗೆದುಕೊಂಡು ಹೋಗಬೇಕಾಗಿದೆ. ಹಾಗೆಯೇ ಬ್ರ್ಯಾಂಡಿಂಗ್ ಹೆಚ್ಚಿಸಲು ಪ್ಯಾಕಿಂಗ್ ಬದಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಕೆಎಸ್ಡಿಎಲ್ ಅಧ್ಯಕ್ಷರ ಸಮರ್ಥನೆ
ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಸಹ ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ. "109 ವರ್ಷಗಳ ಇತಿಹಾಸವಿರುವ ಕೆಎಸ್ಡಿಎಲ್ ಕರ್ನಾಟಕದ ಹೆಮ್ಮೆಯ ಉದ್ಯಮವಾಗಿದೆ. ಇದಕ್ಕೆ ಸಂಪೂರ್ಣ ಹೊಸತನದ ಸ್ಪರ್ಶ ನೀಡುತ್ತಿದ್ದು, ಉತ್ತರ ಭಾರತ ಮತ್ತು ವಿದೇಶಗಳಲ್ಲೂ ಮಾರುಕಟ್ಟೆ ವಿಸ್ತರಣೆ ಮಾಡಲಾಗುತ್ತಿದೆ. ಇದರಲ್ಲಿ ಗೆಲ್ಲಬೇಕೆಂದರೆ ನಾವು ಅದಕ್ಕೆ ತಕ್ಕಂತೆ ಕಾರ್ಯತಂತ್ರ ರೂಪಿಸಬೇಕು. ತಮನ್ನಾ ಅವರನ್ನು ಬ್ರ್ಯಾಂಡ್ ಅಂಬಾಸಿಡರ್ ಮಾಡಿಕೊಂಡಿರುವುದು ಇದಕ್ಕೆ ತಕ್ಕ ಒಂದು ಉಪಕ್ರಮವಷ್ಟೆ. ಇದನ್ನು ಯಾರೂ ತಪ್ಪಾಗಿ ಭಾವಿಸಬಾರದು" ಎಂದು ಅವರು ಹೇಳಿದರು.